ಆಗಸ್ಟ್ 27ರಂದು ಕರ್ನಾಟಕದಲ್ಲಿ ರೈಲು ಸಂಚಾರವಿಲ್ಲ
ಹುಬ್ಬಳ್ಳಿ, ಆಗಸ್ಟ್ 17 : ಮಹದಾಯಿ ಯೋಜನೆ ಜಾರಿ ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಆ.27ರಂದು ರೈಲ ತಡೆ ನಡೆಸಲಾಗುತ್ತದೆ. ಆದ್ದರಿಂದ, ಅಂದು ಜನರು ಪ್ರಯಾಣಿಕರು ರೈಲು ನಿಲ್ದಾಣಕ್ಕೆ ಬರಬಾರದು ಎಂದು ಮನವಿ ಮಾಡಲಾಗಿದೆ.
ಹುಬ್ಬಳ್ಳಿಯಲ್ಲಿ ಬುಧವಾರ ಮಾತನಾಡಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಆಗಸ್ಟ್ 27ರಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ರಾಜ್ಯಾದ್ಯಂತ ರೈಲು ತಡೆದು ಪ್ರತಿಭಟನೆ ನಡೆಸಲಾಗುವುದು' ಎಂದು ಹೇಳಿದರು.[ಮಹದಾಯಿ ವಿವಾದ, ಮೋದಿಗೆ ಸಿದ್ದರಾಮಯ್ಯ ಪತ್ರ]
'ಅಂದು ರಾಜ್ಯಾದ್ಯಂತ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ಆದ್ದರಿಂದ, ಪ್ರಯಾಣಿಕರು ರೈಲು ನಿಲ್ದಾಣಕ್ಕೆ ಬರಬೇಡಿ ಎಂದು ಮನವಿ ಮಾಡಿದರು. ಈ ಪ್ರತಿಭಟನೆಗೆ ಬೆಂಬಲ ನೀಡುವಂತೆ ರೈಲ್ವೆ ಇಲಾಖೆ, ರೈಲ್ವೆ ಕಾರ್ಮಿಕ ಒಕ್ಕೂಟ, ರೈಲ್ವೆ ಕನ್ನಡ ಸಂಘಕ್ಕೆ ಮನವಿ ಮಾಡಲಾಗುವುದು' ಎಂದರು.[ಮಾತುಕತೆ ಮೂಲಕ ಮಹದಾಯಿ ವಿವಾದಕ್ಕೆ ತೆರೆ?]
'ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಬಗೆಹರಿಸಲು ಸರ್ವ ಪಕ್ಷ ನಿಯೋಗ ಪ್ರಧಾನಮಂತ್ರಿಗಳನ್ನು ಮತ್ತೊಮ್ಮೆ ಭೇಟಿಯಾಗಿ ಮನವಿ ಮಾಡಬೇಕು. ಯಮನೂರಿನಲ್ಲಿ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣದಲ್ಲಿ ರೈತರ ಮೇಲೆ ಹಾಕಿರುವ ಕೇಸ್ ಗಳನ್ನು ಹಿಂಪಡೆಯಬೇಕು' ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು.[ಕಳಸಾ ಬಂಡೂರಿ ಯೋಜನೆ, ವಿವಾದ ಮತ್ತು ನಾವು]
7.65 ಟಿಎಂಸಿ ನೀರನ್ನು ಮಹದಾಯಿ ನದಿ ಪಾತ್ರದಿಂದ ಮಲಪ್ರಭ ನದಿಗೆ ಹರಿಸಿಕೊಂಡು ಕುಡಿಯುವ ನೀರು ಪೂರೈಕೆ ಮಾಡಲು ಬಳಸಿಕೊಳ್ಳಲು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮಹದಾಯಿ ನ್ಯಾಯಮಂಡಳಿ ತಿರಸ್ಕರಿಸಿತ್ತು.[ಮಹದಾಯಿ ನೀರು ಹಂಚಿಕೆ : ಅಂದಿನಿಂದ ಇಂದಿನವರೆಗೆ]
ಮಹದಾಯಿ ನ್ಯಾಯಮಂಡಳಿ ತೀರ್ಪು ವಿರೋಧಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಜುಲೈ 30ರಂದು ಕರ್ನಾಟಕ ಬಂದ್ ಸಹ ನಡೆದಿತ್ತು. ಸದ್ಯ, ಕರ್ನಾಟಕ ಸರ್ಕಾರ ಮುಂದಿನ ಕಾನೂನು ಹೋರಾಟದ ಬಗ್ಗೆ ಚಿಂತನೆ ನಡೆಸುತ್ತಿದೆ.