ಕೊರೊನಾ 2ನೇ ಅಲೆ ಭೀತಿ: ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ
ಹೈದರಾಬಾದ್, ಮಾರ್ಚ್ 23: ಕೊರೊನಾ 2ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ವೈದ್ಯಕೀಯ ಕಾಲೇಜುಗಳನ್ನು ಹೊರತುಪಡಿಸಿ ಎಲ್ಲಾ ಶಾಲಾ ಸಂಸ್ಥೆಗಳನ್ನು ಮುಚ್ಚಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯಕೀಯ ಶಿಕ್ಷಣ ಸಂಸ್ಥೆ ಹೊರತುಪಡಿಸಿ ಬೇರೆಲ್ಲಾ ಸರ್ಕಾರಿ- ಖಾಸಗಿ ಶಾಲೆ, ಕಾಲೇಜು, ಹಾಸ್ಟೆಲ್, ಗುರುಕುಲ ಗಳಿಗೆ ರಜೆ ಘೋಷಿಸಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರಿನಲ್ಲಿ ಕೊರೊನಾ ಏರಿಕೆ; ರಾಜ್ಯದಲ್ಲಿ 2010 ಪ್ರಕರಣ ಪತ್ತೆ
ಇನ್ನು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಧಕ್ಕೆ ಆಗಬಾರದು ಎಂದು ಆನ್ಲೈನ್ ತರಗತಿಗಳನ್ನು ಮುಂದುವರೆಸಲಾಗುವುದು ಎಂದು ಶಿಕ್ಷಣ ಸಚಿವರಾದ ಪಿ.ಸಬಿತಾ ಇಂದ್ರ ರೆಡ್ಡಿ ವಿಧಾನಸಭೆಯಲ್ಲಿ ತಿಳಿಸಿದರು.
ರಾಜ್ಯದಾದ್ಯಂತ ಅದರಲ್ಲೂ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿವೆ. ವಿದ್ಯಾರ್ಥಿಗಳು ಸಾಮೂಹಿಕವಾಗಿ ಸೇರುವುದರಿಂದ ವೈರಸ್ ಮತ್ತಷ್ಟು ಹರಡುವ ಸಾಧ್ಯತೆಯಿದೆ ಎಂದು ಹೇಳಿದರು.
ಇನ್ನು ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ನಿಯಮಿತವಾಗಿ ಕೈ ತೊಳೆಯುವುದು ಸೇರಿದಂತೆ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಸರಿಯಾಗಿ ಅನುಸರಿಸುವ ಮೂಲಕ ಕೊರೊನಾ ವಿರುದ್ಧ ಹೋರಾಡಬೇಕಿದೆ. ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳಿಗೆ ಜನರು ಸ್ಪಂದಿಸಬೇಕಿದೆ ಎಂದು ಮನವಿ ಮಾಡಿದರು.