ನೂತನವಾಗಿ ಆಯ್ಕೆಯಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಗುಂಡಿಕ್ಕಿ ಹತ್ಯೆ
ಕೋಲ್ಕತ್ತಾ, ಜುಲೈ 29: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಹೊಸದಾಗಿ ಚುನಾಯಿತರಾದ ಟಿಎಂಸಿ ಬೆಂಬಲಿತ ಪಂಚಾಯತ್ ಸದಸ್ಯನನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಅವರ ಜೊತೆಗಿದ್ದ ಮತ್ತೊಬ್ಬರು ಗುಂಡು ತಗುಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆಗೆ ರಾಜಕೀಯ ವೈಷಮ್ಯವೇ ಅಥವಾ ವೈಯಕ್ತಿಕ ದ್ವೇಷದಿಂದ ಈ ಕೊಲೆ ನಡೆದಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಗ್ರಾಹತ್ ಪೂರ್ವ ಗ್ರಾಮ ಪಂಚಾಯತ್ ಸದಸ್ಯ ಮೈಮೂರ್ ಘರಾಮಿ ಶುಕ್ರವಾರ ತಡರಾತ್ರಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಅಪರಿಚಿತ ಬಂದೂಕುಧಾರಿಗಳು ಅವರ ಮೇಲೆ ಗುಂಡು ಹಾರಿಸಿದರು ಮತ್ತು ಅವರ ಸಾವನ್ನು ಖಚಿತಪಡಿಸಿಕೊಳ್ಳಲು, ಹರಿತವಾದ ವಸ್ತುವಿನಿಂದ ಇರಿದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘರಾಮಿ ಜೊತೆಗಿದ್ದ ವ್ಯಕ್ತಿ ಶಹಜಹಾನ್ ಮೊಲ್ಲಾ ಅವರ ಸಹಾಯಕ್ಕೆ ಧಾವಿಸಿದರು ಆದರೆ ಅವರ ಮೇಲೂ ಗುಂಡು ಹಾರಿಸಲಾಯಿತು. ಇಬ್ಬರನ್ನು ಮೊದಲು ಮಗ್ರಾಹತ್ ಗ್ರಾಮೀಣ ಆಸ್ಪತ್ರೆಗೆ, ನಂತರ ಡೈಮಂಡ್ ಹಾರ್ಬರ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಘರಾಮಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು, ಮೊಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ಹೇಳಿದರು.
ರಾಜ್ಯದಲ್ಲಿ ಇತ್ತೀಚೆಗಷ್ಟೇ ನಡೆದ ಮೂರು ಹಂತದ ಪಂಚಾಯತ್ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಚುನಾವಣಾ ಹಿಂಸಾಚಾರದಲ್ಲಿ ಹಲವಾರು ಸಾವುಗಳು ವರದಿಯಾಗಿವೆ.












Click it and Unblock the Notifications