ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ: ಮೂರು ತಿಂಗಳ ಬಳಿಕ ವಿಚಾರಣೆ ಚುರುಕು
ಹುಬ್ಬಳ್ಳಿ, ಜುಲೈ 11: ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ತನಿಖೆಯನ್ನು ಚುರುಕುಗೊಳಿಸಿದೆ. ಶಂಕಿತರನ್ನು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದು, ಪೊಲೀಸ್ ಆಯುಕ್ತರು ಕೂಡ ಶಹರ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐದು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು ಎಲ್ಲ ಆಯಾಮಾಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಸುಮಾರು ಮೂರು ನಾಲ್ಕು ತಿಂಗಳ ಹಿಂದೆಯೇ ನಡೆದಿರುವ ಪ್ರಕರಣ ಈಗ ಗಂಭೀರತೆ ಪಡೆದುಕೊಂಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಸಂತೋಷ ಬಾಬು ಮಾತನಾಡಿದ್ದು, ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಪ್ರಕರಣ ಎರಡು ವಿಡಿಯೋ ಮೂಲಕ ನಮ್ಮ ಗಮನಕ್ಕೆ ಬಂದಿದೆ. ಈಗಾಗಲೇ ಐದು ಜನ ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ .ಯಾರೇ ಕೃತ್ಯದಲ್ಲಿ ಭಾಗಿಯಾಗಿದ್ದರೂ ಕಾನೂನು ಕ್ರಮಗಳನ್ನು ಜರುಗಿಸುತ್ತೇವೆ ಎಂದು ಹೇಳಿದರು.
ವಿಡಿಯೋದಲ್ಲಿ ಇರುವ ಯುವಕ ಇನ್ ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಬೈತಿದ್ದ. ಈ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಇದುವೆರಗೂ ಯುವಕ ದೂರು ಕೊಟ್ಟಿಲ್ಲ. ಮೂರು ನಾಲ್ಕು ತಿಂಗಳ ಹಿಂದೆ ನಡೆದ ಘಟನೆಯಾಗಿದ್ದು, ಇಂದು ನಮ್ಮ ಗಮನಕ್ಕೆ ಬಂದಿದೆ ಎಂದರು.
ಹುಬ್ಬಳ್ಳಿಯ ಸೆಟ್ಲಮೆಂಟ್ನಲ್ಲಿ ನಡೆದ ಘಟನೆ ಎನ್ನುವ ಅನುಮಾನ ಇದೆ. ಪೊಲೀಸರು ಈ ತರಹದ ಘಟನೆ ಆಗುವ ಮುಂಚೆ ಎಚ್ಚೆತ್ತಕೊಳ್ಳಬೇಕಿತ್ತು. ಆದರೆ ವಿಡಿಯೋ ಇಂದು ಬಹಿರಂಗವಾಗಿರುವ ಬೆನ್ನಲ್ಲೇ ಕಾರ್ಯಪ್ರವೃತ್ತರಾಗಿ ತನಿಖೆ ಮಾಡುತ್ತಿದ್ದೇವೆ. ಒಟ್ಟು ಐದು ಜನರನ್ನು ವಶಕ್ಕೆ ಪಡೆಯಲಾಗಿದೆ. ವಿಡಿಯೋದಲ್ಲಿ ಇರುವ ಯುವಕನಿಗಾಗಿ ಹುಡುಕಾಡುತ್ತಿದ್ದೇವೆ ಎಂದರು.

ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್ ಮತ್ತು ಮಂಜು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಯಾರೇ ಇದ್ದರೂ ಕೂಡ ಕಾನೂನು ಕ್ರಮಗಳನ್ನು ಜರುಗಿಸುತ್ತೇವೆ. ಅಲ್ಲದೇ ಯುವಕನನ್ನು ಪತ್ತೆ ಮಾಡಿ ಪ್ರಕರಣ ಕೂಡ ದಾಖಲಿಸಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸುತ್ತೇವೆ ಎಂದು ಭರವಸೆ ನೀಡಿದರು.
ಬೆತ್ತಲೆ ಮಾಡಿ ಹಲ್ಲೆ ಮಾಡಿದ ಪ್ರಕರಣ: ಆರನೇ ಆರೋಪಿ ಪೊಲೀಸರ ವಶ
ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪಡೆ ಹೈ ಅಲರ್ಟ್ ಆಗಿದ್ದು, ಒಬ್ಬೊಬ್ಬರನ್ನೇ ಪೊಲೀಸ್ ಠಾಣೆಗೆ ತಂದು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಐದು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಮತ್ತೋರ್ವ ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ತಂದಿದ್ದಾರೆ. ಪ್ರಕರಣ ಕ್ಷಣದಿಂದ ಕ್ಷಣಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇನ್ನು ಯುವಕನಿಗೆ ಸಾಕಷ್ಟು ರೀತಿಯಲ್ಲಿ ಕಿರುಕುಳ ಕೂಡ ನೀಡಲಾಗಿದೆ ಎನ್ನುವ ಆರೋಪವಿದ್ದು, ಪೊಲೀಸ್ ತನಿಖೆಯ ನಂತರವೇ ಪ್ರಕರಣದ ಸಂಪೂರ್ಣ ಮಾಹಿತಿ ಲಭ್ಯವಾಗಬೇಕಿದೆ.












Click it and Unblock the Notifications