Breaking: ಹಿಮಾಚಲ ಪ್ರದೇಶ- ಆಪ್ನಿಂದ 54 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
ನವದೆಹಲಿ, ಅಕ್ಟೋಬರ್ 20: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾಗುತ್ತಿದ್ದಂತೆ, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ನವೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಹೊರಬೀಳಲಿದೆ. 68 ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ ಎಂದು ಹೇಳಲಾಗುತ್ತಿದೆ. ಆದರೆ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಹಿಮಾಚಲ ಪ್ರದೇಶದಲ್ಲಿ ಖಾತೆ ತೆರೆಯಲು ಎಲ್ಲ ರೀತಿಯ ತಯಾರಿ ನಡೆಸಿದೆ.
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಈಗಾಗಲೇ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಆಮ್ ಆದ್ಮಿ ಪಕ್ಷವು ತನ್ನ ಮೊದಲ ಪಟ್ಟಿಯಲ್ಲಿ ಕೇವಲ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಬುಧವಾರ ರಾತ್ರಿ ಬಿಡುಗಡೆ ಮಾಡಿರುವ ಎರಡನೇ ಪಟ್ಟಿಯಲ್ಲಿ 54 ಅಭ್ಯರ್ಥಿಗಳನ್ನು ಎಎಪಿ ಹೆಸರಿಸಿದೆ. ಇನ್ನುಳಿದ ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಬೇಕಿದೆ.
ಆಡಳಿತಾರೂಢ ಬಿಜೆಪಿಯು 62 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಿತ್ತು. ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರನ್ನು ಸೆರಾಜ್ ಕ್ಷೇತ್ರದಿಂದ ಕಣಕ್ಕೆ ಇಳಿಸಿತ್ತು.

ಈ ಕ್ಷೇತ್ರದಿಂದ ಜೈರಾಮ್ ಠಾಕೂರ್ ವಿರುದ್ಧ ಗೀತಾನಂದ ಠಾಕೂರ್ ಅವರನ್ನು ಎಎಪಿ ಕಣಕ್ಕಿಳಿಸಿದೆ. ಮಾಜಿ ಸಚಿವ ರವೀಂದ್ರ ಸಿಂಗ್ ರವಿ ಅವರನ್ನು ಸುಲ್ಲಾ ಕ್ಷೇತ್ರದಿಂದ ಕಣಕ್ಕಿಳಿಸಿದೆ.
ಎಎಪಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೂವರು ಮಹಿಳಾ ಅಭ್ಯರ್ಥಿಗಳಿದ್ದಾರೆ. ನೂರ್ಪುರದಿಂದ ಮನಿಶಾ ಕುಮಾರಿ, ಸುಂದರ ನಗರದಿಂದ ಪೂಜಾ ಠಾಕೂರ್ ಮತ್ತು ಭೋರಂಜ್ನಿಂದ ರಜನಿ ಕೌಶಲ್ ಕಣಕ್ಕಿಳಿಯಲಿದ್ದಾರೆ.

ದೆಹಲಿ ಮತ್ತು ಪಂಜಾಬ್ನಲ್ಲಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಏರಿರುವ ಎಎಪಿ ಹಿಮಾಚಲ ಪ್ರದೇಶದಲ್ಲಿ ನೆಲೆ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದೆ. ಎಎಪಿ ನಾಯಕರಾದ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಹಾಗೂ ಭಗವಂತ್ ಮಾನ್ ಅವರು ಹಿಮಾಚಲ ಪ್ರದೇಶದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ, ಶಿಕ್ಷಣ, ಮೂಲಭೂತ ಸೌಕರ್ಯಗಳಂತಹ ವಿಚಾರಗಳನ್ನು ಮುನ್ನೆಲೆಗೆ ತಂದು ಎಎಪಿ ಪ್ರಚಾರ ನಡೆಸುತ್ತಿದೆ.












Click it and Unblock the Notifications