ಆಂಧ್ರ ಪ್ರದೇಶ: ಪರೀಕ್ಷೆಯ ಫಲಿತಾಂಶದ ನಂತರ 48 ಗಂಟೆಗಳಲ್ಲಿ 9 ಶಾಲಾ ವಿದ್ಯಾರ್ಥಿಗಳ ಆತ್ಮಹತ್ಯೆ
ಹೈದರಾಬಾದ್, ಏಪ್ರಿಲ್. 29: ಆಂಧ್ರಪ್ರದೇಶದ ಮಧ್ಯಂತರ ಪರೀಕ್ಷಾ ಮಂಡಳಿಯು ಬುಧವಾರ 11 ಮತ್ತು 12 ನೇ ತರಗತಿಯ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಫಲಿತಾಶ ಪ್ರಕಟಣೆ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಒಂಬತ್ತು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನಿಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.
ಸುಮಾರು 10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 11ನೇ ತರಗತಿಯಲ್ಲಿ ಶೇ 61ರಷ್ಟು ಉತ್ತೀರ್ಣರಾಗಿದ್ದರೆ, 12ನೇ ತರಗತಿಯಲ್ಲಿ ಶೇ 72ರಷ್ಟು ಫಲಿತಾಂಶ ಬಂದಿದೆ.

17 ವರ್ಷದ ಬಿ ತರುಣ್ ಎಂಬ ವಿದ್ಯಾರ್ಥಿ ಶ್ರೀಕಾಕುಳಂ ಜಿಲ್ಲೆಯಲ್ಲಿ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಜಿಲ್ಲೆಯ ದಂಡು ಗೋಪಾಲಪುರಂ ಗ್ರಾಮದವರಾದ ಇಂಟರ್ಮೀಡಿಯೇಟ್ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ ಇವರು ಹಲವು ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದರಿಂದ ಮನನೊಂದಿದ್ದರು ಎನ್ನಲಾಗಿದೆ.
ಮಲ್ಕಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿನಾಧಪುರಂನಲ್ಲಿರುವ ತನ್ನ ನಿವಾಸದಲ್ಲಿ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಕೆ ವಿಶಾಖಪಟ್ಟಣಂ ಜಿಲ್ಲೆಯವಳು. ಅಖಿಲಶ್ರೀ ಅವರು ಇಂಟರ್ಮೀಡಿಯೇಟ್ ಮೊದಲ ವರ್ಷದ ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾದ ನಂತರ ಅಸಮಾಧಾನಗೊಂಡಿದ್ದರು ಎಂದು ವರದಿಯಾಗಿದೆ.

ಮತ್ತೊಬ್ಬ 18 ವರ್ಷದ ಯುವಕ ವಿಶಾಖಪಟ್ಟಣಂನ ಕಂಚರಪಾಲೆಂ ಪ್ರದೇಶದಲ್ಲಿನ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾರೆ. ಅವರು ದ್ವಿತೀಯ ವರ್ಷದಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣರಾಗಿದ್ದರು. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಇಬ್ಬರು 17 ವರ್ಷದ ವಿದ್ಯಾರ್ಥಿಗಳು ಎಪಿ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೆ, ಅದೇ ಜಿಲ್ಲೆಯಲ್ಲಿ ಬಾಲಕನೊಬ್ಬ ಕೀಟನಾಶಕ ಸೇವಿಸಿ ಸಾವನ್ನಪ್ಪಿದ್ದಾರೆ.
ಮತ್ತೊಬ್ಬ 17 ವರ್ಷದ ವಿದ್ಯಾರ್ಥಿ ಅನಕಾಪಲ್ಲಿಯಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂಟರ್ ಮೀಡಿಯೇಟ್ ಮೊದಲ ವರ್ಷದಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕಾಗಿ ಆತ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಭಾರತದ ಪ್ರೀಮಿಯರ್ ಕಾಲೇಜುಗಳಲ್ಲಿ ಆತ್ಮಹತ್ಯೆಗಳ ಸರಣಿ ಮುಂದುವರೆಯುತ್ತಿರುವ ಬೆನ್ನಲ್ಲೇ ಈ ಆಘಾತಕಾರಿ ಸುದ್ದಿ ವರದಿಯಾಗುತ್ತಿವೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿ) ವಿವಿಧ ಕ್ಯಾಂಪಸ್ಗಳಲ್ಲಿ ಈ ವರ್ಷ ನಾಲ್ಕು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಫೆಬ್ರವರಿಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಸಂತ್ರಸ್ತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದ ಅವರು, ನಮ್ಮ ಶಿಕ್ಷಣ ಸಂಸ್ಥೆಗಳು ಎಲ್ಲಿ ಎಡವುತ್ತಿವೆ ಎಂಬ ಬಗ್ಗೆ ಆತಂಕ ಹೊರಹಾಕಿದ್ದರು.
ಆತ್ಮಹತ್ಯೆ ಅಪರಾಧವಾಗಿದೆ. ಮಾನಸಿಕ ಚಿಕಿತ್ಸೆಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ.
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications