ಹುಬ್ಬಳ್ಳಿಯಲ್ಲಿ ಟಿಪ್ಪು ಜಯಂತಿ: ಬಿಜೆಪಿಯಿಂದ ಕರಾಳ ದಿನಾಚರಣೆ
ಹುಬ್ಬಳ್ಳಿ , ನವೆಂಬರ್, 10 : ನಗರದ ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ಟಿಪ್ಪು ಜಯಂತಿ ಆಚರಿಸುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿ ಕರಾಳ ದಿನಾಚರಣೆ ಆಚರಿಸಿದರು.
ಮಿನಿ ವಿಧಾನಸೌಧದಲ್ಲಿರುವ ತಹಶಿಲ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯತರ್ಕರು ಮುತ್ತಿಗೆ ಹಾಕಲು ಯತ್ನಿಸಿದರು. [ನ.10 ರಂದು ಹುಬ್ಬಳ್ಳಿ-ಧಾರವಾಡದಲ್ಲಿ ಸೆಕ್ಷನ್ 144 ಜಾರಿ,ಮದ್ಯ ಬಂದ್]
ಇದನ್ನು ತಡೆಯಲು ಮುಂದಾದ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ಆರಂಭವಾಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದರಿಂದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ರಾಜ್ಯ ಸರಕಾರದ ಧೋರಣೆ ವಿರುದ್ಧ ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತರು, ಮುಸ್ಲಿಂ ಸಮುದಾಯದ ಓಲೈಕೆಗಾಗಿ ಕಾಂಗ್ರೆಸ್ ಸರಕಾರ ಟಿಪ್ಪು ಜಯಂತಿಯನ್ನು ಆಚರಿಸುತ್ತಿದೆ. ಪೊಲೀಸರ ಬಲ ಬಳಸಿಕೊಂಡು ಪ್ರತಿಭಟನೆಯನ್ನು ಹತ್ತಿಕ್ಕುತ್ತಿದೆ ಎಂದು ದೂರಿದರು.
ಟಿಪ್ಪು ಜಯಂತಿ ಆಚರಿಸುತ್ತಿದ್ದ ತಹಶಿಲ್ದಾರ್ ಕಚೇರಿಗೆ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಸಾರ್ವಜನಿಕರನ್ನು ತಪಾಸಣೆ ಮಾಡಿ ಒಳಗೆ ಬಿಡಲಾಗುತ್ತಿತ್ತು. ನಗರದ ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು.

ಟಿಪ್ಪು ಜಯಂತಿ: ಹೊರಗಡೆ ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದರೆ, ಮಿನಿ ವಿಧಾನಸೌಧದಲ್ಲಿರುವ ತಹಶಿಲ್ದಾರ್ ಕಚೇರಿಯಲ್ಲಿ ಟಿಪ್ಪು ಜಯಂತಿಯನ್ನು ಶಾಸಕರಾದ ಪ್ರಸಾದ್ ಅಬ್ಬಯ್ಯಾ, ಸಿ,ಎಸ್. ಶಿವಳ್ಳಿ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮುಸ್ಲಿಂ ಸಮಾಜದ ಗಣ್ಯರನ್ನು ಸನ್ಮಾನಿಸಿದರು. ಮುಸ್ಲಿಂ ಬಾಂಧವರು, ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳು ಈ ವೇಳೆ ಭಾಗವಹಿಸಿದ್ದರು.












Click it and Unblock the Notifications