ಹಿಜಾಬ್ ಧರಿಸದಿದ್ದರೆ ಅತ್ಯಾಚಾರ ಎದುರಿಸಬೇಕಾಗುತ್ತೆ: ಜಮೀರ್ ಅಹ್ಮದ್ ಖಾನ್
ಹುಬ್ಬಳ್ಳಿ, ಫೆ.13: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜಕೀಯ ಮುಖಂಡರು ನೀಡುತ್ತಿರುವ ಹೇಳಿಕೆಗಳು ವಿವಾದ ಹುಟ್ಟುಹಾಕುತ್ತಿವೆ. ಉಡುಪಿ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅನುಮತಿ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಸೋಮವಾರ ಪ್ರಕರಣದ ವಿಚಾರಣೆ ನಡೆಯಲಿದೆ. ಹೈಕೋರ್ಟ್ ತೀರ್ಪು ಬರುವ ತನಕ ಯಾವುದೇ ಹೇಳಿಕೆ ನೀಡದಂತೆ ತಮ್ಮ ಪಕ್ಷದ ಮುಖಂಡರಿಗೆ ವರಿಷ್ಠರು ತಾಕೀತು ಮಾಡಿದ್ದಾರೆ. ಆದರೆ, ಹಿರಿಯ ನಾಯಕರ ಬಾಯಿ ಕಟ್ಟಲು ಯಾರಿಗೂ ಸಾಧ್ಯವಾಗುತ್ತಿಲ್ಲ. ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹಿಜಾಬ್ ಧರಿಸದಿದ್ದರೆ ಅತ್ಯಾಚಾರ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
''ಹಿಜಾಬ್ ಎಂದರೆ ಘೋಶಾ, ಪರ್ದಾ ಎಂಬ ಅರ್ಥ ಬರುತ್ತದೆ. ವಯಸ್ಸಿಗೆ ಬಂದ ಹುಡುಗಿಯರನ್ನು ಕೆಟ್ಟ ಕಣ್ಣುಗಳಿಂದ ರಕ್ಷಿಸಲು ಹಿಜಾಬ್, ಬುರ್ಕಾ ಅಗತ್ಯ, ಹಿಜಾಬ್ ಧರಿಸದಿದ್ದರೆ ರೇಪ್ ಹೆಚ್ಚಾಗುತ್ತದೆ, ಹಿಂದೂಸ್ತಾನದಲ್ಲೇ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳಿವೆ ಎಂಬ ವರದಿ ಬಂದಿರುವುದು ನಿಮಗೂ ಗೊತ್ತಿರಬಹುದು..'' ಎಂದು ಜಮೀರ್ ಹೇಳಿದರು.
#WATCH | Hijab means 'Parda' in Islam...to hide the beauty of women...women get raped when they don't wear Hijab: Congress leader Zameer Ahmed on #HijabRow in Hubli, Karnataka pic.twitter.com/8Ole8wjLQF
— ANI (@ANI) February 13, 2022
ಜಮೀರ್ ಮಾತನಾಡಿದ ವಿಡಿಯೋವನ್ನು ಸುದ್ದಿಸಂಸ್ಥೆ ಎಎನ್ಐ ಟ್ವಿಟ್ಟರಲ್ಲಿ ಹಂಚಿಕೊಂಡಿದೆ. ಜಮೀರ್ ಹೇಳಿಕೆಗೆ ಪರ ವಿರೋಧ ಪ್ರತಿಕ್ರಿಯೆಗಳು ಬರುತ್ತಿವೆ. ಕಾಶ್ಮೀರಿ ಯುವತಿ ಹಿಜಾಬ್ ಧರಿಸುವುದಿಲ್ಲ ಎಂಬ ಹೇಳಿಕೆಯನ್ನು ಅನೇಕರು ಉಲ್ಲೇಖಿಸಿ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಹಿಜಾಬ್ ಕೇಸ್: ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿರುವ ವಿಚಾರವನ್ನು ನಿರ್ಧರಿಸುವವರೆಗೆ ಹಿಜಾಬ್, ಕೇಸರಿ ಶಾಲು ಅಥವಾ ಬೇರಾವುದೇ ಧಾರ್ಮಿಕ ಬಾವುಟಗಳನ್ನು ಇಟ್ಟುಕೊಂಡು ಕಾಲೇಜಿಗೆ ತೆರಳದಂತೆ ವಿದ್ಯಾರ್ಥಿಗಳಿಗೆ ಆದೇಶಿಸಿ ಕರ್ನಾಟಕ ಹೈಕೋರ್ಟ್ ಗುರುವಾರ ಮಧ್ಯಂತರ ಆದೇಶ ಮಾಡಿದೆ. ಪ್ರಕರಣದ ವಿಚಾರಣೆ ತ್ರಿಸದಸ್ಯ ಪೀಠದಲ್ಲಿ ಜಾರಿಯಲ್ಲಿದೆ.
ಗುರುವಾರ ನಡೆದ ವಿಚಾರಣೆ ವೇಳೆ ನಡೆದ ವಾದ-ಪ್ರತಿವಾದಗಳನ್ನು 7 ಪುಟಗಳ ಆದೇಶದಲ್ಲಿ ಉಲ್ಲೇಖಿಸಿರುವ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾ. ಖಾಜಿ ಜೈಬುನ್ನೀಸಾ ಅವರಿದ್ದ ತ್ರಿಸದಸ್ಯಪೀಠ, ಸೋಮವಾರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.
"ನಮ್ಮದು ಹಲವು ಸಂಸ್ಕೃತಿಗಳನ್ನು ಒಳಗೊಂಡ ಬಹುಸಂಸ್ಕೃತಿಯ ನಾಡು ಎಂದು ವಿವರಿಸುವ ಅಗತ್ಯವಿಲ್ಲ. ಜಾತ್ಯತೀತವಾದ ನಮ್ಮ ರಾಷ್ಟ್ರವು ಯಾವುದೇ ಒಂದು ನಿರ್ದಿಷ್ಟ ಧರ್ಮದ ಜೊತೆ ಗುರುತಿಸಿಕೊಳ್ಳುವುದಿಲ್ಲ. ಪ್ರತಿಯೊಬ್ಬ ಪ್ರಜೆಯು ತಮ್ಮ ಇಚ್ಛೆಯ ನಂಬಿಕೆ ಪಾಲಿಸುವ ಹಕ್ಕು ಹೊಂದಿದ್ದಾರೆ ಎಂಬುದು ಸತ್ಯ. ಅದಾಗ್ಯೂ, ಅದು ಪರಿಪೂರ್ಣವಾಗಿಲ್ಲ. ನಿರ್ದಿಷ್ಟ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಎಂದು ಸಂವಿಧಾನದಲ್ಲಿ ಹೇಳಲಾಗಿದೆ" ಎಂದು ಪೀಠವು ವಿವರಿಸಿದೆ.
ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳಿ: "ತಡೆಯಿರದ ಪ್ರತಿಭಟನೆಗಳಿಂದ ಶಾಲಾ-ಕಾಲೇಜುಗಳು ಬಂದ್ ಆಗಬಾರದು. ಶಿಕ್ಷಣ ಸಂಸ್ಥೆಗಳು ಅನಿರ್ದಿಷ್ಟ ಕಾಲ ಬಂದ್ ಆಗುವುದು ಸಂತೋಷದ ವಿಷಯಲ್ಲ. ಈ ಪ್ರಕರಣದ ವಿಚಾರಣೆಯನ್ನು ತುರ್ತು ಆಧಾರದ ಮೇಲೆ ನಡೆಸಲಾಗುವುದು, ಶೈಕ್ಷಣಿಕ ವರ್ಷವನ್ನು ವಿಳಂಬಿಸುವುದರಿಂದ ವಿದ್ಯಾರ್ಥಿಗಳ ಹಿತಕ್ಕೆ ಧಕ್ಕೆಯಾಗುತ್ತದೆ. ಪ್ರಸಕ್ತ ಶೈಕ್ಷ ಕ್ಷಣಿಕ ವರ್ಷ ಇನ್ನೇನು ಅಂತ್ಯವಾಗುತ್ತಿದೆ. ಸಂಬಂಧಪಟ್ಟವರೆಲ್ಲಾ ಶಾಂತಿ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಬೇಕು. ಹೀಗಾಗಿ ಶಿಕ್ಷಣ ಸಂಸ್ಥೆ ತೆರೆದು ವಿದ್ಯಾರ್ಥಿಗಳು ಮರಳಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟವರಿಗೆ ಈ ಮೂಲಕ ಮನವಿ ಮಾಡುತ್ತಿದ್ದೇವೆ'' ಎಂದು ನ್ಯಾಯಪೀಠ ಹೇಳಿದೆ.












Click it and Unblock the Notifications