ನರ್ಸರಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಪೋಷಕರ ಆಕ್ರೋಶ..ಮೂವರು ಅಮಾನತು
ಥಾಣೆ, ಆಗಸ್ಟ್ 20: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಶಾಲೆಯ ಅಟೆಂಡರ್ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಈ ಆರೋಪದ ಹಿನ್ನೆಲೆಯಲ್ಲಿ ಇಂದು ನೂರಾರು ಪೋಷಕರು ಶಾಲೆಗೆ ಮುತ್ತಿಗೆ ಹಾಕಿದ್ದು, ಆರೋಪಿ ಹಾಗೂ ಮಕ್ಕಳ ರಕ್ಷಣೆಯಲ್ಲಿ ಇರಬೇಕಾಗಿದ್ದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡಸಿದ್ದಾರೆ.
ಮೂರು ಹಾಗೂ ನಾಲ್ಕು ವರ್ಷದ ಬಾಲಕಿಯರ ಮೇಲೆ ಶಾಲೆಯಲ್ಲೇ ನಡೆದ ಲೈಂಗಿಕ ದೌರ್ಜನ್ಯ ಘಟನೆ ಖಂಡಿಸಿ, ಆಕ್ರೋಶಗೊಂಡ ನೂರಾರು ಪೋಷಕರು ಹಾಗೂ ಸ್ಥಳೀಯ ಸಂಘಟನೆಗಳು ಇಂದು ಬೆಳಗ್ಗೆ ಬದ್ಲಾಪುರ ರೈಲು ನಿಲ್ದಾಣಕ್ಕೆ ಜಮಾಯಿಸಿದ್ದು, ರೈಲು ಮಾರ್ಗದಲ್ಲಿ ಸಂಚಾರ ತಡೆದು ತೀವ್ರವಾಗಿ ಪ್ರತಿಭಟನೆ ನಡೆಸಿದರು. ಇದರಿಂದ ಇಂದು ಬದ್ಲಾಪುರದ ಮಾರ್ಗದಲ್ಲಿ ಚಲಿಸುತ್ತಿದ್ದ ರೈಲಿನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಒಂದಿಷ್ಟು ಪೋಷಕರು ಶಾಲೆಯ ಬಳಿ ಕೂಡ ಜಮಾಯಿಸಿದ್ದು, ಕೈಯಲ್ಲಿ ಕೆಲವು ಬೋರ್ಡ್ಗಳನ್ನು ಪ್ರದರ್ಶಿಸಿ, ಶಾಲೆಯ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿದ್ದು, ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪೋಷಕರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಶಾಲೆಯ ಆಡಳಿತ ಮಂಡಳಿ ಪೋಷಕರಲ್ಲಿ ಕ್ಷಮೆಯಾಚಿಸಿ ಕ್ರಮ ಕೈಗೊಂಡಿದೆ.
ಘಟನೆಯ ಹಿನ್ನೆಲೆ ಏನು..?
ಆಗಸ್ಟ್ 17ರಂದು ಶಿಶುವಿಹಾರದಲ್ಲಿ ಓದುತ್ತಿರುವ ಮೂರು ಮತ್ತು ನಾಲ್ಕು ವರ್ಷ ವಯಸ್ಸಿನ ಇಬ್ಬರು ಬಾಲಕಿಯರ ಮೇಲೆ ಶಾಲೆಯ ಅಟೆಂಡರ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆರೋಪಿ ಶಾಲೆಯ ಶೌಚಾಲಯದಲ್ಲಿ ಬಾಲಕಿಯರನ್ನು ನಿಂದಿಸಿದ್ದಲ್ಲದೇ, ಅನುಚಿತವಾಗಿ ಮುಟ್ಟಿದ್ದಾನೆ ಎಂದು ಬಾಲಕಿಯರು ಪೋಷಕರಲ್ಲಿ ಹೇಳಿಕೊಂಡಿದ್ದರು. ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು,ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಶಾಲಾ ಆಡಳಿತ ಮಂಡಳಿ ಕೂಡ ಪೋಷಕರ ಬಳಿ ಕ್ಷಮೆ ಯಾಚಿಸಿದೆ. ಅಲ್ಲದೇ ಇಂತಹ ಅಟೆಂಡರ್ಅನ್ನು ಸಂಸ್ಥೆಗೆ ನೀಡಿದ ಹೌಸ್ ಕೀಪಿಂಗ್ ಕಂಪನಿಯನ್ನು ಬ್ಲಾಕ್ ಲೀಸ್ಟ್ಗೆ ಸೇರಿಸಿದೆ. ಅಲ್ಲದೇ ಘಟನೆಯ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿಯು ಪ್ರಾಂಶುಪಾಲರು, ತರಗತಿ ಶಿಕ್ಷಕಿ ಮತ್ತು ಮಹಿಳಾ ಅಟೆಂಡರ್ರನ್ನು ಸಹ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.
ಈ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಶಾಲಾ ಆಡಳಿತ ಮಂಡಳಿ ಇನ್ನು ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಮಕ್ಕಳಿಗೆ ಮತ್ತಷ್ಟು ರಕ್ಷಣೆ ಕೊಡುವ ಬಗ್ಗೆ ಹಾಗೂ ಮಕ್ಕಳ ಸುರಕ್ಷತೆಗಾಗಿ ಮತ್ತಷ್ಟು ಮನ್ನೆಚ್ಚರಿಕೆ ಕ್ರಮ ವಹಿಸುವ ಬಗ್ಗೆ ಭರವಸೆ ನೀಡಿದೆ.
ಇನ್ನು ತಮ್ಮ ಮಕ್ಕಳ ಮೇಲಾದ ಲೈಂಗಿಕ ದೌರ್ಜನ್ಯ ಸಂಬಂಧ ದೂರು ನೀಡಲು ಠಾಣೆಗೆ ತೆರಳಿದಾಗ ಸರಿಯಾಗಿ ಸ್ಪಂದಿಸದ ಹಾಗೂ ಸಕಾಲಕ್ಕೆ ಕ್ರಮ ಕೈಗೊಳ್ಳದ ಪೊಲೀಸ್ ಸಿಬ್ಬಂದಿಯ ವಿರುದ್ಧವೂ ಕ್ರಮ ತೆಗೆದುಕೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾದ ಠಾಣೆಯ ಪೊಲೀಸ್ ಸಿಬ್ಬಂದಿಯನ್ನು ಬೇರೆ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.












Click it and Unblock the Notifications