ಯಡಿಯೂರಪ್ಪ ಸಾರ್ವಜನಿಕ ಜೀವನದಲ್ಲಿರಲು ನಾಲಾಯಕ್: ಸಿದ್ದರಾಮಯ್ಯ
Recommended Video
ಹುಬ್ಬಳ್ಳಿ, ಫೆಬ್ರವರಿ 11: ಶಾಸಕರ ಖರೀದಿ ಪ್ರಯತ್ನಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ಆಡಿಯೋ ಸಿಡಿಯಲ್ಲಿರುವ ಧ್ವನಿ ತಮ್ಮದೇ ಎಂದು ಸಾಬಿತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೇಳಿದ್ದ ಬಿ.ಎಸ್. ಯಡಿಯೂರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ನೈತಿಕತೆ ಇಲ್ಲ. ಅವರು ಸಾರ್ವಜನಿಕ ಜೀವನದಲ್ಲಿ ಇರಲು ನಾಲಾಯಕ್. ಆಡಿಯೋ ವಿಚಾರದಲ್ಲಿ ತಮ್ಮ ಧ್ವನಿಯನ್ನು ಮಿಮಿಕ್ರಿ ಮಾಡಲಾಗಿದೆ ಎಂದು ಹೇಳಿದ್ದರು. ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ ಎಂದು ಸವಾಲು ಹಾಕಿದ್ದರು. ಈಗ ಅದು ನನ್ನದೇ ಧ್ವನಿ ಎಂದು ಒಪ್ಪಿಕೊಳ್ಳುತ್ತಿದ್ದಾರೆ. ಅವರು ರಾಜೀನಾಮೆ ನೀಡಲಿ ಎಂದಿದ್ದಾರೆ.
ಯಡಿಯೂರಪ್ಪ ರಾಜೀನಾಮೆ ಯಾವಾಗ ಎಂದು ಪ್ರಶ್ನಿಸಿದ ಕಾಂಗ್ರೆಸ್
ಮುಖ್ಯಮಂತ್ರಿ ಆಗಿದ್ದ ಅವರು ಈಗ ಶಾಸಕರನ್ನು ಕೊಂಡುಕೊಳ್ಳಲು ಹೊರಟಿದ್ದಾರೆ ಎಂದು ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಯಡಿಯೂರಪ್ಪ ಅವರು ಗುರುಮಿಠಕಲ್ ಶಾಸಕ ನಾಗನಗೌಡ ಅವರ ಮಗ ಶರಣಗೌಡ ಅವರ ಬಳಿ ತಂದೆಗೆ ಸಚಿವ ಸ್ಥಾನ ಮತ್ತು 10 ಕೋಟಿ ರೂಪಾಯಿ ಹಣ ನೀಡುವುದಾಗಿ ಆಮಿಷವೊಡ್ಡುವ ಆಡಿಯೋ ಅನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದರು.
ಈ ಧ್ವನಿ ತಮ್ಮದಲ್ಲ. ಮಿಮಿಕ್ರಿ ಮಾಡಲಾಗಿದೆ. ಆರೋಪ ಸಾಬೀತಾದರೆ ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಯಡಿಯೂರಪ್ಪ ಸವಾಲು ಹಾಕಿದ್ದರು. ಆದರೆ, ಭಾನುವಾರದ ಬೆಳವಣಿಗೆಯಲ್ಲಿ ಯಡಿಯೂರಪ್ಪ ಅದು ತಮ್ಮದೇ ಧ್ವನಿ ಎಂದು ಒಪ್ಪಿಕೊಂಡಿದ್ದರು.
ಕುದುರೆ ವ್ಯಾಪಾರ ಅಲ್ಲವಾ?
ಬಿಎಸ್ ಯಡಿಯೂರಪ್ಪ ಅವರು, 10 ಕೋಟಿ ರೂಪಾಯಿ ನಿಮ್ಮ ಅಪ್ಪನಿಗೆ ಕೊಡ್ತೀವಿ. ಅವರನ್ನು ಮಂತ್ರಿ ಮಾಡುತ್ತೇವೆ ಎಂದು ಗುರುಮಿಠಕಲ್ ಶಾಸಕ ನಾಗನಗೌಡ ಅವರ ಮಗ ಶರಣಗೌಡ ಅವರಿಗೆ ಆಮಿಷ ಒಡ್ಡಿದ್ದರು. ಅಲ್ಲದೆ, ಮುಂದಿನ ಚುನಾವಣೆಯಲ್ಲಿ ಪಕ್ಷದಿಂದ ನಿನಗೂ ಟಿಕೆಟ್ ಕೊಡಿಸುತ್ತೇವೆ ಎಂದು ಭರವಸೆ ನೀಡಿದ್ದರು. ಇದು ಕುದುರೆ ವ್ಯಾಪಾರ ಅಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಶಾಸಕರ ಅನರ್ಹತೆಗೆ ಮನವಿ
ಪಕ್ಷ ಹಲವು ಬಾರಿ ನೋಟಿಸ್ ನೀಡಿದ್ದರೂ ಸಿಎಲ್ಪಿ ಸಭೆ ಮತ್ತು ಸದನದ ಕಲಾಪಕ್ಕೆ ಹಾಜರಾಗದ ನಾಲ್ವರು ಅತೃಪ್ತ ಶಾಸಕರನ್ನು ಅನರ್ಹತೆ ಮಾಡುವಂತೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ಪೀಕರ್ಗೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.
