ಅಮಿತ್ ಶಾ ಸಂಧಾನ ಸಫಲ, ಮತ್ತೆ ಒಂದಾದ ಯಡಿಯೂರಪ್ಪ -ಈಶ್ವರಪ್ಪ
ಕರ್ನಾಟಕದ ಬಿಜೆಪಿ ಬಿಕ್ಕಟ್ಟು ಬಗೆಹರಿಸುವಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಯಶಸ್ವಿಯಾಗಿದ್ದಾರೆ. ಕೆಎಸ್ ಈಶ್ವರಪ್ಪ ಅವರಿಗೆ ಒಬಿಸಿ ಮೋರ್ಚಾದ ನೇತೃತ್ವ ನೀಡಲಾಗಿದೆ.
ನವದೆಹಲಿ, ಜನವರಿ 27: ಕರ್ನಾಟಕದ ಬಿಜೆಪಿ ಬಿಕ್ಕಟ್ಟು ಬಗೆಹರಿಸುವಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಯಶಸ್ವಿಯಾಗಿದ್ದಾರೆ. ಕೆಎಸ್ ಈಶ್ವರಪ್ಪ ಅವರಿಗೆ ಒಬಿಸಿ ಮೋರ್ಚಾದ ನೇತೃತ್ವ ನೀಡಲಾಗಿದೆ. ನಮ್ಮಿಬ್ಬರ ಮಧ್ಯೆ ಯಾವುದೇ ಒಡಕಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ನಡುವಿನ ಅಸಮಾಧಾನ ಬಹಿರಂಗವಾಗಿ ಸ್ಫೋಟಗೊಂಡರೂ ಹೈಕಮಾಂಡ್ ಕಾದು ನೋಡುವ ತಂತ್ರ ಅನುಸರಿಸಿತ್ತು. [ಕರ್ನಾಟಕ ಬಿಜೆಪಿಯ ನಾಯಕರಿಗೆ 8 ಪ್ರಶ್ನೆ]
ಆದರೆ, ನಂತರ ಪರಿಸ್ಥಿತಿ ಕೈ ಮೀರುವ ಹಂತ ತಲುಪಿರುವ ಮುನ್ಸೂಚನೆ ಸಿಕ್ಕಿದ ಕೂಡಲೇ ಎಚ್ಚೆತ್ತುಕೊಂಡು ಸಂಧಾನ ಸಭೆ ನಡೆಸಲು ಮುಂದಾಯಿತು.
ಕಲಬುರಗಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿಯಲ್ಲಿ ಇಬ್ಬರು ನಾಯಕರು ನಡೆದುಕೊಂಡ ರೀತಿಯಿಂದ ಆತಂಕಗೊಂಡ ಹೈಕಮಾಂಡ್, ತಕ್ಷಣವೇ ಪರಿಹಾರ ಕಂಡುಕೊಳ್ಳಲು ಯತ್ನಿಸಿತು. ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಸಂಜೆ ತಮ್ಮ ದೆಹಲಿಯ ಅಕ್ಬರ್ ರಸ್ತೆ ನಿವಾಸದಲ್ಲಿ ಸಂಧಾನ ಸಭೆ ನಡೆಸಿದರು. ಸಭೆ ನಂತರ ಯಾರು ಏನು ಹೇಳಿದರು ಮುಂದೆ ಓದಿ...

ಸಭೆ ನಂತರ ಯಡಿಯೂರಪ್ಪ
'ನಮ್ಮಿಬ್ಬರ(ಈಶ್ವರಪ್ಪ ಜತೆ) ನಡುವೆ ಯಾವುದೇ ಒಡಕಿಲ್ಲ. ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಜಿಲ್ಲಾವಾರು ಸಮಾವೇಶ ನಡೆಸುತ್ತೇವೆ. ಯಾವುದೇ ಬ್ರಿಗೇಡ್ ಚಟುವಟಿಕೆಗಳಲ್ಲಿ ಬಿಜೆಪಿ ನಾಯಕರು ಪಾಲ್ಗೊಳ್ಳುವುದಿಲ್ಲ' ಎಂದು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸಭೆ ನಂತರ ಸುದ್ದಿಗಾರರ ಜತೆ ಮಾತನಾಡುತ್ತಾ ಘೋಷಿಸಿದರು.

