ಕರ್ನಾಟಕ ಚುನಾವಣೆ: ಅಕ್ರಮ ಮದ್ಯ, ನಗದು ಹರಿವು ತಡೆಯಲು ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿದ ಆಂಧ್ರಪ್ರದೇಶ
ಅಮರಾವತಿ, ಮೇ. 01: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ನೆರೆಯ ರಾಜ್ಯ ಆಂಧ್ರಪ್ರದೇಶ ಸರ್ಕಾರವು ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ. ಕರ್ನಾಟಕಕ್ಕೆ ಅಕ್ರಮವಾಗಿ ಸಾಗಾಟವಾಗುವ ಮದ್ಯ, ನಗದು ಮತ್ತು ಇತರ ಉಡುಗೊರೆಗಳ ಹರಿವನ್ನು ತಡೆಯಲು ಕರ್ನಾಟಕ ಗಡಿಯಲ್ಲಿರುವ ಜಿಲ್ಲೆಗಳಲ್ಲಿ 45 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿದೆ.
ಈ ಬಗ್ಗೆ ಆಂಧ್ರ ಪ್ರದೇಶದ ಮುಖ್ಯ ಕಾರ್ಯದರ್ಶಿ ಕೆ ಎಸ್ ಜವಾಹರ್ ರೆಡ್ಡಿ ಸೋಮವಾರ ಮಾಹಿತಿ ನೀಡಿದ್ದಾರೆ. ಚೆಕ್ಪೋಸ್ಟ್ಗಳಲ್ಲಿ ಪೊಲೀಸರು, ಅಬಕಾರಿ, ವಾಣಿಜ್ಯ ತೆರಿಗೆ, ಕಂದಾಯ ಮತ್ತು ಇತರ ಇಲಾಖೆಗಳ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ ಎಂದು ಹೇಳಿದ್ದಾರೆ.

ಈಗಾಗಲೇ ರಾಜ್ಯದಲ್ಲಿ 3,008 ಲೀಟರ್ ಭಾರತೀಯ ನಿರ್ಮಿತ ವಿದೇಶಿ ಮದ್ಯ (ಐಎಂಎಫ್ಎಲ್), 444 ಟೆಟ್ರಾ ಪ್ಯಾಕ್ಗಳ 90 ಮಿಲಿ ಮದ್ಯದ ಪೆಟ್ಟಿಗೆಗಳು ಮತ್ತು ಎರಡೂವರೆ ಕೆಜಿ ಗಾಂಜಾವನ್ನು ಜಪ್ತಿ ಮಾಡಲಾಗಿದೆ ಎಂದು ಭಾರತ ಚುನಾವಣಾ ಆಯೋಗ (ಇಸಿಐ) ಆಯೋಜಿಸಿದ್ದ ವಿಡಿಯೋ ಕಾನ್ಫರೆನ್ಸ್ನಲ್ಲಿ ಮುಖ್ಯ ಕಾರ್ಯದರ್ಶಿ ಮಾಹಿತಿ ತಿಳಿಸಿದ್ದಾರೆ.
ಸೋಮವಾರ,ಆಂಧ್ರ ಪ್ರದೇಶ ಸರ್ಕಾರದ ಹಿರಿಯ ಅಧಿಕಾರಿಗಳು ಭಾರತ ಚುನಾವಣಾ ಆಯೋಗದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮೇ 10 ರಂದು ನಡೆಯಲಿರುವ ಕರ್ನಾಟಕದ ಚುನಾವಣೆಗಳಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಮದ್ಯ, ನಗದು ಮತ್ತು ಇತರ ಉಚಿತ ಉಡುಗೊರೆಗಳ ಹರಿವನ್ನು ತಡೆಗಟ್ಟುವ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಸಭೆಯಲ್ಲಿ ಚುನಾವಣೆ ನಡೆಯಲಿರುವ ಕರ್ನಾಟಕದ ಜೊತೆಗೆ ಗಡಿಯನ್ನು ಹಂಚಿಕೊಂಡಿರುವ ತೆಲಂಗಾಣ, ಮಹಾರಾಷ್ಟ್ರ, ಗೋವಾ, ಕೇರಳದ ಅಧಿಕಾರಿಗಳು ಮತ್ತು ತಮಿಳುನಾಡಿನ ಅಧಿಕಾರಿಗಳು ಕೂಡ ಭಾಗವಹಿಸಿದ್ದರು.
"ಸೋಮವಾರ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಮತ್ತು ಇತರ ಚುನಾವಣಾ ಆಯುಕ್ತರು ಮುಖ್ಯ ಕಾರ್ಯದರ್ಶಿಗಳು, ಡಿಜಿಪಿಗಳು, ಮುಖ್ಯ ಚುನಾವಣಾ ಅಧಿಕಾರಿಗಳು (ಸಿಇಒಗಳು) ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು" ಎಂದು ರಾಜ್ಯ ಸರ್ಕಾರದ ಹೇಳಿಕೆ ತಿಳಿಸಿದೆ.
ಸಭೆಯಲ್ಲಿ, ಚೆಕ್ಪೋಸ್ಟ್ಗಳನ್ನು ಸ್ಥಾಪಿಸುವ ಮೂಲಕ ಅಕ್ರಮಗಳ ಹರಿವನ್ನು ನಿರ್ಬಂಧಿಸಲು ಮತ್ತು ಸಮಾಜವಿರೋಧಿ ಶಕ್ತಿಗಳ ಪ್ರವೇಶವನ್ನು ನಿರ್ಬಂಧಿಸುವಂತೆ ಮುಖ್ಯ ಚುನಾವಣಾ ಆಯುಕ್ತರು ಗಡಿ ರಾಜ್ಯಗಳಿಗೆ ನಿರ್ದೇಶನ ನೀಡಿದ್ದಾರೆ.
ಆಂಧ್ರಪ್ರದೇಶದಿಂದ ಮುಖ್ಯ ಕಾರ್ಯದರ್ಶಿ ಜವಾಹರ್ ರೆಡ್ಡಿ, ಪೊಲೀಸ್ ಮಹಾನಿರ್ದೇಶಕ ಕೆ ವಿ ರಾಜೇಂದ್ರನಾಥ ರೆಡ್ಡಿ, ಸಿಇಒ ಮುಖೇಶ್ ಕುಮಾರ್ ಮೀನಾ, ವಿಶೇಷ ಮುಖ್ಯ ಕಾರ್ಯದರ್ಶಿ ರಜತ್ ಭಾರ್ಗವ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.












Click it and Unblock the Notifications