ಉತ್ತರ ಕರ್ನಾಟಕ ಬಂದ್ಗೆ ವಿವಿಧ ಸಂಘಟನೆಗಳ ಬೆಂಬಲವಿಲ್ಲ
ಹುಬ್ಬಳ್ಳಿ, ಜುಲೈ 31 : ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿ ಮಾಡಬೇಕು ಎಂದು ಆಗ್ರಹಿಸಿ ಆಗಸ್ಟ್ 2ರಂದು ಉತ್ತರ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಆದರೆ, ಬಂದ್ಗೆ ಬೆಂಬಲ ನೀಡಲು ವಿವಿಧ ಸಂಘಟನೆಗಳು ನಿರಾಕರಿಸಿವೆ.
ಹುಬ್ಬಳ್ಳಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ವಿವಿಧ ಸಂಘಟನೆಗಳು, 'ಈ ಭಾಗಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ರಾಜ್ಯ ಸರ್ಕಾರ ಮುಂದಾಗಬೇಕು. ಅದಕ್ಕಾಗಿ ಹೋರಾಟ ಮಾಡಬೇಕು. ಆದರೆ, ರಾಜಕೀಯ ಬೇಳೆ ಬೇಯಿಸಿಕೊಳ್ಳಲು ರಾಜ್ಯ ಒಡೆಯುವುದು ಸರಿಯಲ್ಲ' ಎಂದರು.
'ಪ್ರತ್ಯೇಕ ರಾಜ್ಯ ರಚನೆಯಿಂದ ಈ ಭಾಗಕ್ಕೆ ಯಾವುದೇ ಲಾಭವಾಗುವುದಿಲ್ಲ. ಪ್ರತ್ಯೇಕಗೊಂಡಿರುವ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ, ನಮಗೂ ಅದೇ ಸ್ಥಿತಿ ಬರುತ್ತದೆ' ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಅಮೃತ್ ಇಜಾರಿ ಹೇಳಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ ಮಾತನಾಡಿ, 'ಜನರನ್ನು ಭಾವನಾತ್ಮಕವಾಗಿ ಒಡೆಯುವ ಕೆಲಸ ಮಾಡಲಾಗುತ್ತಿದೆ. ಇದೇ ವಿಷಯದ ಮೇಲೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಬಿಜೆಪಿ ಯತ್ನಿಸುತ್ತಿದೆ ಎಂಬ ಶಂಕೆ ನಮ್ಮನ್ನು ಕಾಡುತ್ತಿದೆ' ಎಂದರು.
ಯಾರ ಬೆಂಬಲವಿಲ್ಲ : ಆಗಸ್ಟ್ 2ರಂದು ಕರೆ ನೀಡಿರುವ ಬಂದ್ಗೆ ಸಿಐಟಿಯು, ಕಳಸಾ-ಬಂಡೂರಿ ಹೋರಾಟ ಸಮನ್ವಯ ಸಮಿತಿ, ಆಟೋ ಚಾಲಕರ ಸಂಘದ ಮುಖಂಡರು ಬೆಂಬಲ ನೀಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೊತಂಬರಿ ಅವರು ಉತ್ತರ ಕರ್ನಾಟಕದ 13 ಜಿಲ್ಲೆಗಳ ಬಂದ್ಗೆ ಕರೆ ನೀಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಂದ್ಗೆ ಕರೆ ನೀಡುವ ಸಂಘಟನೆಯ ಸದಸ್ಯರ ಜೊತೆ ಮಂಗಳವಾರ ಸಭೆ ನಡೆಸಲಿದ್ದಾರೆ.











Click it and Unblock the Notifications