ಮುರಳೀಧರ ರಾವ್ ಹೇಳಿಕೆ
ರಾಯಣ್ಣ ಬ್ರಿಗೇಡ್ ನಲ್ಲಿ ಬಿಜೆಪಿ ನಾಯಕರು ಪಾಲ್ಗೊಳ್ಳುವುದಿಲ್ಲ. ಈಶ್ವರಪ್ಪ ಅವರು ಒಬಿಸಿ ಮೋರ್ಚಾದ ನೇತೃತ್ವ ವಹಿಸಲಿದ್ದಾರೆ. ಕಾಂಗ್ರೆಸ್ ಮುಕ್ತ ಕರ್ನಾಟಕ ಅಭಿಯಾನಕ್ಕೆ ಹೆಚ್ಚು ಒತ್ತು ನೀಡಲು ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸಭೆಯಲ್ಲಿ ಸೂಚಿಸಿದ್ದಾರೆ. ಅದರಂತೆ , ಯಡಿಯೂರಪ್ಪ ಹಾಗೂ ಈಶ್ವರಪ್ಪ ಇಬ್ಬರು ಒಟ್ಟಿಗೆ ಕಾರ್ಯನಿರ್ವಹಿಸಲಿದ್ದಾರೆ.

ಅಸಮಾಧಾನ ಶಮನಕ್ಕೆ ಸಮಿತಿ
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಸ್ಯೆ ಉಲ್ಬಣಗೊಳ್ಳುವುದಕ್ಕೂ ಮುನ್ನ ಕರ್ನಾಟಕ ರಾಜ್ಯ ಬಿಜೆಪಿ ಪದಾಧಿಕಾರಿಗಳ ನೇಮಕ ವಿಚಾರವಾಗಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿತ್ತು. ಈಶ್ವರಪ್ಪ ಸೇರಿದಂತೆ ಅನೇಕ ನಾಯಕರು ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದಿದ್ದರು. ಈ ಸಮಸ್ಯೆ ಬಗೆಹರಿಸಲು ಮುಂದಾಗಿರುವ ಹೈಕಮಾಂಡ್, ಕರ್ನಾಟಕ ಉಸ್ತುವಾರಿ ಮುರಳೀಧರ ರಾವ್ ಅವರ ನೇತೃತ್ವದ ಹೊಸ ಸಮಿತಿಯನ್ನು ನೇಮಕ ಮಾಡಿದೆ.

ಬ್ರಿಗೇಡ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದಿಲ್ಲ
ಸಂಗೊಳ್ಳಿ ರಾಯಣ್ಣ ಹೆಸರಿನಲ್ಲೇ ಬಿಜೆಪಿ ಒಬಿಸಿ ಸಮಾವೇಶವನ್ನು ಜಿಲ್ಲಾವಾರು ಮಟ್ಟದಲ್ಲಿ ಆಯೋಜಿಸಲಾಗುವುದು. ಒಬಿಸಿ ಮೋರ್ಚಾದ ನೇತೃತ್ವ ನೀಡಿರುವುದಕ್ಕೆ ಅಮಿತ್ ಶಾ ಹಾಗೂ ಯಡಿಯೂರಪ್ಪ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ. ಆದರೆ, ಸಂಗೊಳ್ಳಿ ರಾಯಣ್ಣ ಚಟುವಟಿಕೆ ನಿಲ್ಲುವುದಿಲ್ಲ, ಆದರೆ, ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯಲಿದೆ. ನಾನು ಬ್ರಿಗೇಡ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ.












Click it and Unblock the Notifications