ಕಾಂಗ್ರೆಸ್ ಹಿರಿಯ ನಾಯಕ ಜೈಪಾಲ್ ರೆಡ್ಡಿ ವಿಧಿವಶ
ಹೈದರಾಬಾದ್, ಜುಲೈ 28 : ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ವಿಧಿವಶರಾದರು. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ಭಾನುವಾರ ಮುಂಜಾನೆ 1.28ರ ಸುಮಾರಿಗೆ ಜೈಪಾಲ್ ರೆಡ್ಡಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು. 77 ವರ್ಷದ ಅವರನ್ನು ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇತ್ತೀಚೆಗೆ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಾಂಗ್ರೆಸ್ ಜೈಪಾಲ್ ರೆಡ್ಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಟ್ವೀಟ್ ಮಾಡಿದೆ.
ಜೈಪಾಲ್ ರೆಡ್ಡಿ ಪಾರ್ಥಿವ ಶರೀರವನ್ನು ಜುಬ್ಲಿ ಹಿಲ್ಸ್ನಲ್ಲಿರುವ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗಿದೆ. ಹಲವಾರು ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದು, ಅಂತಿಮ ನಮನ ಸಲ್ಲಿಸುತ್ತಿದ್ದಾರೆ.
ಜೈಪಾಲ್ ರೆಡ್ಡಿ 1984 ರಿಂದ 5 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.
ಐ. ಕೆ. ಗುಜ್ರಾಲ್ ಸಂಪುಟದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವರಾಗಿ, ಮನಮೋಹನ್ ಸಿಂಗ್ ಸಂಪುಟದಲ್ಲಿ ಪೆಟ್ರೋಲಿಯಂ ಮತ್ತು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದಾರೆ. 1998ರಲ್ಲಿ ಉತ್ತಮ ಸಂಸದೀಯಪಟು ಪ್ರಶಸ್ತಿಯನ್ನುಅವರು ಪಡೆದಿದ್ದರು.
ಹೈದರಾಬಾದ್ನ ಪ್ರತಿಷ್ಠಿತ ಉಸ್ಮಾನಿಯ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. 1970ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು.
ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದಾದ ಅದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಬಿಟ್ಟರು. ಜನತಾ ಪಕ್ಷವನ್ನು ಸೇರಿದ ಅವರು ಬಳಿಕ ಜನತಾದಳ ಸೇರಿದ್ದರು. ಬಳಿಕ ಕಾಂಗ್ರೆಸ್ಗೆ ಮರಳಿ ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದರು.