ಛಾಪ್ರಾ ನಂತರ ಇದೀಗ ಬಿಹಾರದ ಸಿವಾನ್ನಲ್ಲಿ ನಕಲಿ ಮದ್ಯ ಸೇವಿಸಿ 4 ಸಾವು
ಸಿವಾನ್ ಡಿಸೆಂಬರ್ 16: ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧದ ಬಳಿಕ ನಕಲಿ ಮದ್ಯ ಸೇವಿಸಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಬಿಹಾರದ ಸಿವಾನ್ ಜಿಲ್ಲೆಯ ಭಗವಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ.
ಇತ್ತೀಚೆಗೆ ಛಾಪ್ರಾ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅಂತಹದ್ದೇ ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. ಏಪ್ರಿಲ್ 2016 ರಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿತು. ಅದಾಗ್ಯೂ ಇಂತಹ ಘಟನೆಗಳು ಮತ್ತೆ ಮತ್ತೆ ನಡೆಯುತ್ತಿರುವುದು ಆತಂಕ ಹೆಚ್ಚಿಸಿದೆ.
ಈ ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿ, ಸಿಎಂ ನಿತೀಶ್ ಕುಮಾರ್ ಹಾಗೂ ಮಹಾಘಟಬಂದನ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪ್ರತಿಪಕ್ಷಗಳು, ವಿಶೇಷವಾಗಿ ಬಿಜೆಪಿ ಗುರಿಯಾಗಿಸುತ್ತಿದೆ. ಬಿಜೆಪಿ ಬಿಹಾರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿದ್ದು, ನಾಯಕರ ನಿಯೋಗ ಇಂದು ರಾಜ್ಯಪಾಲ ಪಘು ಚೌಹಾಣ್ ಅವರನ್ನು ಭೇಟಿ ಮಾಡಲಿದೆ.

ಇನ್ನೂ ಛಾಪ್ರಾ ದುರಂತದ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಗೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅಕ್ರಮ ಮದ್ಯದ ತಯಾರಿಕೆ, ವ್ಯಾಪಾರ ಮತ್ತು ಮಾರಾಟವನ್ನು ತಡೆಯಲು ಸ್ವತಂತ್ರ ತನಿಖೆ ಮತ್ತು ಕ್ರಿಯಾ ಯೋಜನೆಯನ್ನು ರೂಪಿಸುವಂತೆ ಮನವಿಯಲ್ಲಿ ಕೋರಲಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ಪರಿಹಾರವನ್ನೂ ಕೋರಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ವಿಷಯವನ್ನು ಪಟ್ಟಿ ಮಾಡಲು ನಿರಾಕರಿಸಿದರು. ಚಳಿಗಾಲದ ರಜೆಯ ನಂತರ ಮತ್ತೊಮ್ಮೆ ವಿಷಯವನ್ನು ಪ್ರಸ್ತಾಪಿಸಲು ಅರ್ಜಿದಾರರನ್ನು ಕೇಳಿದರು. ಈ ಸಾವಿಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಎಫ್ ಐಆರ್ ದಾಖಲಿಸಿದ್ದಾರೆ ಎಂದು ಬಿಹಾರ ಅಬಕಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.












Click it and Unblock the Notifications