ಚುನಾವಣಾ ಆಯೋಗದಲ್ಲಿ ವಿಶ್ವಾಸಾರ್ಹತೆ ಇಲ್ಲ: ರಾಷ್ಟ್ರಪತಿಗೆ ಮಾಜಿ ಅಧಿಕಾರಿಗಳ ಪತ್ರ
ನವದೆಹಲಿ, ಏಪ್ರಿಲ್ 9: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಕಾರ್ಯವೈಖರಿಯ ಕುರಿತು ಕಳವಳ ವ್ಯಕ್ತಪಡಿಸಿರುವ ಸುಮಾರು 66 ಮಾಜಿ ಅಧಿಕಾರಿಗಳು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಚುನಾವಣಾ ಆಯೋಗವು ವಿಶ್ವಾಸಾರ್ಹತೆಯ ಬಿಕ್ಕಟ್ಟಿನಿಂದ ಬಳಲುತ್ತಿದೆ. ಮತ್ತು ಚುನಾವಣಾ ಪ್ರಕ್ರಿಯೆಯ ಸಮಗ್ರತೆಗೆ ಅಪಾಯ ತಂದೊಡ್ಡಿದೆ ಎಂದು ಅವರು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ದುರ್ಬಲಗೊಂಡಿರುವ ಚುನಾವಣಾ ಆಯೋಗ ಈ ಸಾಂವಿಧಾನಿಕ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ಎಲ್ಲ ಕಾಲಕ್ಕೂ ಅತಿ ಕಡಿಮೆ ಮಟ್ಟಕ್ಕೆ ತಗ್ಗಿಸಿದೆ. ಆಯೋಗದ ವಿಶ್ವಾಸಾರ್ಹತೆ ಬಗ್ಗೆ ಜನರಲ್ಲಿ ನಂಬಿಕೆ ಕಳೆದುಹೋದರೆ ನಮ್ಮ ಪ್ರಜಾಪ್ರಭುತ್ವದ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಅಧಿಕಾರಿಗಳು ಪತ್ರದಲ್ಲಿ ಹೇಳಿದ್ದಾರೆ.

ಚುನಾವಣಾ ಆಯೋಗದ ಸ್ವಾತಂತ್ರ್ಯ, ನ್ಯಾಯಸಮ್ಮತ ಅಧಿಕಾರ, ಪಕ್ಷಾತೀತ ನಡೆ ಮತ್ತು ದಕ್ಷತೆ ಎಲ್ಲವೂ ಇಂದು ರಾಜಿಗೊಳಗಾಗುತ್ತಿವೆ. ಭಾರತದ ಪ್ರಜಾಪ್ರಭುತ್ವದ ಮುಖ್ಯ ನೆಲಗಟ್ಟಾಗಿರುವ ಚುನಾವಣಾ ಪ್ರಕ್ರಿಯೆಯ ಸಮಗ್ರತೆಗೆ ಇದು ಅಪಾಯ ಉಂಟುಮಾಡುತ್ತಿದೆ. ಕೇಂದ್ರದಲ್ಲಿನ ಆಡಳಿತ ಪಕ್ಷದಿಂದ ನೀತಿ ಸಂಹಿತೆಯ ಉಲ್ಲಂಘನೆ, ದುರ್ಬಳಕೆಗಳು ನಡೆಯುತ್ತಿರುವುದು ನೋಡಿ ಬೇಸರವಾಗುತ್ತಿದೆ ಎಂದು ಹೇಳಿದ್ದಾರೆ.
ಐದು ಪುಟಗಳ ಪತ್ರದಲ್ಲಿ ಮಾಜಿ ಅಧಿಕಾರಿಗಳು ಚುನಾವಣಾ ಆಯೋಗದ ಜತೆಗೆ ಕೇಂದ್ರ ಸರ್ಕಾರದ ವಿರುದ್ಧವೂ ಆರೋಪ ಮಾಡಿದ್ದಾರೆ.
ನರೇಂದ್ರ ಮೋದಿ ಅವರ ಜೀವನ ಆಧಾರಿತ ಪಿಎಂ ನರೇಂದ್ರ ಮೋದಿ ಸಿನಿಮಾ ವಿಚಾರವನ್ನೂ ಅವರು ಪ್ರಸ್ತಾಪಿಸಿದ್ದಾರೆ. ಭಾರತೀಯ ಸೇನೆಯನ್ನು 'ಮೋದಿ ಅವರ ಸೇನೆ' ಎಂದಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ ಚುನಾವಣಾ ಆಯೋಗ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.












Click it and Unblock the Notifications