ಪಶುವೈದ್ಯೆ ಹತ್ಯೆ; ಪ್ರಕರಣದ ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ
Recommended Video
ಹೈದರಾಬಾದ್, ಡಿಸೆಂಬರ್ 02 : ಹೈದರಾಬಾದ್ನ ಪಶುವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಪಿಗಳಿಗೆ ಶೀಘ್ರವೇ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಲಾಗುತ್ತದೆ.
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಆರೋಪಿಗಳ ಪರವಾಗಿ ವಕಾಲತ್ತು ವಹಿಸುವುದಿಲ್ಲ ಎಂದು ವಕೀಲರು ತೀರ್ಮಾನ ಕೈಗೊಂಡಿದ್ದಾರೆ.
ಪಶುವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಬಳಿಕ ಮೊದಲ ಬಾರಿಗೆ ಭಾನುವಾರ ಕೆ. ಚಂದ್ರಶೇಖರರಾವ್ ಮಾಧ್ಯಮಗಳ ಜೊತೆ ಮಾತನಾಡಿದರು. ಇದೊಂದು ಅಮಾನವೀಯ ಕೃತ್ಯ ಎಂದು ಮುಖ್ಯಮಂತ್ರಿಗಳು ಹೇಳಿದರು.

ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪನೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಸರ್ಕಾರ ಸಂತ್ರಸ್ತೆಯ ಕುಟುಂಬಕ್ಕೆ ಎಲ್ಲಾ ರೀತಿಯ ಸಹಾಯ ಮಾಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನವೆಂಬರ್ 27ರ ಬುಧವಾರ ರಾತ್ರಿ 27 ವರ್ಷದ ಪಶುವೈದ್ಯೆಯನ್ನು ನಾಲ್ವರು ಅಪಹರಣ ಮಾಡಿ ಅತ್ಯಾಚಾರ ನಡೆಸಿದ್ದರು. ಬಳಿಕ ಕೊಲೆ ಮಾಡಿ, ಪೆಟ್ರೋಲ್ ಸುರಿದು ಶವನ್ನು ಸುಟ್ಟು ಹಾಕಿದ್ದರು. ನವೆಂಬರ್ 28ರ ಬೆಳಗ್ಗೆ ಶವ ಪತ್ತೆಯಾಗಿತ್ತು.
ಮಕ್ಕಳು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಶೀಘ್ರ ವಿಲೇವಾರಿಗೆ ಸಾವಿರಕ್ಕೂ ಹೆಚ್ಚು ತ್ವರಿತಗತಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕಾದ ಅಗತ್ಯವಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ಹೇಳಿತ್ತು.
ಒಟ್ಟು 1023 ವಿಶೇಷ ನ್ಯಾಯಾಲಯಗಳ ಸ್ಥಾಪನೆಗೆ 767.26 ಕೋಟಿ ರೂ.ಗಳ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಕೇಂದ್ರ ಸರ್ಕಾರ 474 ಕೋಟಿ ರೂ.ಗಳನ್ನು ಭರಿಸಲಿದೆ ಎಂದು ಕಾನೂನು ಸಚಿವಾಲಯ ತಿಳಿಸಿತ್ತು.












Click it and Unblock the Notifications