ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಹೇಗಿತ್ತು?, ಇಲ್ಲಿದೆ ವಿವರ
ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ನಿಂದ ಬಂದಿದ್ದರು, ಮರಳಿ ಅವರು ಅಲ್ಲಿಗೇ ಹೋಗುತ್ತಿದ್ದಾರೆ. ಇದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿ, ಮಾರ್ಚ್, 21: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದ್ದು, ರಾಜ್ಯ ರಾಜಕಾರಣದಲ್ಲಿ ಹಲವು ಬೆಳವಣಿಗೆಗಳು ಆಗುತ್ತಲೇ ಇವೆ. ಅದೇ ರೀತಿ ಪಕ್ಷ ಬಿಟ್ಟು ಮತ್ತೊಂದು ಪಕ್ಷಕ್ಕೆ ಹೋಗುವವರ ಸಂಖ್ಯೆಯೂ ಕೂಡ ಹೆಚ್ಚಾಗಿದೆ. ಈ ನಡುವೆಯೇ ಬಾಬುರಾವ್ ಚಿಂಚನಸೂರ್ ಬಿಜೆಪಿ ತೊರೆದು ಕಾಂಗ್ರಸ್ ಸೇರ್ಪಡೆ ಆಗಿದ್ದಾರೆ. ಈ ಕುರಿತು ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಭಾರತದಲ್ಲಿ ಕಾಂಗ್ರೆಸ್ ಪತನದತ್ತ ಸಾಗಿದೆ ಎಂದು ಭವಿಷ್ಯ ನುಡಿದರು.
ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ನಿಂದ ಬಂದಿದ್ದರು, ಮರಳಿ ಅವರು ಅಲ್ಲಿಗೇ ಹೋಗುತ್ತಿದ್ದಾರೆ. ಇದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿದರು.

ಬಿಜೆಪಿ ಗೆಲುವು ಸಾಧಿಸಲಿದೆ
ಹುಬ್ಬಳ್ಳಿಯ ತಮ್ಮ ನಿವಾಸದ ಮುಂದೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗುರುಮಠಕಲ್ ಕ್ಷೇತ್ರದಲ್ಲಿ ಈಗಾಗಲೇ ನಮ್ಮ ಪಕ್ಷದ ಸಂಘಟನೆ ಚೆನ್ನಾಗಿದೆ. ಗುರುಮಠಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಮಾರ್ಚ್ 24ಕ್ಕೆ ರಾಜ್ಯಕ್ಕೆ ಅಮಿತ್ ಶಾ ಬರುತ್ತಾರೆ. ಮಾರ್ಚ್ 25ಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ. ಮಾರ್ಚ್ 26ರಂದು ಅಮಿತ್ ಶಾ ಮತ್ತೇ ಪ್ರವಾಸ ಮಾಡುತ್ತಾರೆ ಎಂದು ತಿಳಿಸಿದರು.
ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ
ರಾಹುಲ್ ಗಾಂಧಿ ರಾಜ್ಯ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಹುಲ್ ಕಳೆದ ಬಾರಿ ಬಂದದ್ದಕ್ಕೂ ಈ ಬಾರಿ ಬಂದದ್ದಕ್ಕೂ ಬಹಳ ವ್ಯತ್ಯಾಸವಿದೆ. ಈ ಬಾರಿ ಅವರು ಬ್ರಿಟನ್ ವಿವಿಯಲ್ಲಿ ಮಾತನಾಡಿದರು. ಅಲ್ಲಿ ಅವರು ದೇಶ, ಪ್ರಜಾಪ್ರಭುತ್ವ ವಿರೋಧಿ ಮಾತುಗಳನ್ನಾಡಿದ್ದು, ದೇಶವ್ಯಾಪ್ತಿ ಇದಕ್ಕೆ ಖಂಡನೆ ವ್ಯಕ್ತವಾಗುತ್ತಿದೆ ಎಂದರು.
ರಾಹುಲ್ ಮಾತಿಗೆ ಜನ ಬೆಲೆ ಕೊಡುವುದಿಲ್ಲ
ರಾಹುಲ್ ಗಾಂಧಿ ಮಾತಿಗೆ ಕರ್ನಾಟಕದ ಜನ ಯಾವುದೇ ಬೆಲೆ ಕೊಡುವುದಿಲ್ಲ. ಸಿದ್ಧರಾಮಯ್ಯ ಬೋಗಸ್ ಕಾರ್ಡ್ ಬಗ್ಗೆ ಮಾತನಾಡುತ್ತಿದ್ದರು. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿಯ ಆಶ್ವಾಸನೆಗಳನ್ನು ಕಾಂಗ್ರೆಸ್ ಈಡೇರಿಸಿಲ್ಲ. ರಾಜಸ್ಥಾನ, ಛತ್ತೀಸ್ಘಡ ಸೇರಿದಂತೆ ಮತ್ತಿತರ ಕಡೆ ಕೊಟ್ಟ ಆಶ್ವಾಸನೆಯನ್ನು ಈಡೇರಿಸಿಲ್ಲ. ಹೀಗೆ ಕಾಂಗ್ರೆಸ್ ಜನರನ್ನು ಯಾಮಾರಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ, ಅದೊಂದು ವಿಸಿಟಿಂಗ್ ಕಾರ್ಡ್ ಎಂದು ವ್ಯಂಗ್ಯವಾಡಿದರು.

ಸಿದ್ಧರಾಮಯ್ಯ ವಿರುದ್ಧ ಆಕ್ರೋಶ
ಸಿದ್ಧರಾಮಯ್ಯನವರ ವಿರುದ್ಧ ಸಾಕಷ್ಟು ಪ್ರಕರಣಗಳು ದಾಖಲಾಗಿವೆ. ಲೋಕಾಯುಕ್ತದಲ್ಲಿಯೂ ದೂರಿದೆ. ಅಂತಹವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಅಂದರೆ ಇದ್ದಿಲು, ಮಸಿಗೆ ಬುದ್ಧಿ ಹೇಳಿದಂತೆ ಎಂದು ವ್ಯಂಗ್ಯವಾಡಿದರು. ಭಾರತದಲ್ಲಿ ಕಾಂಗ್ರೆಸ್ ಪತನ ಶುರುವಾಗಿದೆ. ರೀಡೋ ವಾಚ್ ಬಗ್ಗೆ ನ್ಯಾಯಾಂಗ ತನಿಖೆ ಮಾಡುತ್ತಿದ್ದೇವೆ. ವಿಪಕ್ಷಗಳ 59 ಪ್ರಕರಣಗಳ ಪೈಕಿ ಕೆಲವನ್ನು ಲೋಕಾಯುಕ್ತಕ್ಕೆ ಕೊಟ್ಟಿದ್ದೇವೆ. ಇನ್ನು ಕೆಲವನ್ನು ಮುಂದಿನ ದಿನಗಳಲ್ಲಿ ನ್ಯಾಯಾಂಗಕ್ಕೆ ಕೊಡುತ್ತೇವೆ ಎಂದು ಹೇಳಿದರು.
ಬಿಜೆಪಿ ಜನರ ಭಾವನಾತ್ಮಕ ವಿಚಾರಗಳ ಜೊತೆ ಆಟವಾಡುತ್ತಿದೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅವರು, ಇತಿಹಾಸವನ್ನು ಮರೆಮಾಚುವ ಕೆಲಸ ನಡೆದಿದೆ. ಉರಿಗೌಡ ಅಂತ ಹೇಳಲ್ಲ. ಹಲವಾರು ಪ್ರಕರಣಗಳಲ್ಲಿ ಸತ್ಯ ಮರೆಮಾಚುವ ಕೆಲಸ ನಡೆದಿದೆ. ಅವುಗಳ ಸತ್ಯ ಹೇಳಿದರೆ ಇವರಿಗೆ ತಡೆದುಕೊಳ್ಳುವುದಕ್ಕೆ ಆಗುವುದಿಲ್ಲ. ಸತ್ಯ ಶೋಧನೆ ಆದಾಗ ಎಲ್ಲವೂ ಹೊರಗೆ ಬರುತ್ತದೆ ಎಂದರು.
ಇನ್ನು ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿ, ಅವರ ಬೇಡಿಕೆಯನ್ನು ಈಡೇರಿಸಿದ್ದೇವೆ. ಪ್ರಮುಖ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿ ಬಗೆಹರಿಸಿದ್ದೇನೆ. ಆಗ ನೌಕರರು ಅಭಿನಂದನೆ ಸಲ್ಲಿಸುವ ಜೊತೆಗೆ, ಮುಷ್ಕರವನ್ನು ಹಿಂಪಡೆದುಕೊಂಡಿದ್ದಾರೆ ಎಂದರು.












Click it and Unblock the Notifications