ಸಿಎಎ ಪರ ಗೃಹ ಸಚಿವ ಅಮಿತ್ ಶಾ ಪ್ರಚಾರದಲ್ಲಿ ನಟ ಪವನ್ ಕಲ್ಯಾಣ್
ಹೈದ್ರಾಬಾದ್, ಫೆಬ್ರವರಿ.21: ತೆಲಂಗಾಣದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೃಹತ್ ಸಾರ್ವಜನಿಕ ಸಭೆಯನ್ನು ನಡೆಸಲಿದ್ದಾರೆ. ಈ ಸಾರ್ವಜನಿಕ ಮೆರವಣಿಗೆ ಮತ್ತು ಸಮಾವೇಶದಲ್ಲಿ ತೆಲುಗು ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಕೂಡಾ ಭಾಗಿಯಾಗಲಿದ್ದಾರೆ.
ಮಾರ್ಚ್.15ರಂದು ಹೈದ್ರಾಬಾದ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರ ಬೃಹತ್ ಸಮಾವೇಶ ನಡೆಸಲಿದ್ದು, ಸಾರ್ವಜನಿಕರನ್ನು ಉದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಲಿದ್ದಾರೆ. ಇನ್ನು, ಸಮಾವೇಶಕ್ಕೆ ಈಗಾಗಲೇ ಪೊಲೀಸರಿಂದ ಅನುಮತಿ ಸಿಕ್ಕಿದೆ ಎಂದು ತೆಲಂಗಾಣದ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಲಕ್ಷ್ಮಣ್ ತಿಳಿಸಿದ್ದಾರೆ.
ಮೌನ ಮುರಿದ ಸಿಎಂ, ಸಿಎಎ ವಿರುದ್ಧ ನಿರ್ಣಯ ಅಂಗೀಕಾರ ಪಕ್ಕಾ
ತೆಲಂಗಾಣದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಪ್ರಚಾರ ಮಾಡಲಾಗುತ್ತಿದೆ. ತೆಲಂಗಾಣ ರಾಷ್ಟ್ರೀಯ ಸಮಿತಿ ಮತ್ತು ಎಐಎಂಐಎಂ ಪಕ್ಷದ ನಾಯಕರು ಸಿಎಎ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಇರುವ ಅನುಮಾನಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಬಿಜೆಪಿ ಸಮಾವೇಶ ನಡೆಸಲಾಗುತ್ತಿದೆ ಎಂದು ಕೆ.ಲಕ್ಷ್ಮಣ್ ತಿಳಿಸಿದರು.
ಅಮಿತ್ ಶಾ ಜೊತೆ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್
ಮಾರ್ಚ್.15ರಂದು ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಬಿಜೆಪಿ ಆಯೋಜಿಸಿರುವ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಷಣ ಮಾಡಲಿದ್ದಾರೆ. ಈ ವೇಳೆ ಜನಸೇವಾ ಪಕ್ಷದ ಮುಖ್ಯಸ್ಥ ಹಾಗೂ ನಟ ಪವನ್ ಕಲ್ಯಾಣ್ ಕೂಡಾ ವೇದಿಕೆ ಹಂಚಿಕೊಳ್ಳುವ ಸಾಧ್ಯತೆಯಿದೆ. ಹಾಗೊಂದು ವೇಳೆ ನಡೆದರೆ, ಬಿಜೆಪಿ ಮತ್ತು ಜನಸೇವಾ ಪಕ್ಷದ ಮೈತ್ರಿ ಬಳಿಕ ಮೊದಲ ಬಾರಿಗೆ ಎರಡು ಪಕ್ಷಗಳ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಂತೆ ಆಗುತ್ತದೆ. ಕಳೆದ ತಿಂಗಳಷ್ಟೇ ಬಿಜೆಪಿ ಜೊತೆಗೆ ಜನಸೇವಾ ಪಕ್ಷ ಮೈತ್ರಿ ಮಾಡಿಕೊಂಡಿತ್ತು.
ಸಿಎಎ ವಿರೋಧಿ ಹೋರಾಟ ನಡೆದ ಹಿನ್ನೆಲೆ ಅಮಿತ್ ಶಾ ಸಮಾವೇಶ
ಇನ್ನು, ತೆಲಂಗಾಣದಲ್ಲೂ ಕೂಡಾ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು. ತೆಲಂಗಾಣ ರಾಷ್ಟ್ರೀಯ ಸಮಿತಿ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಸಿಎಎ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ರಾಜ್ಯದ ಜನರಲ್ಲಿ ಸಿಎಎ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಿಜೆಪಿ ಬೃಹತ್ ಸಮಾವೇಶವನ್ನು ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ ಲಕ್ಷ್ಮಣ್ ತಿಳಿಸಿದ್ದಾರೆ.
ತೆಲಂಗಾಣ ಸದನದಲ್ಲಿ ಸಿಎಎ ವಿರೋಧಿ ನಿರ್ಣಯ
ತೆಲಂಗಾಣ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಸಿಎಎ ವಿರುದ್ಧ ನಿರ್ಣಯ ಪಾಸ್ ಮಾಡುವುದಾಗಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ತಿಳಿಸಿದ್ದರು. ಕಳೆದ ವಾರವೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಕೆಸಿಆರ್, ಮುಂಬರುವ ಬಜೆಟ್ ಅಧಿವೇಶನದಲ್ಲಿ ನಿರ್ಣಯ ಮಂಡಿಸಲಾಗುತ್ತದೆ ಎಂದಿದ್ದರು. ಅಲ್ಲದೇ ಧರ್ಮದ ಆಧಾರದಲ್ಲಿ ಜಾರಿಗೊಳಿಸಿರುವ ಸಿಎಎಯನ್ನು ತೆಲಂಗಾಣದಲ್ಲಿ ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದರು.
ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಚುನಾವಣೆ ಗಿಮಿಕ್
ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಜಾರಿಗೊಳಿಸಿರುವ ಕಲ್ಯಾಣ ಯೋಜನೆಗಳು ಮತ್ತು ಸರ್ಕಾರಿ ನೌಕರರ ವೇತನ ಪರಿಷ್ಕರಣೆ ನೀತಿಯೆಲ್ಲ ಚುನಾವಣೆಯ ಗಿಮಿಕ್ ಆಗಿದೆ. ರಾಜ್ಯ ಸರ್ಕಾರವು ಆರ್ಥಿಕ ದಿವಾಳಿತನವನ್ನು ಎದುರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಲಕ್ಷ್ಮಣ್ ಆರೋಪಿಸಿದ್ದಾರೆ.