ವಾರಣಾಸಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 24ಕ್ಕೆ ಏರಿಕೆ
ವಾರಣಾಸಿ, ಅಕ್ಟೋಬರ್, 15: ಪ್ರಧಾನಿ ನರೇಂದ್ರಮೋದಿ ಪ್ರತಿನಿಧಿಸುವ ಪ್ರಸಿದ್ಧ ಪುಣ್ಯಕ್ಷೇತ್ರ ವಾರಣಾಸಿಯಲ್ಲಿ ಕಾಲ್ತುಳಿತ ಸಂಭವಿಸಿ 24 ಮಂದಿ ಮೃತಪಟ್ಟಿರುವ ಘಟನೆ ಶನಿವಾರ (ಅ.15) ನಡೆದಿದೆ.
ವಾರಣಾಸಿಯ ಮತ್ತು ಚಂಡೌಲಿ ನಡುವೆ ಸಂಪರ್ಕ ಕಲ್ಪಿಸುವ ರಾಜ್ ಘಾಟ್ ಸೇತುವೆ ಬಳಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. [700 ಬಲಿಪಡೆದ ಮೆಕ್ಕಾ ಕಾಲ್ತುಳಿತ ದುರಂತದ ಚಿತ್ರಗಳು]
ಹಿಂದೂ ಧಾರ್ಮಿಕ ಮುಖಂಡ ಜೈ ಗುರುದೇವ್ ಅವರು ಹಮ್ಮಿಕೊಂಡಿದ್ದ ಎರಡು ದಿನಗಳ ಅಧ್ಯಾತ್ಮಿಕ ಸಭಾ ಕಾರ್ಯಕ್ರಮ ನಿಮಿತ್ತ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪರಿಸ್ಥಿತಿ ಗಂಭೀರವಾಗಿದ್ದು, ಕೂಡಲೇ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಘಟನೆಯಲ್ಲಿ ಗಾಯಗೊಂಡಿರುವ ಪ್ರಶಾಂತ್ ಕುಮಾರ್ ಎಂಬುವವರು ಚೌಂಡುಲಿ ಜಿಲ್ಲಾ ನ್ಯಾಯಾಧೀಶರಿಗೆ ಮನವಿ ಮಾಡಿದ್ದಾರೆ.
ಘಟನೆ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು, ದುರಂತದ ವಿಷಯ ತಿಳಿದು ಅತೀವ ದುಃಖವಾಗಿದೆ, ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.
Deeply saddened by the loss of lives in the stampede in Varanasi. Condolences to the bereaved families. Prayers with those injured.
— Narendra Modi (@narendramodi) October 15, 2016
ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು ಅಗತ್ಯ ಸಹಾಯ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
I have spoken to officials & asked them to ensure all possible help to those affected due to the stampede in Varanasi.
— Narendra Modi (@narendramodi) October 15, 2016
ಪೊಲೀಸ್ ಇಲಾಖೆ, ಹಾಗೂ ರಕ್ಷಣಾ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಗಳಿಗೆ 2ಲಕ್ಷ ಹಾಗೂ ಗಾಯಗೊಂಡಿರುವ ವ್ಯಕ್ತಿಯ ಕಟುಂಬಗಳಿಗೆ ತಲಾ 50 ಸಾವಿರ ಪರಿಹಾರ ನೀಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಿಳಿಸಿದ್ದಾರೆ.
ಘಟನೆ ಸಂಬಂಧ ಉತ್ತರಪ್ರದೇಶ ಸರ್ಕಾರದ ವಕ್ತಾರರು ಹೇಳಿಕೆ ನೀಡಿದ್ದು, ಪರಿಸ್ಥತಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಘಟನೆಗೆ ಕಾರಣ ತಿಳಿಯುವ ಕುರಿತು ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಘಟನೆ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರತಿಕ್ರಿಯೆ ನೀಡಿದ್ದು, ಅಗತ್ಯ ರಕ್ಷಣೆ ಒದಗಿಸುವಂತೆ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.