ನಮಾಜ್ ನಂತರ ನಡೆಯುವ ಘಟನೆ ಬಗ್ಗೆ ಪೊಲೀಸರಿಗೆ ಸಿಕ್ಕಿತಾ ಮಾಹಿತಿ?
ದೆಹಲಿ, ಡಿಸೆಂಬರ್.27: ದೇಶದಲ್ಲಿ ಪರಿಸ್ಥಿತಿ ಕಳೆದ ನಾಲ್ಕು ದಿನಗಳಿಂದ ಸ್ವಲ್ಪ ಮಟ್ಟಿಗೆ ತಿಳಿಕೊಂಡಿದೆ. ಅದರಲ್ಲೂ ರಾಷ್ಟ್ರ ರಾಜಧಾನಿ ಮತ್ತು ಉತ್ತರ ಪ್ರದೇಶದಲ್ಲಿ ಪ್ರತಿಭಟನೆ, ಹಿಂಸಾಚಾರದ ಕಿಚ್ಚು ಕೊಂಚ ತಣ್ಣಗಾಗಿದೆ. ಆದರೆ, ಇಂದು ಮತ್ತೆ ಆ ಬೆಂಕಿ ಹೊತ್ತಿಕೊಳ್ಳುತ್ತಾ ಎಂಬ ಅನುಮಾನಗಳು ಹುಟ್ಟಿಕೊಳ್ಳುತ್ತಿದೆ.
ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಭಟನಾಕಾರರ ಮೇಲೆ ಹದ್ದಿನ ಕಣ್ಣು ಇಟ್ಟಿದ್ದಾರೆ. ಯಾವಾಗ ಏನಾಗುತ್ತೋ ಎಂಬ ಆತಂಕ ಕ್ಷಣಕ್ಷಣವೂ ಕಾಡುತ್ತಿದೆ. ಹಲವೆಡೆ ಇಂಟರ್ ನೆಟ್ ಸೇವೆಯನ್ನು ಕಡಿತಗೊಳಿಸಲಾಗಿದೆ. ಇದಕ್ಕೆಲ್ಲ ಕಾರಣವೂ ಇದೆ.
ಚರ್ಚೆ: ಸಿಎಎ, ಎನ್ಆರ್ ಸಿ ಪರ-ವಿರೋಧ ಏನು? ಎತ್ತ? ಏಕೆ?
ಹೌದು, ಶುಕ್ರವಾರದ ಪ್ರಾರ್ಥನೆ ಮುಗಿಯುತ್ತಿದ್ದಂತೆ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಮತ್ತೊಮ್ಮೆ ಪ್ರತಿಭಟನಾಕಾರರು ಬೀದಿಗಿಳಿಯುವ ಮುನ್ಸೂಚನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಅದರಲ್ಲೂ ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಇಂಟರ್ ನೆಟ್ ಸೇವೆ ಕಡಿತ
ಉತ್ತರ ಪ್ರದೇಶದ ಎಲ್ಲ ಜಿಲ್ಲೆಗಳಲ್ಲೂ ಮೊಬೈಲ್ ಎಸ್ಎಂಎಸ್ ಹಾಗೂ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆವೆರೆಗೂ ಕೆಲವು ಕಡೆ ಅಂತರ್ಜಾಲ ಸೇವೆಯನ್ನು ಕಡಿತಗೊಳಿಸಲಾಗಿದೆ. ಬುಲಂದ್ ಶಹರ್ ಹಾಗೂ ಆಗ್ರಾದಲ್ಲಿ ಶನಿವಾರ ಬೆಳಗ್ಗೆ 6 ಗಂಟೆವೆರೆಗೂ ಇಂಟರ್ ನೆಟ್ ಸೇವೆಯನ್ನು ಕಡಿತಗೊಳಿಸಲಾಗಿದೆ. ಮಧುರಾ, ಸಿತಾಪುರ್, ಮುಜಾಫರ್ ನಗರ್, ಫಿರೋಜ್ ಬಾದ್, ಸಂಭಾಲ್ ಪ್ರದೇಶದಲ್ಲಿ ಮುಂದಿನ ಆದೇಶದವರೆಗೂ ಅಂತರ್ಜಾಲ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ.
"ನಾಲ್ಕು ದಿನಗಳಿಂದ ರಾಜ್ಯದಲ್ಲಿ ಪರಿಸ್ಥಿತಿ ತಿಳಿ"
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೊತ್ತಿ ಉರಿದ ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ಇದೀಗ ಸ್ವಲ್ಪ ತಿಳಿಕೊಂಡಿದೆ ಎಂದು ಡಿಜಿಪಿ ಒ.ಪಿ.ಸಿಂಗ್ ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ. ಯಾವುದೇ ರೀತಿಯ ಪ್ರತಿಭಟನೆ, ಹಿಂಸಾಚಾರ ನಡೆದಿಲ್ಲ ಎಂದು ತಿಳಿಸಿದರು.
498 ಮಂದಿ ಗುರುತು ಪತ್ತೆಯಾಗಿರುವ ಬಗ್ಗೆ ಮಾಹಿತಿ
ಉತ್ತರ ಪ್ರದೇಶದ ಹಲವೆಡೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಸಾರ್ವಜನಿಕ ಆಸ್ತಿ-ಪಾಸ್ತಿಗೆ ಉದ್ರಿಕ್ತರ ಗುಂಪು ಹಾನಿಯಾಗಿದ್ದು, ಈ ಬಗ್ಗೆ ಉದ್ರಕ್ತರ ಕುರಿತು ಮಾಹಿತಿ ಪತ್ತೆಯಾಗಿದೆ. ಲಕ್ನೋ, ಮೀರತ್, ಸಂಭಾಲ್, ರಾಮ್ ಪುರ್, ಮುಜಾಫರ್ ನಗರ್, ಫಿರೋಜ್ ಬಾದ್, ಕಾನ್ಪುರ್ ನಗರ್, ಬುಲಂದ್ ಶಹರ್ ನಲ್ಲಿ ಸಾಕಷ್ಟು ಆಸ್ತಿ-ಪಾಸ್ತಿಗೆ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ 498 ಮಂದಿ ಗುರುತನ್ನು ಪತ್ತೆ ಹಚ್ಚಲಾಗಿದೆ ಎಂದು ಉತ್ತರ ಪ್ರದೇಶದ ಮಾಹಿತಿ ಮತ್ತು ಸಂಪರ್ಕ ಇಲಾಖೆ ತಿಳಿಸಿದೆ.
ದೆಹಲಿ, ಉತ್ತರ ಪ್ರದೇಶದಲ್ಲಿ ಭದ್ರತೆಗಾಗಿ ಡ್ರೋನ್ ಬಳಕೆ
ಉತ್ತರ ಪ್ರದೇಶ ಅಷ್ಟೇ ಅಲ್ಲದೇ, ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೂಡಾ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ದೆಹಲಿಯ ಈಶಾನ್ಯ ಭಾಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶುಕ್ರವಾರದ ಪ್ರಾರ್ಥನೆ ನಂತರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮತ್ತೆ ಪ್ರತಿಭಟನೆ ನಡೆಸುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಕನಿಷ್ಠ 15 ಕಂಪನಿಗಳ ಭದ್ರತಾ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ನಗರದ ಹಲವೆಡೆಗಳಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, ಗಾಳಿಸುದ್ದಿಗಳಿಗೆ ಕಿವಿಗೊಡದಂತೆ ದೆಹಲಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.