ಸುಪ್ರೀಂಕೋರ್ಟ್ ಕೈ ಸೇರಿದ ಪೆಗಾಸಸ್ ಸಮಿತಿ ವರದಿ
ನವದೆಹಲಿ, ಆಗಸ್ಟ್ 02: ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ರಾಜಕಾರಣಿಗಳು, ಪತ್ರಕರ್ತರು ಮತ್ತು ಕಾರ್ಯಕರ್ತರ ಮೇಲೆ ಕಣ್ಗಾವಲು ಇರಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ ಸಮಿತಿ ಸುಪ್ರೀಂಕೋರ್ಟ್ಗೆ ತನ್ನ ವರದಿ ಸಲ್ಲಿಸಿದೆ.
ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಆರ್. ವಿ. ರವೀಂದ್ರನ್ ಮೇಲ್ವಿಚಾರಣೆಯಲ್ಲಿ ರಚಿಸಲಾದ ಮೂವರು ಸದಸ್ಯರ ಸಮಿತಿಯು ಕಳೆದ ವಾರವೇ ಅಂತಿಮ ವರದಿಯನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಿದೆ. ಸಮಿತಿಯು ಸಲ್ಲಿಸಿದ ವರದಿಯಲ್ಲಿನ ವಿಷಯಗಳು ಗೌಪ್ಯವಾಗಿರುತ್ತವೆ.
ಪೆಗಾಸಸ್ ಪ್ರಕರಣ; ಸುಪ್ರೀಂಗೆ ಸಲ್ಲಿಕೆಯಾದ ಮಧ್ಯಂತರ ವರದಿಯಲ್ಲೇನಿದೆ?
ಈಗಾಗಲೇ ಸಮಿತಿಯ ವರದಿ ಪಡೆದುಕೊಂಡಿರುವ ಸುಪ್ರೀಂಕೋರ್ಟ್ ಈ ಪ್ರಕರಣದ ವಿಚಾರಣೆೆಗೆ ಇನ್ನೂ ಯಾವುದೇ ದಿನಾಂಕವನ್ನು ನಿಗದಿಪಡಿಸಿಲ್ಲ ಎಂದು ತಿಳಿದು ಬಂದಿದೆ. ಮುಂಬರುವ ಆಗಸ್ಟ್ 12ರಂದು ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಪೆಗಾಸಸ್ ಸಮಿತಿಯಲ್ಲಿ ಇರುವ ಸದಸ್ಯರು ಯಾರು?
ಸಮಿತಿಯು ಗಾಂಧಿನಗರದ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಡೀನ್ ಡಾ ನವೀನ್ ಕುಮಾರ್ ಚೌಧರಿ, ಕೇರಳದ ಅಮೃತ ವಿಶ್ವ ವಿದ್ಯಾಪೀಠದ ಪ್ರಾಧ್ಯಾಪಕ ಡಾ ಪ್ರಭಾಹರನ್ ಪಿ ಮತ್ತು ಐಐಟಿ ಬಾಂಬೆಯ ಇನ್ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ ಡಾ ಅಶ್ವಿನ್ ಅನಿಲ್ ಗುಮಾಸ್ತೆ ಅವರನ್ನು ಒಳಗೊಂಡಿದೆ.
ಫೋರೆನ್ಸಿಕ್ ವಿಶ್ಲೇಷಣೆಗಾಗಿ ಸಮಿತಿಯು ಮೇ ವೇಳೆಗೆ 29 ಸಾಧನಗಳನ್ನು ಪರೀಕ್ಷಿಸಿದೆ. "ಈ ವಿಷಯವು ಗೌಪ್ಯವಾಗಿದ್ದು, ನಿರ್ದಿಷ್ಟ ಕಾರ್ಯವಿಧಾನವನ್ನು ಅನುಸರಿಸಬೇಕಾಗಿದೆ. ಆದ್ದರಿಂದ ಸಮಿತಿಯ ವರದಿಯ ಬಗ್ಗೆ ಚರ್ಚಿಸುವುದಕ್ಕೆ ಆಗುವುದಿಲ್ಲ," ಎಂದು ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆ.
ಚುರುಕಿನ ತನಿಖೆಗೆ ಸೂಚನೆ ನೀಡಿದ್ದ ಸುಪ್ರೀಂಕೋರ್ಟ್
ಕಳೆದ ಮೇ 20ರಂದು ಮೊದಲ ಗಡುವು ನಿಗದಿಪಡಿಸಿದ್ದ ಸುಪ್ರೀಂಕೋರ್ಟ್, ಅಂತಿಮ ವರದಿಯನ್ನು ಸಲ್ಲಿಸಲು ಜೂನ್ 20ರವರೆಗೆ ಸಮಯವನ್ನು ವಿಸ್ತರಿಸಿತ್ತು. ಈ ಹಂತದಲ್ಲಿ ಪೆಗಾಸಸ್ ಕುರಿತು ತನಿಖೆಯನ್ನು ತ್ವರಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಸಮಿತಿಗೆ ಸೂಚನೆ ನೀಡಿತ್ತು. ಅದಾಗ್ಯೂ ನಿಗದಿಪಡಿಸಿದ ಸಮಯಕ್ಕಿಂತ ವಿಳಂಬವಾಗಿ ಅಂತಿಮ ವರದಿ ಸಿದ್ಧವಾಗಿದ್ದು, ಒಂದು ವಾರದ ಹಿಂದೆ ಸುಪ್ರೀಂಕೋರ್ಟ್ ಕೈ ಸೇರಿದೆ.
