ಕೊರೊನಾ ಕೊಟ್ಟ ಸುದ್ದಿ: 19 ರಾಜ್ಯ/ಕೇಂದ್ರಾಡಳಿತ ಪ್ರದೇಶದಲ್ಲಿ ಒಂದೇ ಒಂದು ಸಾವಿಲ್ಲ!
ನವದೆಹಲಿ, ಫೆಬ್ರವರಿ.09: ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ದೃಷ್ಟಿಯಿಂದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನವನ್ನು ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಇನ್ನೊಂದು ದಿಕ್ಕಿನಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಸಹ ಇಳಿಮುಖವಾಗುತ್ತಿದೆ.
ಕಳೆದ 25 ದಿನಗಳಲ್ಲಿ 66 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ದೇಶಾದ್ಯಂತ ಇದುವರೆಗೂ 66,11,561 ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಜಿಲ್ಲಾಧಿಕಾರಿ ಸೇರಿದಂತೆ ಸರ್ಕಾರದ ಪ್ರಮುಖ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಎರಡನೇ ಹಂತದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಲಾಗಿದ್ದು, ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಕೊರೊನಾವೈರಸ್ ಲಸಿಕೆ ವಿತರಣೆಯ ಟಾಪ್-5 ರಾಜ್ಯಗಳು
ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು
ಉತ್ತರ ಪ್ರದೇಶ - 6,73,542
ಗುಜರಾತ್ - 5,72,412
ಮಹಾರಾಷ್ಟ್ರ - 5,36,436
ರಾಜಸ್ಥಾನ - 4,91,543
ಕರ್ನಾಟಕ - 4,41,692

19 ಕೇಂದ್ರಾಡಳಿತ/ರಾಜ್ಯಗಳಲ್ಲಿ ಒಂದೇ ಒಂದು ಸಾವಿಲ್ಲ
ಭಾರತದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುತ್ತಿರುವವರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊವಿಡ್-19 ಮಹಾಮಾರಿಗೆ 94 ಮಂದಿ ಸಾವನ್ನಪ್ಪಿದ್ದಾರೆ. ಆದರೆ 19 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾವೈರಸ್ ಸೋಂಕಿನಿಂದ ಒಂದೇ ಒಂದು ಸಾವಿನ ಪ್ರಕರಣ ದಾಖಲಾಗಿಲ್ಲ. ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನ, ಒಡಿಶಾ, ಆಂಧ್ರ ಪ್ರದೇಶ, ಜಮ್ಮು ಕಾಶ್ಮೀರ, ಜಾರ್ಖಂಡ್, ಪುದುಚೇರಿ, ಮಣಿಪುರ್, ನಾಗಾಲ್ಯಾಂಡ್, ಲಕ್ಷದ್ವೀಪ, ಮೇಘಾಲಯ, ಸಿಕ್ಕಿಂ, ಲಡಾಖ್, ಮಿಜೋರಾಂ, ಅರುಣಾಚಲ ಪ್ರದೇಶ, ತ್ರಿಪುರಾ, ದಿಯು ಮತ್ತು ದಮನ್ ನಲ್ಲಿ ಒಂದೇ ಒಂದು ಸಾವಿನ ಪ್ರಕರಣಗಳು ದಾಖಲಾಗಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲೂ ಗಣನೀಯ ಇಳಿಕೆ
ಕೊರೊನಾವೈರಸ್ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ದೇಶದಲ್ಲಿ ಒಟ್ಟು 1,41,511 ಸಕ್ರಿಯ ಪ್ರಕರಣಗಳಿದ್ದು, 33 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 5000ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿವೆ. ದಿಯು-ದಮನ್, ಅರುಣಾಚಲ ಪ್ರದೇಶ, ತ್ರಿಪುರಾ, ಎಎನ್ ದ್ವೀಪ, ಮಿಜೋರಾಂ, ಲಡಾಖ್, ಸಿಕ್ಕಿಂ, ಲಕ್ಷದ್ವೀಪ, ಮಣಿಪುರ, ನಾಗಾಲ್ಯಾಂಡ್, ಮೇಘಾಲಯ, ಚಂಡೀಘರ್, ಪುದುಚೇರಿ, ಹಿಮಾಚಲ ಪ್ರದೇಶ, ಜಾರ್ಖಂಡ್, ಬಿಹಾರ, ಜಮ್ಮು-ಕಾಶ್ಮೀರ, ಗೋವಾ, ಒಡಿಶಾ, ಉತ್ತರಾಖಂಡ್, ಹರಿಯಾಣ, ಆಂಧ್ರ ಪ್ರದೇಶ, ದೆಹಲಿ, ರಾಜಸ್ಥಾನ, ಅಸ್ಸಾಂ, ತೆಲಂಗಾಣ, ಮಧ್ಯಪ್ರದೇಶ, ಗುಜರಾತ್, ಪಂಜಾಬ್, ಉತ್ತರ ಪ್ರದೇಶ, ಛತ್ತೀಸ್ ಗಢ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ 5000ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿವೆ.

11067 ಮಂದಿಗೆ ಕೊರೊನಾವೈರಸ್ ಪಾಸಿಟಿವ್
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11067 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,08,58,371ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 13,087 ಜನರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 1,05,61,608 ಕೊವಿಡ್-19 ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications