ಕಾಂಗ್ರೆಸ್ ಉನ್ನತ ಸಮಿತಿ ರಚಿಸಿದ ಮಲ್ಲಿಕಾರ್ಜುನ ಖರ್ಗೆ: ರಾಜ್ಯದ ಮೂವರಿಗೆ ಸ್ಥಾನ
ನವದೆಹಲಿ, ಅಕ್ಟೋಬರ್ 26: ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ವಹಿಸಿಕೊಂಡ ನಂತರ ಮಲ್ಲಿಕಾರ್ಜುನ ಖರ್ಗೆ ಬುಧವಾರ ತಮ್ಮ ಮೊದಲ ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಕೇಂದ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಬದಲಿಗೆ 47 ಸದಸ್ಯರ ಉನ್ನತ ಸಮಿತಿಯನ್ನು ರಚಿಸಿದ್ದಾರೆ.
ಕಾಂಗ್ರೆಸ್ ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ, ಹೊಸದಾಗಿ ರಚಿಸಲಾದ ಸಮಿತಿಯಲ್ಲಿ ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇದ್ದಾರೆ. ಇವರ ಜೊತೆಗೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಎಕೆ ಆಂಟನಿ, ಜೈರಾಮ್ ರಮೇಶ್, ರಣದೀಪ್ ಸುರ್ಜೆವಾಲಾ, ಅಂಬಿಕಾ ಸೋನಿ, ಅಜಯ್ ಮಾಕೆನ್, ಹರೀಶ್ ರಾವತ್, ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಇತರ ಪ್ರಮುಖ ನಾಯಕರಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.
ಕಾಂಗ್ರೆಸ್ ಹೊಸದಾಗಿ ರಚಿಸಿರುವ ಉನ್ನತ ಸಮಿತಿಯಲ್ಲಿ ಜಿ-23ರ ಭಾಗವಾಗಿರುವ ಆನಂದ್ ಶರ್ಮಾ ಅವರಿಗೂ ಸ್ಥಾನ ಕಲ್ಪಿಸಲಾಗಿದೆ. ಆದರೆ ಎಐಸಿಸಿ ಚುನಾವಣೆಯಲ್ಲಿ ಸ್ಪರ್ಧಿಸಿದ ಶಶಿ ತರೂರ್ಗೆ ಸ್ಥಾನವನ್ನು ನೀಡಿಲ್ಲ. ಈ ಕುರಿತು ಹಿರಿಯ ಕಾಂಗ್ರೆಸ್ ನಾಯಕರ ತಂಡವು ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದಿದೆ.
ಕರ್ನಾಟಕದಿಂದ ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ, ದಿನೇಶ್ ಗುಂಡೂರಾವ್ ಮತ್ತು ಎಚ್.ಕೆ. ಪಾಟೀಲ್ ಅವರು ಸ್ಥಾನ ಪಡೆದಿದ್ದಾರೆ. ಈ ಮೂಲಕ ಪಕ್ಷದ ಹಳೆಯ ನಿಷ್ಠರಿಗೆ ಉನ್ನತ ಸ್ಥಾನ ನೀಡಲಾಗಿದೆ.

ಉನ್ನತ ಮಟ್ಟದ ಸಮಿತಿ ರಚಿಸಿದ ಕಾಂಗ್ರೆಸ್
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಬದಲಾಗಿ ಈ ಉನ್ನತ ಸಮಿತಿಯನ್ನು ರಚನೆ ಮಾಡಲಾಗಿದೆ. ಇದು ಎಲ್ಲಾ ಪ್ರಮುಖ ವಿಷಯಗಳಲ್ಲಿ ಅಂತಿಮ ಅಧಿಕಾರವನ್ನು ಹೊಂದಿರುವ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾಗಲಿದೆ. ಪ್ರಮುಖವಾಗಿ, ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಶಶಿ ತರೂರ್ ಅವರಿಗೆ ಈ ಉನ್ನತ ಸಮಿತಿಯಲ್ಲಿ ಸ್ಥಾನ ನೀಡದಿರುವುದು ಚರ್ಚೆಯನ್ನು ಹುಟ್ಟು ಹಾಕಿದೆ.

ಸಿಡಬ್ಲ್ಯೂಸಿ ಸದಸ್ಯರಿಂದ ರಾಜೀನಾಮೆ ಸಲ್ಲಿಕೆ
ಬುಧವಾರ ಬೆಳಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದರು. ಆ ಮೂಲಕ ಹೊಸ ಮುಖ್ಯಸ್ಥರು ತಮ್ಮ ತಂಡವನ್ನು ಸ್ಥಾಪಿಸಲು ಅನುವು ಮಾಡಿಕೊಡುತ್ತಾರೆ. ಕಾಂಗ್ರೆಸ್ ಸಂವಿಧಾನದ ಪ್ರಕಾರ, ಮುಂದಿನ ವರ್ಷ ಮಾರ್ಚ್-ಏಪ್ರಿಲ್ನಲ್ಲಿ ನಡೆಯಲಿರುವ ಪಕ್ಷದ ಸರ್ವಸದಸ್ಯರ ಅಧಿವೇಶನದಲ್ಲಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯನ್ನು ಅಂಗೀಕರಿಸಲಾಗುತ್ತದೆ. ನೂತನ ಸಿಡಬ್ಲ್ಯುಸಿಯನ್ನು ಪೂರ್ಣಾವಧಿ ಅಧಿವೇಶನದ ನಂತರ ಖರ್ಗೆ ಮರುರಚಿಸಲಿದ್ದಾರೆ.

12 ಮಂದಿ ಆಯ್ಕೆ, 11 ಸದಸ್ಯರ ನಾಮ ನಿರ್ದೇಶನ
ಕಾಂಗ್ರೆಸ್ ಪಕ್ಷದ ಸಂವಿಧಾನದ ಪ್ರಕಾರ, ಸಿಡಬ್ಲ್ಯೂಸಿಯ 11 ಸದಸ್ಯರನ್ನು ನಾಮನಿರ್ದೇಶನ ಮಾಡಲಾಗುತ್ತದೆ. 12 ಮಂದಿಯನ್ನು ಆಯ್ಕೆ ಮಾಡಲಾಗುತ್ತದೆ. ಸಂಸತ್ತಿನಲ್ಲಿ ಪಕ್ಷದ ನಾಯಕರ ಜೊತೆಗೆ ಕಾಂಗ್ರೆಸ್ ಅಧ್ಯಕ್ಷರು ಸಹ ಕಾರ್ಯಕಾರಿ ಸಮಿತಿಯ ಸದಸ್ಯರಾಗಿರುತ್ತಾರೆ. ಆದರೆ, ಮಲ್ಲಿಕಾರ್ಜುನ ಖರ್ಗೆ ಆಯ್ಕೆಯನ್ನು ಅಂಗೀಕರಿಸುವವರೆಗೆ ಈ ಉನ್ನತ ಸಮಿತಿಯು ಸಿಡಬ್ಲ್ಯೂಸಿ ಆಗಿ ಕಾರ್ಯನಿರ್ವಹಿಸುತ್ತದೆ.

ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ
ಅಖಿಲ ಭಾರತ ಕಾಂಗ್ರೆಸ್ ಸಮಿತಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕರಿಸಿದರು. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಹಸ್ತಾಂತರ ಮಾಡಿದರು. ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ಸಿನ ಅಗ್ರಗಣ್ಯ ನಾಯಕರು ಹಾಜರಾಗಿದ್ದರು. ಸಂಸದ ರಾಹುಲ್ ಗಾಂಧಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಪಾಲ್ಗೊಂಡಿದ್ದರು.
ಕಳೆದ 80 ವರ್ಷದ ಮಲ್ಲಿಕಾರ್ಜುನ ಖರ್ಗೆ ಇನ್ನು ಮುಂದೆ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿದ್ದಾರೆ. 1972 ರಿಂದ 2008ರ ತನಕ 9 ಬಾರಿ ಶಾಸಕರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿದ್ದಾರೆ. 2009 ರಿಂದ 2019ರ ತನಕ 2 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.












Click it and Unblock the Notifications