ಸೋಮವಾರ ಬೆಳಿಗ್ಗೆ 11 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಲು ಸಿದ್ದರಾಮಯ್ಯ ಸಮಯ ನಿಗಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಎಲ್ಲ ಎಚ್ಚರಿಕೆಗಳನ್ನು ಕಡೆಗಣಿಸಿ ಗೈರು ಹಾಜರಾದ ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಮನವಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಆಡಿಯೋದಲ್ಲಿರುವ ಧ್ವನಿ ನನ್ನದೇ : ಯಡಿಯೂರಪ್ಪ
ಮೋದಿ ವಿರುದ್ಧ ವಾಗ್ದಾಳಿ
ನಿನ್ನೆ ಹುಬ್ಬಳ್ಳಿಗೆ ಬಂದಿದ್ದ ಚೌಕಿದಾರ ರಫೇಲ್ ಡೀಲ್ ಬಗ್ಗೆ ಮಾತನಾಡಿಲ್ಲ. ಆದರೆ, ರಾಜ್ಯದ ಸಾಲಮನ್ನಾ ಬಗ್ಗೆ ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.
ಮೋದಿ ಅವರೇಕೆ ರೈತರ ಸಾಲಮನ್ನಾ ಮಾಡಿಲ್ಲ. ಸಾಲಮನ್ನಾ ಮಾಡುವಂತೆ ಎರಡು ಬಾರಿ ನಿಯೋಗ ತೆರಳಿದ್ದೆವು. ಆದರೆ, ಇದುವರೆಗೂ ಸಾಲಮನ್ನಾ ಮಾಡಿಲ್ಲ. ನಾವು ಈ ಬಾರಿಯ ಬಜೆಟ್ನಲ್ಲಿ ಸಾಲಮನ್ನಾಕ್ಕೆ ಹಣ ಮೀಸಲಿಟ್ಟಿದ್ದೇವೆ. ಮೋದಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಎಚ್ಡಿಕೆ ಆಡಿಯೋ ಅಸ್ತ್ರಕ್ಕೆ ಪ್ರತಿಯಾಗಿ ಬಿಜೆಪಿಯಿಂದ ವಿಡಿಯೋ ಬಾಂಬ್
ಯಡಿಯೂರಪ್ಪ ವಿಡಿಯೋ ಅಸ್ತ್ರ
ಈ ಹಿಂದೆ ಜೆಡಿಎಸ್ನಲ್ಲಿದ್ದ ವಿಜುಗೌಡ ಅವರನ್ನು ಎಂಎಲ್ಸಿಯನ್ನಾಗಿ ಮಾಡಲು ಕುಮಾರಸ್ವಾಮಿ 25 ಕೋಟಿ ಕೇಳಿದ್ದರು ಎಂದು ಬಿಜೆಪಿ ಆರೋಪಿಸಿತ್ತು. ಈ ಆಮಿಷದ ವಿಡಿಯೋವನ್ನು ಸೋಮವಾರ ಸಭಾಧ್ಯಕ್ಷರಿಗೆ ನೀಡುವುದಾಗಿ ಬಿಜೆಪಿ ಬಾಂಬ್ ಹಾಕಿತ್ತು. ಈಗ ಬಿಜೆಪಿಯಲ್ಲಿರುವ ವಿಜುಗೌಡ ಅವರು ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದಾರೆ. ಮಾಜಿ ಸ್ಪೀಕರ್ ಬೋಪಯ್ಯ ಅವರನ್ನು ಸಹ ಯಡಿಯೂರಪ್ಪ ತಮ್ಮ ನಿವಾಸಕ್ಕೆ ಕರೆಯಿಸಿಕೊಂಡಿದ್ದು, ಮುಂದಿನ ನಡೆ ಬಗ್ಗೆ ಚರ್ಚಿಸುತ್ತಿದ್ದಾರೆ.