ಹೈದರಾಬಾದ್ ಎನ್ ಕೌಂಟರ್; ಪೊಲೀಸರಿಗೆ ಹೊಸ ಸಂಕಷ್ಟ!
ಹೈದರಾಬಾದ್, ಡಿಸೆಂಬರ್ 19 : ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಂದು ಹಾಕಿದ್ದ ಆರೋಪಿಗಳು ಎನ್ ಕೌಂಟರ್ನಲ್ಲಿ ಮೃತಪಟ್ಟಿದ್ದರು. ಈಗ ಎಲ್ಲಾ ಆರೋಪಿಗಳ ಕುಟುಂಬದವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು ಪೊಲೀಸರಿಗೆ ಸಂಕಷ್ಟ ಎದುರಾಗಿದೆ.
ಗುರುವಾರ ಎಲ್ಲಾ ನಾಲ್ವರು ಆರೋಪಿಗಳ ಕುಟುಂಬದವರು ಎನ್ ಕೌಂಟರ್ ಬಗ್ಗೆ ತನಿಖೆಯಾಗಬೇಕು. ಪೊಲೀಸರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದರು.
ಅತ್ಯಾಚಾರ ಆರೋಪಿಗಳ ಎನ್ಕೌಂಟರ್: ಸುಪ್ರೀಂಕೋರ್ಟ್ ಮಹತ್ವದ ನಿರ್ಧಾರ
ತೆಲಂಗಾಣ ಸರ್ಕಾರ ಈ ಪ್ರಕರಣದ ತನಿಖೆಗೆ ಈಗಾಗಲೇ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದೆ. ಈಗ ಕುಟುಂಬಸ್ಥರು ಸ್ವತಂತ್ರ ತನಿಖೆಯಾಗಬೇಕು ಎಂದು ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ. ನ್ಯಾಯಾಲಯ ಏನು ಆದೇಶ ನೀಡಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಸಾಯುವ ಮುನ್ನಾ ಅತ್ಯಾಚಾರ ಸಂತ್ರಸ್ತೆ ಹೇಳಿದ ಕೊನೆಯ ಮಾತು
ಡಿಸೆಂಬರ್ 6ರಂದು ಪೊಲೀಸರು ನಡೆಸಿದ ಎನ್ ಕೌಂಟರ್ನಲ್ಲಿ ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ, ಚಿಂತಾಕುಂಟಾ ಕೇಶವಲು ಮೃತಪಟ್ಟಿದ್ದರು. ಈ ಎನ್ ಕೌಂಟರ್ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಲೇ ಇದೆ.
ಪಶುವೈದ್ಯೆ ಮೇಲೆ ಅತ್ಯಾಚಾರ, ಕೊಲೆ; ಎನ್ ಕೌಂಟರ್ ನಡೆದಿದ್ದು ಹೇಗೆ?
ನವೆಂಬರ್ 27ರಂದು ಇಪ್ಪತ್ತೇಳು ವರ್ಷದ ಪಶುವೈದ್ಯೆಯನ್ನು ಅಪಹರಣ ಮಾಡಿದ್ದ ನಾಲ್ವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಬಳಿಕ ಪೆಟ್ರೋಲ್ ಸುರಿದು ಜೀವಂತವಾಗಿ ಸುಟ್ಟು ಹಾಕಿದ್ದರು. ನವೆಂಬರ್ 28ರಂದು ಆಕೆಯ ಶವ ಪತ್ತೆಯಾಗಿತ್ತು.
ನವೆಂಬರ್ 29ರಂದು ಆರೋಪಿಗಳನ್ನು ಬಂಧಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಡಿಸೆಂಬರ್ 6ರಂದು ಮಹಜರು ಮಾಡಲು ಪೊಲೀಸರು ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಪ್ರಯತ್ನ ನಡೆಸಿದ್ದರು. ಆಗ ಪೊಲೀಸರ ಗುಂಡಿಗೆ ಬಲಿಯಾಗಿದ್ದರು.