ಭಾರತದ 150 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಘೋಷಣೆ!?
ನವದೆಹಲಿ, ಏಪ್ರಿಲ್ 28: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ವ್ಯಾಪಕವಾಗಿ ಹರಡುತ್ತಿದೆ. ಶೇಕಡಾ 15ಕ್ಕಿಂತ ಹೆಚ್ಚು ಕೊವಿಡ್-19 ಪಾಸಿಟಿವಿಟಿ ಪ್ರಮಾಣವನ್ನು ಹೊಂದಿರುವ 150 ಜಿಲ್ಗೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಘೋಷಿಸಲು ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಉನ್ನತ ಮಟ್ಟದ ಸಭೆ ನಡೆಸುತ್ತಿದೆ.
ಸಾಂಕ್ರಾಮಿಕ ಪಿಡುಗಿನಿಂದ ತೀವ್ರ ಆತಂಕ ಎದುರಿಸುತ್ತಿರುವ 150 ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುವ ಬಗ್ಗೆ ನಿಯಮಗಳನ್ನು ರೂಪಿಸಲಾಗುತ್ತಿದೆ. ರಾಜ್ಯ ಸರ್ಕಾರಗಳಿಂದ ಮಾಹಿತಿ ಪಡೆದ ನಂತರದಲ್ಲಿ ಕೇಂದ್ರ ಸರ್ಕಾರವು ಈ ಬಗ್ಗೆ ಅಧಿಕೃತ ನಿರ್ಧಾರವನ್ನು ತೆಗೆದುಕೊಳ್ಳಲಿದೆ.
ನಿಮ್ಮ ಧ್ವನಿ ಬದಲಾವಣೆಯೂ ಕೊರೊನಾ ಸೋಂಕಿನ ಒಂದು ಲಕ್ಷಣ
"ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗುತ್ತಿರುವ ಜಿಲ್ಲೆಗಳಲ್ಲಿ ಕಠಿಣ ಹಾಗೂ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೊಳಿಸಬೇಕಿದೆ. ಕೊವಿಡ್-19 ಸೋಂಕಿನ ಸರಪಳಿ ಕತ್ತರಿಸಲು ಲಾಕ್ಡೌನ್ ಒಂದೇ ಪ್ರಮುಖ ಮಾರ್ಗ" ಎಂದು ವಿಶ್ಲೇಷಕರು ಸಲಹೆ ನೀಡಿದ್ದಾರೆ.
ಭಾರತದಲ್ಲಿ ಕೊರೊನಾವೈರಸ್ ಹೊಸ ದಾಖಲೆ
ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಹೊಸ ದಾಖಲೆ ಬರೆದಿವೆ. ಕಳೆದ 24 ಗಂಟೆಗಳಲ್ಲಿ 3,60,960 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,79,97,267ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಒಟ್ಟು 29,78,709 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಹೊಸ ದಾಖಲೆ ಬರೆದ ಸಾವಿನ ಪ್ರಕರಣ
ಕೊರೊನಾವೈರಸ್ ಸೋಂಕಿನ ಮೊದಲ ಅಲೆಗಿಂತಲೂ ಎರಡನೇ ಅಲೆ ಅಪಾಯಕಾರಿಯಾಗಿದೆ. ಬಹುತೇಕ ಸೋಂಕಿತರಲ್ಲಿ ಉಸಿರಾಟದ ಸಮಸ್ಯೆ ಎದುರಾಗಿದ್ದು, ಸಾವಿನ ಸಂಖ್ಯೆ ಜನರ ಆತಂಕವನ್ನು ಹೆಚ್ಚಿಸುತ್ತಿದೆ. ಸಾಂಕ್ರಾಮಿಕ ಪಿಡುಗು ಆರಂಭವಾದಾಗಿನಿಂದ ಈವರೆಗೂ 24 ಗಂಟೆಗಳಲ್ಲಿ ಎಂದಿಗೂ ಸಾವಿನ ಸಂಖ್ಯೆ 3 ಸಾವಿರದ ಗಡಿ ದಾಟಿರಲಿಲ್ಲ. ಆದರೆ ಕಳೆದ ಒಂದು ದಿನದಲ್ಲಿ 3293 ಮಂದಿ ಕೊವಿಡ್-19 ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 2,01,187ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 2,61,162 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,48,17,371 ಕ್ಕೆ ಏರಿಕೆಯಾಗಿದೆ.
24 ಗಂಟೆಗಳಲ್ಲಿ 17 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 17,23,912 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 28,27,03,789 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.
ಭಾರತದಲ್ಲಿ ಈವರೆಗೂ ಲಸಿಕೆ ಪಡೆದವರೆಷ್ಟು ಮಂದಿ?
ದೇಶದಲ್ಲಿ ಈವರೆಗೆ 14,78,27,367 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.