ಗಡಿ ವಿವಾದ: 'ಸುಪ್ರೀಂ' ತೀರ್ಪು ಅಂತಿಮ ಎಂದ ಅಮಿತ್ ಶಾ
ನವದೆಹಲಿ, ಡಿಸೆಂಬರ್ 14: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅಮಿತ್ ಶಾ ಮಾತನಾಡಿದ್ದಾರೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ಗೆ ತೀರ್ಪು ನೀಡುವವರೆಗೆ ತಮ್ಮ ಹಕ್ಕುಗಳಿಗಾಗಿ ಒತ್ತಾಯಿಸದಿರಲು ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಉಭಯ ನಾಯಕರೊಂದಿಗಿನ ಸಭೆಯ ನಂತರ ಅಮಿತ್ ಶಾ ಮಾತನಾಡಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ನವದೆಹಲಿಯಲ್ಲಿ ಅಮಿತ್ ಶಾ ಸಭೆ ನಡೆಸಿದ್ದಾರೆ.
'ಸುಪ್ರೀಂಕೋರ್ಟ್ ತನ್ನ ತೀರ್ಪು ನೀಡುವವರೆಗೂ ರಾಜ್ಯ ಸರ್ಕಾರಗಳು ಯಾವುದೇ ಹಕ್ಕು ಸಲ್ಲಿಸುವುದಿಲ್ಲ ಎಂಬ ಒಪ್ಪಂದವಿದೆ. ವಿವಾದವನ್ನು ಮಾತುಕತೆಯ ಮೂಲಕ ಪರಿಹರಿಸಬೇಕು. ಪ್ರತಿ ರಾಜ್ಯದಿಂದ ಮೂರು ಸಚಿವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗುವುದು' ಎಂದು ಶಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯನ್ನು ಪರಿಶೀಲಿಸಲು ಹಿರಿಯ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲಾಗುವುದು. ಆದ್ದರಿಂದ ಯಾವುದೇ ರಾಜ್ಯದ ಪ್ರಯಾಣಿಕರು ಮತ್ತು ವ್ಯಾಪಾರಿಗಳು ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸುವವರ ವಿರುದ್ಧ ಪೊಲೀಸ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಶಾ ಹೇಳಿದ್ದಾರೆ.
ವಿವಾದವನ್ನು ರಾಜಕೀಯಗೊಳಿಸಬೇಡಿ. ಸುಪ್ರೀಂ ಕೋರ್ಟ್ನ ತೀರ್ಪಿಗಾಗಿ ಕಾಯಿರಿ ಎಂದು ಅವರು ಎರಡೂ ರಾಜ್ಯಗಳ ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದಾರೆ.
ಬೊಮ್ಮಾಯಿ ಅವರಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಶಿಂಧೆಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಾಥ್ ನೀಡಿದ್ದಾರೆ.
ಮಹಾರಾಷ್ಟ್ರದ ಗಡಿಯಲ್ಲಿರುವ ಕನ್ನಡ ಭಾಷಿಗರ ಗ್ರಾಮಗಳನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡುವ ವಿಚಾರ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದರು. ಬೆಳಗಾವಿ ಹಾಗೂ ಇತರ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಲು ಹೋರಾಡುವುದಾಗಿ ಮಹಾರಾಷ್ಟ್ರದ ರಾಜಕಾರಣಿಗಳು ಹೇಳಿಕೆ ನೀಡಿದ್ದರು.
ಆ ನಂತರ, ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಭಾಗಗಳಲ್ಲಿ ಸಂಘರ್ಷ ಭುಗಿಲೆದ್ದಿತು. ಮಹಾರಾಷ್ಟ್ರದ ಕರ್ನಾಟಕಕ್ಕೆ ಸೇರಿದ ಬಸ್ಗಳಿಗೆ ಕಪ್ಪು ಮಸಿ ಬಳಿಯಲಾಯಿತು. ಬೆಳಗಾವಿ ಜಿಲ್ಲೆಯ ಹೀರೇಬಾಗೇವಾಡಿಯಲ್ಲಿ ಕನ್ನಡ ಪರ ಸಂಘಟನೆಗಳು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವು.
ಈ ವಿವಾದ ತೀವ್ರ ಸ್ವರೂಪ ಪಡೆದಿರುವಾಗಲೇ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ಮಾಡುವುದಾಗಿ ಘೋಷಿಸಿದರು. ಇದು ಮತ್ತಷ್ಟು ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿತ್ತು.
ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರದ ರಾಜಕಾರಣಿಗಳು ಹಾಗೂ ಎಂಇಎಸ್ ಪುಂಡರು ಖ್ಯಾತೆ ತೆಗೆಯುತ್ತಲೇ ಬಂದಿದ್ದಾರೆ. ಬೆಳಗಾವಿ ವಿವಾದ ಸುಪ್ರೀಂ ಕೋರ್ಟ್ನಲ್ಲಿದ್ದರೂ, ಮಹಾರಾಷ್ಟ್ರದ ರಾಜಕಾರಣಿಗಳು ಗಡಿಯಲ್ಲಿನ ಮರಾಠಿ ಭಾಷಿಗರನ್ನು ಎತ್ತಿ ಕಟ್ಟುತ್ತಲೇ ಇದ್ದಾರೆ. ಗಡಿ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಸ್ಥಿಕೆ ವಹಿಸಬೇಕೆಂದು ಎನ್ಸಿಪಿ ನಾಯಕ ಶರದ್ ಪವಾರ ಒತ್ತಾಯ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದ ಸಭೆಯಲ್ಲಿ ಏನು ಚರ್ಚೆ ನಡೆಯಿತೆಂಬ ಮಾಹಿತಿ ಇನ್ನಷ್ಟೇ ಬರಬೇಕಿದೆ.