ಕೊರೊನಾವೈರಸ್ ಹೆಚ್ಚುತ್ತಿರುವ 10 ರಾಜ್ಯಗಳಿಗೆ ಕೇಂದ್ರದ ತಜ್ಞರ ತಂಡ
ನವದೆಹಲಿ, ಫೆಬ್ರವರಿ.24: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚಾಗುತ್ತಿದೆ. ಪ್ರತಿನಿತ್ಯ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಕೇಂದ್ರದ ತಜ್ಞರ ತಂಡವು ದೇಶದ 10 ರಾಜ್ಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ಮಹಾರಾಷ್ಟ್ರ, ಕೇರಳ, ಛತ್ತೀಸ್ ಗಢ, ಮಧ್ಯ ಪ್ರದೇಶ, ಗುಜರಾತ್, ಪಂಜಾಬ್, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳಲ ಮತ್ತು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿರುವ ತಜ್ಞರ ತಂಡವು ಕೊರೊನಾವೈರಸ್ ನಿಯಂತ್ರಿಸುವ ಮತ್ತು ನಿರ್ವಹಿಸುವ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಿದೆ.
ದೇಶದ ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇತ್ತೀಚಿಗೆ ಕೊರೊನಾವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುವುದಕ್ಕೆ ಕಾರಣವೇನು ಎಂಬುದನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಕೇಂದ್ರದ ತಜ್ಞರ ತಂಡವು ಕಾರ್ಯೋನ್ಮುಖವಾಗಿರಲಿದೆ.

7 ರಾಜ್ಯಗಳಿಗೆ ಕೇಂದ್ರ ಕಾರ್ಯದರ್ಶಿ ಪತ್ರ:
ಕೊರೊನಾವೈರಸ್ ಸೋಂಕಿನ ಹರಡುವಿಕೆಯ ಸರಪಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುವಂತೆ ಏಳು ರಾಜ್ಯಗಳ ಸರ್ಕಾರದ ಕಾರ್ಯದರ್ಶಿಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರ, ಕೇರಳ, ಛತ್ತೀಸ್ ಗಢ, ಮಧ್ಯ ಪ್ರದೇಶ, ಗುಜರಾತ್, ಪಂಜಾಬ್ ಮತ್ತು ಜಮ್ಮು ಕಾಶ್ಮೀರದಲ್ಲಿ ಕೊವಿಡ್-19 ಸೋಂಕು ಕಡಿವಾಣದ ಬಗ್ಗೆ ನಿಗಾ ವಹಿಸುವಂತೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಭಾರತದಲ್ಲಿ ಕೊರೊನಾವೈರಸ್ ಹಾವಳಿ:
ಭಾರತದಲ್ಲಿ ಒಂದೇ ದಿನ 13742 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕೊವಿಡ್-19 ಸೋಂಕಿತರ ಜೊತೆಗೆ ಗುಣುಖರ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 14,037 ಸೋಂಕಿತರು ಗುಣಮುಖರಾಗಿದ್ದು, 104 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಬುಧವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 1,10,30,176 ಕೊರೊನಾವೈರಸ್ ಸೋಂಕಿತ ಪ್ರಕರಣಗಳಿದ್ದು, ಈಗಾಗಲೇ 1,07,26,702 ಸೋಂಕಿತರು ಗುಣಮುಖರಾಗಿದ್ದಾರೆ. ಮಹಾಮಾರಿಯಿಂದ ಇದುವರೆಗೂ 1,56,567 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ಭಾರತದಲ್ಲಿ 1,46,907 ಸಕ್ರಿಯ ಪ್ರಕರಣಗಳಿವೆ.












Click it and Unblock the Notifications