ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ: ಹರಿಯಾಣದಲ್ಲಿ ನಾಲ್ವರ ಬಂಧನ
ಚಂಡೀಗಢ , ಜುಲೈ. 03: ಕಳೆದ ಬುಧವಾರ ದಿಯೋಬಂದ್ನಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ.
ಹರಿಯಾಣ ಮತ್ತು ಉತ್ತರ ಪ್ರದೇಶ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಹರಿಯಾಣ ವಿಶೇಷ ಕಾರ್ಯಪಡೆಯ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಅಮನ್ ಕುಮಾರ್ ತಿಳಿಸಿದ್ದಾರೆ. ಆರೋಪಿಗಳನ್ನು ಅಂಬಾಲಾದ ಶಹಜಾದ್ಪುರ ಪ್ರದೇಶದಲ್ಲಿ ಬಂಧಿಸಲಾಗಿದೆ. ಆರೋಪಿಗಳನ್ನು ಹರಿಯಾಣ ಮೂಲದ ವಿಕಾಸ್ ಮತ್ತು ಉತ್ತರ ಪ್ರದೇಶದ ವಿಕಾಸ್, ಪ್ರಶಾಂತ್ ಮತ್ತು ಲೋವಿಶ್ ಎಂದು ಗುರುತಿಸಲಾಗಿದೆ.

ಆರೋಪಿ ವಿಕಾಸ್ ಹರಿಯಾಣದ ಕರ್ನಾಲ್ ಜಿಲ್ಲೆಯ ಗೊಂಡರ್ ಗ್ರಾಮಕ್ಕೆ ಸೇರಿದವರಾಗಿದ್ದರೆ, ಉಳಿದ ಮೂವರು ಉತ್ತರ ಪ್ರದೇಶದ ಸಹರಾನ್ಪುರ ಪ್ರದೇಶದ ರಂಖಂಡಿ ಗ್ರಾಮದವರು ಎಂದು ಡಿಎಸ್ಪಿ ತಿಳಿಸಿದ್ದಾರೆ. ಬಂಧಿತ ನಾಲ್ವರು ಆರೋಪಿಗಳಿಂದ ಯಾವುದೇ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿಲ್ಲ ಎಂದು ಅಮನ್ ಕುಮಾರ್ ಹೇಳಿದ್ದಾರೆ. ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ), ಪ್ರಶಾಂತ್ ಕುಮಾರ್, ಪ್ರಕರಣವು ನಮ್ಮ ಆದ್ಯತೆಯ ಮೇಲೆ ಇದೆ. ಅದರ ಮತ್ತು ತನಿಖೆಗಾಗಿ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ. ಆರೋಪಿಗಳ ವಿಚಾರಣೆ ಬಳಿಕ ದಾಳಿಯ ಹಿಂದಿನ ಉದ್ದೇಶ ಸ್ಪಷ್ಟವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಭೀಮ್ ಆರ್ಮಿಯ "ತಮ್ಮ ಸಮುದಾಯದ ವಿರುದ್ಧದ ಚಟುವಟಿಕೆಗಳು" ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಅವರ ಹೇಳಿಕೆಗಳಿಂದ ಕೋಪಗೊಂಡ ದಲಿತ ನಾಯಕನ ಮೇಲೆ ಹಲ್ಲೆ ನಡೆಸಿದ್ದೇವೆ ಎಂದು ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ ನಡೆಸಿದ ವ್ಯಕ್ತಿಗಳು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಜೂನ್ 28 ರಂದು, ಚಂದ್ರಶೇಖರ್ ಆಜಾದ್ ರಾವಣ್ (36) ಸಹರಾನ್ಪುರ ಜಿಲ್ಲೆಯ ದಿಯೋಬಂದ್ನಲ್ಲಿರುವ ಬೆಂಬಲಿಗರ ಮನೆಯಲ್ಲಿ 'ತೆರಾಹ್ವಿನ್' ಆಚರಣೆಗೆ ಹಾಜರಾಗಿದ್ದರು. ಅವರು ಹೊರಡುವಾಗ ದಾಳಿಕೋರರು ಅವರ ಎಸ್ಯುವಿ ಕಾರಿನ ಮೇಲೆ ನಾಲ್ಕು ಗುಂಡುಗಳನ್ನು ಹಾರಿಸಿದ್ದಾರೆ. ಇದರಿಂದ ಚಂದ್ರಶೇಖರ್ ಆಜಾದ್ ಗಾಯಗೊಂಡಿದ್ದು, ಮರುದಿನ ಸಹರಾನ್ಪುರದ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ನಂತರ ಡಿಸ್ಚಾರ್ಜ್ ಆಗಿದ್ದಾರೆ.
ಗಾಯಗೊಂಡ ಅವರು ಯುಪಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ಬಗ್ಗೆ ವಾಗ್ದಾಳಿ ನಡೆಸಿದ್ದರು. ಇತರ ನಾಯಕರು ಕೂಡ ಇದೇ ರೀತಿಯ ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. "ಇತರ ಯಾವುದೇ ರಾಜಕೀಯ ಪಕ್ಷಗಳ ಮುಖ್ಯಸ್ಥರು ಮತ್ತು ಅವರ ಬೆಂಬಲಿಗರ ಮೇಲೆ ಇಂತಹ ಘಟನೆಗಳು ಸಂಭವಿಸಬಹುದು" ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
"ಯುಪಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಮತ್ತು ಸರ್ಕಾರವು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದೆ. ಇದರಿಂದಾಗಿ ಸರ್ಕಾರದ ಬೆಂಬಲಿತ ಅಪರಾಧಿಗಳು ಹೆಚ್ಚಿನ ಉತ್ಸಾಹದಲ್ಲಿದ್ದಾರೆ" ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.












Click it and Unblock the Notifications