Breaking; ತಾಯಿ-ಮಗನ ಆತ್ಮಹತ್ಯೆ, ರಾಜ್ಯಪಾಲರ ಮೊರೆ ಹೋದ ಬಿಜೆಪಿ
ಹೈದರಾಬಾದ್, ಏಪ್ರಿಲ್ 20; ಹೈದರಾಬಾದ್ನಲ್ಲಿ ಏಪ್ರಿಲ್ 16ರಂದು ನಡೆದ ತಾಯಿ, ಮಗನ ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಆರ್ಎಸ್ ಪಕ್ಷದ 6 ಮುಖಂಡರನ್ನು ಬಂಧಿಸಲಾಗಿದೆ.
ತೆಲಂಗಾಣದ ಉದ್ಯಮಿ ಗಂಗಮ್ ಸಂತೋಷ್ ಮತ್ತು ಅವರ ತಾಯಿ ಗಂಗಮ್ ಪದ್ಮಾ ಲಾಡ್ಜ್ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಟಿಆರ್ಎಸ್ ಮುಖಂಡರು ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಉದ್ಯಮಿಗೆ ಕಿರುಕುಳ ನೀಡಿದ್ದಾರೆ ಎಂಬುದು ಆರೋಪ.
ಗಂಗಮ್ ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಿಡಿಯೋವೊಂದನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಅಲ್ಲದೇ ಗಂಗಮ್ ಪದ್ಮಾ ಡೆತ್ನೋಟ್ನಲ್ಲಿ ಸಹ ಕಿರುಕುಳದ ಬಗ್ಗೆ ಪ್ರಸ್ತಾಪ ಮಾಡಿದ್ದರು.

ಇವರೆಲ್ಲರೂ ನನ್ನ ವ್ಯವಹಾರವನ್ನು ಹಾಳು ಮಾಡಿದರು. ನಮ್ಮ ಜೀವನವನ್ನೇ ನರಕ ಮಾಡಿದ್ದಾರೆ. ನಾವು ಸತ್ತ ಬಳಿಕವಾದರೂ ನಮಗೆ ನ್ಯಾಯ ಸಿಗಲಿ ಎಂದು ಡೆತ್ನೋಟ್ನಲ್ಲಿ ಬರೆದಿದ್ದಾರೆ. ಬಳಿಕ ಲಾಡ್ಜ್ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತೆಲಂಗಾಣದ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಲಿದೆ. ತಾಯಿ, ಮಗನ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಲಿದ್ದಾರೆ. ಅಲ್ಲದೇ ಟಿಆರ್ಎಸ್ ಪಕ್ಷದ ದೌರ್ಜನ್ಯವನ್ನು ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ರಾಮಯಂಪೇಟೆ ಮೂಲದ ಗಂಗಮ್ ಸಂತೋಷ್ ಸ್ಥಳೀಯ ಪುರಸಭೆ ಅಧ್ಯಕ್ಷ ಪಲ್ಲೆ ಜೀತೆಂದರ್ ಗೌಡ್, ಸರ್ಕಲ್ ಇನ್ಸ್ಪೆಕ್ಟರ್ ನಾಗಾರ್ಜುನ ರೆಡ್ಡಿ ಸೇರಿದಂತೆ ಇತರ ಐವರು ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಆತ್ಮಹ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪಲ್ಲೆ ಜೀತೆಂದರ್ ಗೌಡ್ ಸೇರಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ.ಇದೇ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.
ಆತ್ಮಹತ್ಯೆ ತಡೆ ಸಹಾಯವಾಣಿ; ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications