ಕೆ. ಚಂದ್ರಶೇಖರ್ ರಾವ್ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ: ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್
ಹೈದರಾಬಾದ್, ಜುಲೈ 26: ಟಿಆರ್ಎಸ್ ವರಿಷ್ಠ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ರಾಷ್ಟ್ರ ರಾಜಕಾರಣಕ್ಕೆ ಬರುವುದಿಲ್ಲ ಎಂದು ಎಂದು ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಹೇಳಿದ್ದಾರೆ. ಮಾತ್ರವಲ್ಲದೆ ರಾಜ್ಯದಲ್ಲಿ ಅವಧಿಗೂ ಮುನ್ನವೇ ವಿಧಾನಸಭಾ ಚುನವಾಣೆ ನಡೆಯುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ ರಾಜ್ಯಪಾಲರು, "ಕೆ. ಚಂದ್ರಶೇಖರ್ ರಾವ್ ಅವರು ಅವಧಿಪೂರ್ವ ಚುನಾವಣೆಗೆ ಹೋಗುತ್ತಾರೆ ಎಂದು ಅನಿಸುವುದಿಲ್ಲ ಎಂದು ಹೇಳಿದರು. ರಾಷ್ಟ್ರ ರಾಜಕಾರಣದಲ್ಲಿ ತನ್ನನ್ನು ಗುರುತಿಸಿಕೊಳ್ಳಲು ಕೆಸಿಆರ್ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಆಗಾಗ ವಾಗ್ದಾಳಿ ನಡೆಸುತ್ತಿದ್ದಾರೆ," ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ರಾಜಭವನ ಮತ್ತು ತೆಲಂಗಾಣ ಭವನದ ನಡುವಿನ ಸಂಬಂಧದ ಬಗ್ಗೆ ಕೇಳಿದ ಪ್ರಶ್ನೆಗೆ ರಾಜ್ಯಪಾಲರು ಯಥಾಸ್ಥಿತಿ ಇದೆ ಎಂದು ಹೇಳಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿದ್ದ ರಾಜ್ಯಪಾಲರು ಅವರು ಇತ್ತೀಚಿನ ಪ್ರವಾಹದ ವರದಿಯನ್ನು ಗೃಹ ಸಚಿವಾಲಯಕ್ಕೆ ಸಲ್ಲಿಸಿದರು ಮತ್ತು ನಂತರ ಕೇಂದ್ರ ತಂಡವು ರಾಜ್ಯಕ್ಕೆ ಭೇಟಿ ನೀಡುತ್ತದೆ ಎಂದು ಹೇಳಿದರು.

ಪ್ರೋಟೋಕಾಲ್ ಬಗ್ಗೆ ಪ್ರತಿಕ್ರಿಯಿಸಿದ ತಮಿಳಿಸೈ
"ಕೇಂದ್ರ ಸರ್ಕಾರವು ಪ್ರವಾಹ ಸಂತ್ರಸ್ತರ ಬಗ್ಗೆ ತುಂಬಾ ಕಾಳಜಿ ವಹಿಸುತ್ತದೆ ಮತ್ತು ಸಂತ್ರಸ್ತರಿಗೆ ಸಹಾಯ ಮಾಡುತ್ತದೆ" ಎಂದು ಅವರು ಹೇಳಿದರು.
ರಾಜ್ಯದಲ್ಲಿ ಅಧಿಕಾರಿಗಳು ರಾಜ್ಯಪಾಲರಿಗೆ ಪ್ರೋಟೋಕಾಲ್ ಅನ್ನು ವಿಸ್ತರಿಸದಿರುವ ಬಗ್ಗೆ ಕೇಳಿದಾಗ, ಇತ್ತೀಚೆಗೆ ರಾಜ್ಯದಲ್ಲಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ ಯಾವುದೇ ಅಧಿಕಾರಿಯು ಸ್ವಾಗತಿಸಲು ಬರಲಿಲ್ಲ ಎಂದು ಹೇಳಿದರು. ಭವಿಷ್ಯದಲ್ಲಿ ಕೂಡ ಪ್ರೋಟೋಕಾಲ್ ಅನುಸರಿಸುವ ನಿರೀಕ್ಷೆ ಇಲ್ಲ ಎಂದು ಕೂಡ ಅವರು ತಿಳಿಸಿದರು.
ಜನವಿರೋಧಿ ಮಸೂದೆ ವಿರೋಧಿಸಲು ಕೆಸಿಆರ್ ಸೂಚನೆ
ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ಬಿಜೆಪಿ ಸರ್ಕಾರ ಮಂಡಿಸಲಿರುವ ಜನವಿರೋಧಿ ಮಸೂದೆಗಳನ್ನು ವಿರೋಧಿಸುವಂತೆ ಕೆ. ಚಂದ್ರಶೇಖರ್ ರಾವ್ ತಮ್ಮ ಪಕ್ಷದ ಸಂಸದರಿಗೆ ಕರೆ ನೀಡಿದರು. ಒಂದು ವೇಳೆ ಅವರಿಗೆ ಕೇಂದ್ರ ಸಚಿವರನ್ನು ಭೇಟಿ ಮಾಡುವ ಅವಕಾಶ ಸಿಕ್ಕರೆ, ಆಂಧ್ರ ಪ್ರದೇಶ ಮರುಸಂಘಟನೆ ಕಾಯಿದೆ, 2014 ಮತ್ತು ರಾಜ್ಯದ ಇತರ ಸಮಸ್ಯೆಗಳು ಸೇರಿದಂತೆ ಬಾಕಿ ಉಳಿದಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತಾರೆ ಎಂದು ಮೂಲಗಳು ತಿಳಿಸಿವೆ.
ಒಂದು ನೀರಾವರಿ ಯೋಜನೆಗೆ ರಾಷ್ಟ್ರೀಯ ಯೋಜನೆಯ ಸ್ಥಾನಮಾನ ನೀಡುವಂತೆ ರಾವ್ ಪದೇ ಪದೇ ಕೇಂದ್ರಕ್ಕೆ ಮನವಿ ಮಾಡಿದರು. ಇತ್ತೀಚೆಗಷ್ಟೇ ಜಲಶಕ್ತಿ ಸಚಿವಾಲಯವು ಕಾಳೇಶ್ವರಂ ಅನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಅರ್ಹವಾಗಿಲ್ಲ ಎಂದು ಹೇಳಿದೆ. ತೆಲಂಗಾಣ ಸರ್ಕಾರವು ಕೇಂದ್ರದಿಂದ ಹಣಕಾಸಿನ ಅನುಮತಿಯನ್ನು ತೆಗೆದುಕೊಳ್ಳದ ಕಾರಣ ಈ ನಿರ್ಧಾರ ಮಾಡಿದೆ.

ದೆಹಲಿಗೆ ಭೇಟಿ ನೀಡಿರುವ ಕೆ. ಚಂದ್ರಶೇಖರ ರಾವ್
ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಸೋಮವಾರ ರಾತ್ರಿ 8 ಗಂಟೆಗೆ ಬೇಗಂಪೇಟೆ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಕೆಲವು ಸಚಿವರು, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಸಂಸದರು ಮತ್ತು ಹಿರಿಯ ನಾಯಕರೊಂದಿಗೆ ದೆಹಲಿಗೆ ತೆರಳಿದರು. ಪಕ್ಷದ ಮೂಲಗಳ ಪ್ರಕಾರ ಮುಖ್ಯಮಂತ್ರಿ ಎರಡು ಅಥವಾ ಮೂರು ದಿನಗಳ ಕಾಲ ದೆಹಲಿಯಲ್ಲಿ ವಾಸ್ತವ್ಯ ಹೂಡುವ ಸಾಧ್ಯತೆ ಇದೆ.
ಮುಖ್ಯಮಂತ್ರಿಗಳ ಭೇಟಿಯ ಉದ್ದೇಶದ ಬಗ್ಗೆ ಸ್ಪಷ್ಟತೆ ಇಲ್ಲ. ಸಂಸತ್ತಿನ ಮುಂಗಾರು ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಅವರ ಭೇಟಿ ಮಹತ್ವ ಪಡೆದುಕೊಂಡಿದೆ. ನೂತನ ಅಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸೋಮವಾರ ದೆಹಲಿಯಲ್ಲಿ ನಡೆದ ಮುರ್ಮು ಅವರ ಪ್ರಮಾಣ ವಚನ ಸಮಾರಂಭದಲ್ಲಿ ಚಂದ್ರಶೇಖರ ರಾವ್ ಅವರು ಹಾಜರಾಗದ ಕಾರಣ, ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೇಲೆ ಶುಭಾಶಯಗಳನ್ನು ಸಲ್ಲಿಸಲು ಮುರ್ಮು ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಿಪಕ್ಷಗಳ ನಾಯಕರನ್ನು ಭೇಟಿ ಮಾಡುತ್ತಿರುವ ಕೆಸಿಆರ್
ಎನ್ಡಿಎ ಸರ್ಕಾರದ ಜನವಿರೋಧಿ ನೀತಿಗಳ ಆರೋಪದ ಕುರಿತು ರಾವ್ ಅವರು ಬಿಜೆಪಿಯೇತರ ವಿವಿಧ ಪಕ್ಷಗಳ ಮುಖಂಡರನ್ನು ಕೆಲವು ಸಮಯದಿಂದ ಭೇಟಿಯಾಗುತ್ತಿದ್ದಾರೆ. ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿದ್ದರು.
ಈ ವರ್ಷದ ಮೇನಲ್ಲಿ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಾವ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ನಾಯಕರನ್ನು ಭೇಟಿ ಮಾಡಿದ್ದರು.












Click it and Unblock the Notifications