2 ದಿನಗಳಲ್ಲಿ ಭಾರತಕ್ಕೆ ಆಗಮಿಸಿದ 39 ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ದೃಢ
ನವದೆಹಲಿ, ಡಿಸೆಂಬರ್ 28: ಕಳೆದ ಎರಡು ದಿನಗಳಲ್ಲಿ ಭಾರತಕ್ಕೆ ಆಗಮಿಸಿದ ಮೂವತ್ತೊಂಬತ್ತು ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು 'ಎನ್ಡಿಟಿವಿ' ವರದಿ ಮಾಡಿದೆ.
ಪ್ರಯಾಣಿಕರಿಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ನಾಳೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.
ಕೋವಿಡ್ ಆತಂಕ: ಆರ್ಥಿಕ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಚಿಂತನೆ ಇಲ್ಲ: ಹುಬ್ಬಳ್ಳಿಯಲ್ಲಿ ಸುಧಾಕರ್ ಸ್ಪಷ್ಟನೆ
ಕೊರೊನಾ ವೈರಸ್ನ ಹೊಸ ತಳಿಗಳು ಚೀನಾದಲ್ಲಿ ಹೆಚ್ಚು ಕಂಡು ಬಂದಿದೆ. ಪ್ರತಿ ದಿನ ಲಕ್ಷಾಂತರ ಮಂದಿಗೆ ಸೋಂಕು ತಗಲುತ್ತಿದೆ. ಇದು ಜಗತ್ತಿನಾದ್ಯಂತ ತಲ್ಲಣಗಳನ್ನು ಸೃಷ್ಟಿಸಿದೆ.
ಈ ಕುರಿತು ಗಂಭೀರ ಕ್ರಮಗಳನ್ನು ತೆಗೆದುಕೊಂಡಿರುವ ಭಾರತ ಸರ್ಕಾರ ಜಿನೋಮ್ ಸಿಕ್ವೆನ್ಸಿಂಗ್ ಪರೀಕ್ಷೆ ನಡೆಸಲು ರಾಜ್ಯಗಳಿಗೆ ಸೂಚಿಸಿದೆ.
ಭಾರತದ ವಿಮಾನ ನಿಲ್ಲಾಣಗಳಿಗೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಟೆಸ್ಟ್ ಮಾಡುವುದನ್ನು ಕಡ್ಡಾಯಗೊಳಿಸಿದೆ.
ಈ ವಿಚಾರವಾಗಿ ಸಂಸತ್ನಲ್ಲಿ ಮಾತನಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವೀಯ ಅವರು 'ಜಾಗತಿಕ ಕೋವಿಡ್ ಪರಿಸ್ಥಿತಿಯನ್ನು ನಾವು ಗಮನಿಸುತ್ತಿದ್ದೇವೆ. ಅದಕ್ಕೆ ತಕ್ಕಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕೊರೊನಾ ಸೋಂಕಿ ಹೊಸ ರೂಪಾಂತರವನ್ನು ಸಮಯೋಚಿತವಾಗಿ ಗುರುತಿಸಲು ಜೀನೋಮ್-ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಲು ರಾಜ್ಯಗಳಿಗೆ ಸೂಚಿಸಿದ್ದೇನೆ' ಎಂದು ಹೇಳಿದ್ದಾರೆ.
ಕೊರೊನಾ ವೈರಸ್ ನಿರಂತರವಾಗಿ ವಿಕಸನಗೊಳ್ಳುತ್ತಿದೆ. ಇದು ಅಪಾಯಕಾರಿಯಾಗಿದೆ ಎಂದು ಮಾಂಡವಿಯಾ ತಿಳಿಸಿದ್ದಾರೆ.
ಕೋವಿಡ್ ಸೋಂಕು ಹರಡುವಿಕೆಯನ್ನು ನಿರ್ವಹಿಸುವಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಪೂರ್ವಭಾವಿ ಸಿದ್ದತೆ ಮಾಡಿಕೊಂಡಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರಗಳಿಗೆ ಕೇಂದ್ರವು ಹಣಕಾಸಿನ ನೆರವು ನೀಡಲಿದೆ ಎಂದೂ ಅವರು ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿಯೂ ಕೊರೊನಾ ವೈರಸ್ ಹರಡುವುದನ್ನು ತಡೆ ಹಿಡಿಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ ಬೂಸ್ಟರ್ ಡೋಸ್ಗಳನ್ನು ಜನರು ತೆಗೆದುಕೊಳ್ಳಬೇಕೆಂದು ರಾಜ್ಯ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಈ ಕುರಿತು ವಿಧಾನಸಭೆಯಲ್ಲಿ ಮನವಿ ಮಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು, 'ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸಬೇಕು. ಕೋವಿಡ್ ಬೂಸ್ಟರ್ ಡೋಸ್ಗಳನ್ನು ತೆಗೆದುಕೊಳ್ಳಬೇಕು' ಎಂದು ಜನರಿಗೆ ಮನವಿ ಮಾಡಿದ್ದಾರೆ.
ಈ ವರೆಗೆ ರಾಜ್ಯದಲ್ಲಿ ಕೇವಲ ಶೇ. 20 ರಷ್ಟು ಜನರು ಮಾತ್ರ ಕೋವಿಡ್ ಬೂಸ್ಟರ್ ಡೋಸ್ ತೆಗೆದುಕೊಂಡಿದ್ದಾರೆ ಎಂದೂ ಸುಧಾಕರ್ ಮಾಹಿತಿ ನೀಡಿದ್ದಾರೆ.
ಕೋವಿಡ್ ಬೂಸ್ಟರ್ ಡೋಸ್ ತೆಗೆದುಕೊಳ್ಳುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಸಬೇಕೆಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.