ತೆಲಂಗಾಣದಲ್ಲಿ ಅಪಘಾತ; ಸ್ಥಳದಲ್ಲೇ ಆರು ಮಂದಿ ಸಾವು
ಹೈದರಾಬಾದ್, ನವೆಂಬರ್ 10: ಎರಡು ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಗರೆಡ್ಡಿ ಜಿಲ್ಲೆಯ ಮೂತಂಗಿ ಹೊರವರ್ತುಲ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಎಂಯುವಿ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದೆ. ಎಂಯುವಿ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಅಪಘಾತವಾಗಿದೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದು, ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ. ಎಂಯುವಿ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಸಾವನ್ನಪ್ಪಿದವರು ಜಾರ್ಖಂಡ್ ಮೂಲದ ನೌಕರರಾಗಿದ್ದು, ಕಾರ್ಪೆಂಟರ್ ಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅವರು ಬೆಂಗಳೂರಿನಿಂದ ನಾಗಪುರ ಹಾದಿಯಲ್ಲಿ ಉತ್ತರ ಪ್ರದೇಶದೆಡೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ.

ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಸಂಗರೆಡ್ಡಿ ಎಸ್ಪಿ ಚಂದ್ರಶೇಖರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಅಪಘಾತ ಸಂಭವಿಸಲು ನಿಖರ ಕಾರಣವೇನು ಎಂಬ ಕುರಿತು ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.












Click it and Unblock the Notifications