ಪೆಗಾಸಸ್ ಬೇಹುಗಾರಿಕೆ ಪ್ರಕರಣದ ಹಿನ್ನೆಲೆ
ಜಾಗತಿಕ ತನಿಖಾ ಸಂಸ್ಥೆಗಳು ಮಾಡಿರುವ ವರದಿಯ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಮಾರಾಟವಾಗಿರುವ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿಕೊಂಡು ವಿರೋಧ ಪಕ್ಷದ ಹಲವು ನಾಯಕರ ಮೇಲೆ ಕಣ್ಗಾವಲು ಇಡಲಾಗಿದೆ. ದೇಶದ ಪ್ರಮುಖ 142ಕ್ಕೂ ಹೆಚ್ಚು ರಾಜಕೀಯ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಯ ಬಗ್ಗೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.
ಅಲ್ಲದೇ, ದೇಶದ 500ಕ್ಕೂ ಹೆಚ್ಚು ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.
ಪೆಗಾಸಸ್ ಬೇಹುಗಾರಿಕೆ ಬಗ್ಗೆ ಜಾಗತಿಕ ವಲಯದಲ್ಲಿ ಸುದ್ದಿ
ಜಾಗತಿಕ ಸುದ್ದಿ ಸಂಸ್ಥೆಗಳಾಗಿರುವ ವಾಶಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್, ಲೇ ಮೊಂಡೆ ಜೊತೆ ಸಹಯೋಗ ಹೊಂದಿರುವ 'ದಿ ವೈರ್' ಪೆಗಾಸಸ್ ಬೇಹುಗಾರಿಕೆ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಮಾಧ್ಯಮ ಪಾಲುದಾರ ಸಂಸ್ಥೆ ಆಗಿರುವ ಪ್ಯಾರಿಸ್ ಮೂಲದ 'ನಾನ್ ಪ್ರಾಫಿಟ್ ಆರ್ಗನೈಸೇಷನ್ ಫಾರ್ಬಿಡನ್ ಸ್ಟೋರೀಸ್ ಮತ್ತು ರೈಟ್ಸ್ ಗ್ರೂಪ್ ಅಮ್ನೆಸ್ಟಿ ಇಂಟರ್ ನ್ಯಾಷನಲ್' ಸಂಸ್ಥೆಗಳು ಈ ಕುರಿತು ತನಿಖೆ ನಡೆಸಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಿವೆ. ಇಸ್ರೇಲ್ ಕಣ್ಗಾವಲು ಕಂಪನಿ ಎನ್ಎಸ್ಒ ಗ್ರೂಪ್ನ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಜಗತ್ತಿನಾದ್ಯಂತ ಸಾವಿರಾರು ಗಣ್ಯರ ಮೊಬೈಲ್ ಸಂಖ್ಯೆಯನ್ನು ಕದಿಯಲಾಗಿದೆ ಎಂದು ತನಿಖಾ ವರದಿಯಿಂದ ಗೊತ್ತಾಗಿದೆ. ವಿಶ್ವದಲ್ಲಿ ಒಟ್ಟು 50,000ಕ್ಕೂ ಅಧಿಕ ಮೊಬೈಲ್ ಸಂಖ್ಯೆಗಳನ್ನು ಕದ್ದುಕೊಳ್ಳಲಾಗಿದೆ ಎಂದು ತಿಳಿದು ಬಂದಿತ್ತು.
ಪೆಗಾಸಸ್ ಬೇಹುಗಾರಿಕೆ ತಂತ್ರಾಂಶಕ್ಕೆ ಇಸ್ರೇಲ್ ಮೂಲ ನೆಲೆ
ಪೆಗಾಸಸ್ ಬೇಹುಗಾರಿಕೆ ತಂತ್ರಾಂಶಕ್ಕೆ ಸಂಬಂಧಿಸಿದಂತೆ NSO ಗ್ರೂಪ್ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಇಸ್ರೇಲ್ ಅಂತರ್-ಸಚಿವಾಲಯದ ತಂಡವನ್ನು ಸ್ಥಾಪಿಸಿತು. ಹಲವಾರು ಸಂಸ್ಥೆಗಳ ಪ್ರತಿನಿಧಿಗಳು ಜುಲೈನಲ್ಲಿ NSO ಕಚೇರಿಗೆ ಭೇಟಿ ನೀಡಿದರು. ಸೈಬರ್ ಉತ್ಪನ್ನಗಳನ್ನು ರಫ್ತು ಮಾಡಲು "ಪರವಾನಗಿಗಳನ್ನು ನೀಡುವ ಸಂಪೂರ್ಣ ವಿಷಯದ ಪರಿಶೀಲನೆ" ಯ ಬಗ್ಗೆ ಸರ್ಕಾರವು ಸುಳಿವು ನೀಡಿತ್ತು.
Recommended Video