ಬಿಹಾರದಲ್ಲಿ ಧಾರ್ಮಿಕ ಮೆರವಣಿಗೆಗೆ ಟ್ರಕ್ ನುಗ್ಗಿ 12 ಮಂದಿ ದಾರುಣ ಸಾವು!
ಪಾಟ್ನಾ, ನವೆಂಬರ್ 21: ಧಾರ್ಮಿಕ ಮೆರವಣಿಗೆಗೆ ವೇಗವಾಗಿ ಬಂದ ಟ್ರಕ್ ನುಗ್ಗಿದ್ದರಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿರುವ ದಾರುಣ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
ರಾಜ್ಯ ರಾಜಧಾನಿಯಿಂದ ಸುಮಾರು 30 ಕಿ. ಮೀ. ದೂರದಲ್ಲಿರುವ ಉತ್ತರ ಬಿಹಾರ ಜಿಲ್ಲೆಯ ದೇಸ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ರಾತ್ರಿ 9 ಗಂಟೆಯ ಸುಮಾರಿಗೆ ಮೆರವಣಿಗೆಯು ರಸ್ತೆಬದಿಯಲ್ಲಿರುವ "ಪೀಪಲ್" ಮರದ ಮುಂದೆ ಸ್ಥಳೀಯ ದೇವತೆಯಾದ "ಭೂಮಿಯಾ ಬಾಬಾ" ಗೆ ಪ್ರಾರ್ಥನೆ ಸಲ್ಲಿಸಲು ಜಮಾಯಿಸಿತ್ತು. ಇದೇ ವೇಳೆ ಅನಾಹುತ ಸಂಭವಿಸಿದೆ.
ಈ ಅಪಘಾತದ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ಪರಿಹಾರವನ್ನು ಘೋಷಿಸಿದ್ದಾರೆ. "ಬಿಹಾರದ ವೈಶಾಲಿಯಲ್ಲಿ ನಡೆದ ಅಪಘಾತವು ದುಃಖಕರವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪ ತಿಳಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಪ್ರತಿ ಮೃತರ ಮುಂದಿನ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ಪರಿಹಾರವನ್ನು ನೀಡಲಾಗುವುದು. ಗಾಯಾಳುಗಳಿಗೆ 50,000 ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವಿಟರ್ನಲ್ಲಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ದೌಡಾಯಿಸಿದ ಶಾಸಕ ಮುಖೇಶ್ ರೌಶನ್
ಮಹುವಾ ವಿಧಾನಸಭಾ ಕ್ಷೇತ್ರದ ಆರ್ಜೆಡಿ ಶಾಸಕ ಮುಖೇಶ್ ರೌಶನ್, ಘಟನೆಯ ಸ್ಥಳಕ್ಕೆ ದೌಡಾಯಿಸಿದರು. ಈ ಅಪಘಾತದಲ್ಲಿ ಕನಿಷ್ಠ ಒಂಬತ್ತು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರರನ್ನು ಹಾಜಿಪುರ ಜಿಲ್ಲಾ ಕೇಂದ್ರದಲ್ಲಿರುವ ಸದರ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಮೂವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಪಾಟ್ನಾದ ಆಸ್ಪತ್ರೆಗೆ ದಾಖಲಿಸಲಾಗಿದೆ," ಎಂದು ಮಾಹಿತಿ ನೀಡಿದರು. ಮೃತಪಟ್ಟವರಲ್ಲಿ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ
ಮದುವೆಗೆ ಸಂಬಂಧಿಸಿದ ಸಂಪ್ರದಾಯದ ಭಾಗವಾಗಿ ಮೆರವಣಿಗೆಯನ್ನು ನಡೆಸಲಾಗುತ್ತಿತ್ತು. ಸುಲ್ತಾನಪುರ ಗ್ರಾಮದ ನಿವಾಸಿಯೊಬ್ಬರ ಮನೆಯಲ್ಲಿ ಕೆಲವೇ ದಿನಗಳಲ್ಲಿ ಮದುವೆ ನಿಗದಿಯಾಗಿತ್ತು. ಈ ಕುರಿತ ಧಾರ್ಮಿಕ ಆಚರಣೆ ಮಾಡುವಾಗ ಪಕ್ಕದ ಮಹನಾರ್-ಹಾಜಿಪುರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ವಾಹನ ಚಾಲಕನೇ ಟ್ಯಾಂಕರ್ ನಲ್ಲಿ ಸಿಕ್ಕು ಮೃತಪಟ್ಟಿರಬಹುದು ಎಂದು ವೈಶಾಲಿ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಕುಮಾರ್ ತಿಳಿಸಿದ್ದಾರೆ.

ಪೊಲೀಸರ ವಿರುದ್ಧ ಸ್ಥಳೀಯರ ಆಕ್ರೋಶ
ಬಿಹಾರದಲ್ಲಿ ಸಂಭವಿಸಿದ ಅಪಘಾತದ ಸ್ಥಳಕ್ಕೆ ಪೊಲೀಸರು ತಡವಾಗಿ ಆಗಮಿಸಿದ್ದರಿಂದ ಸ್ಥಳೀಯರು ಆಕ್ರೋಶಗೊಂಡಿದ್ದರು. ಸತ್ತ ಮೃತದೇಹಗಳ ಮುಂದೆ ಸಂಬಂಧಿಕರು ಕಣ್ಣೀರು ಹಾಕುತ್ತಾ ನಿಂತಿದ್ದರೆ, ಇನ್ನೊಂದು ಕಡೆಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ತಡ ಮಾಡಿದ್ದಕ್ಕೆ ಪೊಲೀಸರ ವಿರುದ್ಧ ಕೆಲವರು ಧಿಕ್ಕಾರ ಘೋಷಣೆಗಳನ್ನು ಕೂಗುವುದಕ್ಕೆ ಶುರು ಮಾಡಿದರು. ಇದರ ಮಧ್ಯೆ ತುರ್ತು ಗತಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಹೆಚ್ಚುವರಿ ಸಿಬ್ಬಂದಿಯನ್ನು ಕರೆಸಲಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದರು.

ಸಿಎಂ ನಿತೀಶ್ ಕುಮಾರ್, ಡಿಸಿಎಂ ತೇಜಸ್ವಿ ಯಾದವ್ ಸಂತಾಪ
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಮತ್ತು ಪ್ರತಿ ಸಂತ್ರಸ್ತರ ಕುಟುಂಬಕ್ಕೆ ನಿಯಮಗಳ ಅನುಸಾರ ಪರಿಹಾರವನ್ನು ತ್ವರಿತವಾಗಿ ವಿತರಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.












Click it and Unblock the Notifications