Ips Officer Transfer: ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಎಲ್ಲಿ ?
Ips Officer Transfer: ದೆಹಲಿ ವಿಧಾನಸಭೆ ಚುನಾವಣೆಗೆ ಇನ್ನು ಕೇವಲ ನಾಲ್ಕು ದಿನಗಳು ಉಳಿದಿರುವಂತೆ ದೆಹಲಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ದೆಹಲಿ ಅಧಿಕಾರಿಗಳ ಬದಲಾವಣೆ ಸೇರಿದಂತೆ ಹಲವು ಮಹತ್ವದ ವಿಷಯಗಳು ದೆಹಲಿಯಲ್ಲಿ ನಡೆದಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಉತ್ತಮ ಆಡಳಿತ ನೀಡಿದ್ದ ಐಪಿಎಸ್ ಅಧಿಕಾರಿ ವಿಜಯ್ ಕುಮಾರ್ ಅವರನ್ನು ಜಮ್ಮು ಮತ್ತು ಕಾಶ್ಮೀರದಿಂದ ದೆಹಲಿಗೆ ವರ್ಗಾವಣೆ ಮಾಡಲಾಗಿದೆ. ದೆಹಲಿ ವಿಧಾನಸಭೆ ಚುನಾವಣೆ ಫೆಬ್ರವರಿ 5ಕ್ಕೆ ನಡೆಯಲಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚುನಾವಣೆ ಎನ್ನುವುದು ಸೂಕ್ಷ್ಮ ವಿಷಯವಾಗಿದೆ. ಹೀಗಾಗಿ, ಇಲ್ಲಿ ಹಲವು ಅಗತ್ಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. 2019ರಲ್ಲಿ 370 ನೇ ವಿಧಿಯನ್ನು ರದ್ದು ಮಾಡಿದ ಮೇಲೆ ಕಾಶ್ಮೀರದಲ್ಲಿ ಐಪಿಎಸ್ ಅಧಿಕಾರಿ ವಿಜಯ್ ಕುಮಾರ್ ಅವರು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಹೀಗಾಗಿ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿರುವಾಗ ಅವರನ್ನೇ ದೆಹಲಿಗೆ ವರ್ಗಾವಣೆ ಮಾಡಲಾಗಿದೆ.

ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಇನ್ನು ದೇಶದಲ್ಲಿ ಚುನಾವಣೆ ಹಾಗೂ ಭದ್ರತೆಯ ದೃಷ್ಟಿಯಿಂದ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ನಾಲ್ವರು ಐಪಿಎಸ್ ಅಧಿಕಾರಿಗಳಲ್ಲಿ ಕುಮಾರ್ ಅವರು ಸಹ ಒಬ್ಬರಾಗಿದ್ದಾರೆ. ಅರುಣಾಚಲ ಪ್ರದೇಶ- ಗೋವಾ-ಮಿಜೋರಾಂ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಅಧಿಕಾರಿಗಳನ್ನು ಬದಲಾಯಿಸಲಾಗಿದೆ ಎಂದು ಹೇಳಲಾಗಿದೆ. ಇನ್ನು ಐಪಿಎಸ್ ಅಧಿಕಾರಿ ವಿಜಯ್ ಕುಮಾರ್ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದರು. ಇದೀಗ ಅವರನ್ನು ದೆಹಲಿಗೆ ವರ್ಗಾವಣೆ ಮಾಡಲಾಗಿದೆ.
ಇನ್ನು ಐಪಿಎಸ್ ಅಧಿಕಾರಿ ಆನಂದ್ ಜೈನ್ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ. ಅವರನ್ನು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಹುದ್ದೆಯಿಂದ ಬಿಡುಗಡೆ ಮಾಡಲಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಸಶಸ್ತ್ರ ಎಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಖಡಕ್ ಆಫೀಸರ್: ಇನ್ನು ವಿಜಯ್ ಕುಮಾರ್ ಅವರು ಖಡಕ್ ಹಾಗೂ ಪ್ರಭಾವಿ ಪೊಲೀಸ್ ಅಧಿಕಾರಿ ಎನ್ನುವ ಖ್ಯಾತಿಯನ್ನು ಗಳಿಸಿದ್ದಾರೆ. ಮೂರು ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಯನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಕಾರಣಕ್ಕೆ ಅವರಿಗೆ ಈಚೆಗೆ ಗಣರಾಜ್ಯೋತ್ಸವದ ದಿನ ಶೌರ್ಯ ಪದಕ ನೀಡಿ ಗೌರವಿಸಲಾಗಿತ್ತು.
ಹೇಗಿದೆ ದೆಹಲಿ ಅಖಾಡ: ದೆಹಲಿ ವಿಧಾನಸಭೆ ಅತ್ಯಂತ ಚಿಕ್ಕ ವಿಧಾನಸಭೆಗಳಲ್ಲಿ ಒಂದಾಗಿದೆ. ದೆಹಲಿ ಕೇಂದ್ರಾಡಳಿತ ಪ್ರದೇಶವಾಗಿದ್ದು, ದೆಹಲಿ ವಿಧಾನಸಭೆಯ ಸಂಖ್ಯೆ 70 ಮಾತ್ರ. ದೆಹಲಿಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಇದೆ. ಕಾಂಗ್ರೆಸ್ - ಬಿಜೆಪಿ ಮತ್ತು ಎಎಪಿ ಗುದ್ದಾಡುತ್ತಿವೆ. ಆದರೆ ಈ ಬಾರಿ ನೇರ ಸ್ಪರ್ಧೆ ಇರುವುದು ಎಎಪಿ ಹಾಗೂ ಬಿಜೆಪಿಯ ನಡುವೆ.
ಈ ಎರಡು ಪಕ್ಷಗಳಲ್ಲಿ ಒಂದು ಪಕ್ಷ ಗೆದ್ದು ದೆಹಲಿಯಲ್ಲಿ ಸರ್ಕಾರ ರಚನೆ ಮಾಡಲಿದೆ ಎಂದೇ ಹೇಳಲಾಗುತ್ತಿದೆ. ಯಾಕೆಂದರೆ ಕಳೆದ ಎರಡು ಅವಧಿಯಿಂದ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ್ದು ಶೂನ್ಯ ಸಾಧನೆಯಾಗಿದೆ. ದೆಹಲಿ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿವೆ. ಕಳೆದ ಎರಡು ಅವಧಿಯಿಂದಲೂ ಎಎಪಿ ಗೆದ್ದಿದೆ. ತನ್ನ ಗ್ಯಾರಂಟಿ ಯೋಜನೆಗಳ ಮೂಲಕವೇ ಎಎಪಿ ಇಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆದರೆ, ಈ ಬಾರಿ ದೆಹಲಿಯಲ್ಲಿ ಎಎಪಿಗೆ ಬಿಜೆಪಿ ಬಿಗ್ ಫೈಟ್ ಕೊಡುತ್ತಿದೆ.












Click it and Unblock the Notifications