ಅತ್ತಿಬೆಲೆ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಂದು ಪಟಾಕಿ ಸ್ಪೋಟ ಪ್ರಕರಣ, ಹತ್ತು ಸಾವು
ಚೆನ್ನೈ, ಅಕ್ಟೋಬರ್ 17: ತಮಿಳುನಾಡಿನ ವಿರುದುನಗರ ಜಿಲ್ಲೆಯ ರೆಂಗಪಾಳ್ಯಂ ಮತ್ತು ಬೋಡಿ ರೆಡಿಯಾಪಟ್ಟಿ ಬಳಿಯ ಎರಡು ಪಟಾಕಿ ತಯಾರಿಕಾ ಘಟಕಗಳಲ್ಲಿ ಮಂಗಳವಾರ ಮಧ್ಯಾಹ್ನ ಸ್ಫೋಟ ಸಂಭವಿಸಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಐವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಪೋಟದಲ್ಲಿ ತೀವ್ರವಾಗಿ ಗಾಯಗೊಂಡ ಹಲವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ. ಪಟಾಕಿ ತಯಾರಿಕಾ ಕಾರ್ಖಾನೆಯ ಪ್ರವೇಶ ದ್ವಾರದಲ್ಲಿರುವ ಪಟಾಕಿ ಅಂಗಡಿಯ ಬಳಿ ಕೆಲವರು ಪರೀಕ್ಷೆಗಾಗಿ ಪಟಾಕಿ ಸಿಡಿಸಿದಾಗ ಸ್ಫೋಟ ಸಂಭವಿಸಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಖರೀದಿದಾರರು ಅದರ ಗುಣಮಟ್ಟವನ್ನು ಪರೀಕ್ಷಿಸಲು ಪಟಾಕಿಗಳನ್ನು ಸಿಡಿಸುವಾಗ, ಇದ್ದಕ್ಕಿದ್ದಂತೆ ಅಂಗಡಿಯೊಳಗೆ ಸ್ಫೋಟ ಸಂಭವಿಸಿದೆ. ಅಂಗಡಿಯಲ್ಲಿದ್ದ ಎಲ್ಲಾ ಪಟಾಕಿಗಳು ಸ್ಫೋಟಗೊಳ್ಳಲು ಪ್ರಾರಂಭಿಸಿದವು. ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಕ್ಟೋಬರ್ 08 ರಂದು ಸುಮಾರು ಮಧ್ಯಾಹ್ನ ಬೆಂಗಳೂರಿನ ಹೊರ ವಲಯದ ಆನೆ ಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ನಡೆದಿದ್ದ ಪಟಾಕಿ ಸ್ಪೋಟಿಸಿ 14 ಮಂದಿ ಸಾವನ್ನಪ್ಪಿದ್ದರು. ದುರಂತದ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿತ್ತು. ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು.
"ದುರಂತ ಸ್ಥಳದಲ್ಲಿ 20 ಮಂದಿ ಇದ್ದರು. ನಾಲ್ವರು ತಪ್ಪಿಸಿಕೊಂಡಿದ್ದಾರೆ. 13 ಮಂದಿಯ ಶವ ಪತ್ತೆಯಾಗಿದೆ. ಉಳಿದವರು ಏನಾದರೂ ಎಂದು ತನಿಖೆ ನಡೆಸಲಾಗುತ್ತಿದೆ. ಹಿಂದಿನ ಕಟ್ಟಡದಲ್ಲಿ ಏನಾದರೂ ಇದ್ದಾರೆಯೇ?. ಬೇರೆ ಎಲ್ಲಾದರೂ ಹೋದರೆ?. ಹಿಂದಿನ ಕಟ್ಟಡದಲ್ಲೂ ಪಟಾಕಿಗಳು ಇವೆಯಂತೆ. ಅದೂ ಅಪಾಯಕಾರಿ. ಹೀಗಾಗಿ ಎಚ್ಚರಿಕೆಯಿಂದ ಬಾಗಿಲು ತೆರೆಯಬೇಕಿದೆ" ಎಂದು ಪೊಲೀಸರು ಹೇಳಿದ್ದರು.












Click it and Unblock the Notifications