ವಿನಯ್ ಕುಲಕರ್ಣಿ ಧಾರವಾಡ ಪ್ರವೇಶ: ಅರ್ಜಿ ವಿಚಾರಣೆ ಏ.18ಕ್ಕೆ ಮುಂದೂಡಿದ ನ್ಯಾಯಾಲಯ
ಧಾರವಾಡ, ಏಪ್ರಿಲ್ 14: ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ತಮಗೆ ಧಾರವಾಡ ಪ್ರವೇಶ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯ ತೀರ್ಪುನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಪ್ರಿಲ್ 18ಕ್ಕೆ ಮುಂದೂಡಿದೆ.
ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಗುರುವಾರ ಕೂಡ ಕೋರ್ಟ್ ವಿಚಾರಣೆ ನಡೆಸಿತು.

ಸಿಬಿಐ ವಿಶೇಷ ಅಭಿಯೋಜಕ ಮಿತ್ತಳಿಕೆ ಗಂಗಾಧರ ಶೆಟ್ಟಿ ಮಂಡಿಸಿದ ವಾದಕ್ಕೆ ಪ್ರತಿಯಾಗಿ, ಆರೋಪಿ ಪರ ವಕೀಲರಾದ ಸಿ.ಎಚ್.ಹನುಮಂತರಾಯಪ್ಪ ಅವರು, ಧಾರವಾಡಕ್ಕೆ ಹೋಗಲು ಅವಕಾಶ ನೀಡಬೇಕು. ತಮ್ಮ ಕಕ್ಷಿದಾರರು ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಾರೆ ಎಂಬ ಅನುಮಾನವಿದ್ದರೆ, ಎಲ್ಲ ಸಾಕ್ಷಿಗಳಿಗೆ ಭದ್ರತೆ ನೀಡಬಹುದು. ಸಿಬಿಐನಿಂದ ಸಾಧ್ಯವಾಗದಿದ್ದರೆ ಸ್ಥಳೀಯ ಪೊಲೀಸರಿಂದ ಭದ್ರತೆ ನೀಡಬಹುದು. ತಮ್ಮ ಕಕ್ಷಿದಾರ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಬೇಕಿದೆ ಎಂದು ಕೋರ್ಟ್ಗೆ ಮನವಿ ಮಾಡಿದ್ದಾರೆ.
ಇದಕ್ಕೆ ಆಕ್ಷೇಪಿಸಿದ ಸಿಬಿಐ ವಿಶೇಷ ಅಭಿಯೋಜಕ ಗಂಗಾಧರ ಶೆಟ್ಟಿ, ಸಿಬಿಐನಿಂದ ಎಲ್ಲ 90 ಸಾಕ್ಷಿಗಳಿಗೆ ಭದ್ರತೆ ನೀಡಲು ಸಾಧ್ಯವಿಲ್ಲ. ಇನ್ನು ಸ್ಥಳೀಯ ಪೊಲೀಸರೇ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಹಣ ಪಡೆದು ಸಾಕ್ಷಿ ಮುಚ್ಚಿಡಲು ಯತ್ನಿಸಿದ್ದಾರೆ ಎಂಬುದು ಸಿಬಿಐ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಇನ್ನು ಆರೋಪಿ ನೇರವಾಗಿ ಧಾರವಾಡಕ್ಕೆ ತೆರಳಿ ನಾಮಪತ್ರ ಸಲ್ಲಿಸಲು ಅವಕಾಶವಿಲ್ಲ. ಆದರೆ, ಸೂಚಕರ ಮೂಲಕ ನಾಮಪತ್ರ ಸಲ್ಲಿಸಲು ಅವಕಾಶವಿದೆ ಎಂದು ವಾದ ಮಂಡಿಸಿದರು. ಅಂತಿಮವಾಗಿ ವಾದ-ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆ ಪೂರ್ಣಗೊಳಿಸಿ, ಎಪ್ರಿಲ್ 18 ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ. ವಿಚಾರಣೆ ವೇಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಕೂಡ ಹಾಜರಾಗಿದ್ದರು.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇತ್ತೀಚಿಗೆ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಹೆಸರನ್ನು ಅಂತಿಮಗೊಳಿಸಿತ್ತು .ಕೊಲೆ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಪ್ರಕರಣದ ವಿಚಾರಣೆ ಅಂತಿಮಗೊಳ್ಳುವ ಮೊದಲೇ ಕಾಂಗ್ರೆಸ್ ಟಿಕೆಟ್ ನೀಡಿರುವುದು ಕುತೂಹಲಕ್ಕೆ ಕಾರಣವಾಗಿತ್ತು.
ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ಅನುಮತಿಯನ್ನು ನಿರಾಕರಿಸಿತ್ತು. ಹೀಗಾಗಿ ವಿನಯ್ ಕುಲಕರ್ಣಿಗೆ ಮತ್ತೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಸದ್ಯ ಈ ಪ್ರಕರಣದ ತನಿಖೆಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಪ್ರಿಲ್ 18ಕ್ಕೆ ಮುಂದೂಡಿದೆ.
ಇನ್ನು ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಒಂದು ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ಸಿಗದಿದ್ದರೆ, ಮಾಜಿ ಸಚಿವ ವಿನಯ್ ಕುಲಕರ್ಣಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ಸಹ ಕೇಳಿ ಬರುತ್ತಿದೆ. ಧಾರವಾಡ ಜಿಲ್ಲೆಯಿಂದ ಹೊರಗಿರುವ ವಿನಯ್ ಕುಲಕರ್ಣಿ 2023ರ ವಿಧಾನಸಭಾ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆಸುವುದು ಅಂತಿಮವಾಗಿದೆ. ಇದರಿಂದ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಇಸ್ಮಾಯಿಲ್ ತಮಟಗಾರಗೆ ನಿರಾಸೆಯಾಗಿ ಮರಳಿ ಜೆಡಿಎಸ್ ಸೇರ್ಪಡೆ ಆಗಿದ್ದಾರೆ.t












Click it and Unblock the Notifications