Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿ 2.86 ಲಕ್ಷ ಸರ್ಕಾರಿ ಹುದ್ದೆಗಳ ಭರವಸೆ ಏನಾಯ್ತು?; ಉದ್ಯೋಗಾಕಾಂಕ್ಷಿಗಳ ಪರ ಪ್ರಧಾನಿ ಮೋದಿಗೆ ಅರವಿಂದ ಬೆಲ್ಲದ್ ಪತ್ರ

ಧಾರವಾಡ: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಅಸಂಖ್ಯಾತ ಯುವಕರು ನೇಮಕಾತಿ ಪ್ರಕ್ರಿಯೆಗಳ ವಿಳಂಬದಿಂದಾಗಿ ತೀವ್ರ ಹತಾಶೆಗೆ ಒಳಗಾಗಿದ್ದಾರೆ. ಆಡಳಿತಾತ್ಮಕ ಅಸಮರ್ಥತೆ ಮತ್ತು ನೌಕರಿಯ ಕೊರತೆಯನ್ನು ಖಂಡಿಸಿ ಇತ್ತೀಚೆಗೆ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆ ಇದೀಗ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಈ ವಿದ್ಯಮಾನದ ಬೆನ್ನಲ್ಲೇ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಅವರು, ಪ್ರತಿಭಟನಾ ನಿರತ ಯುವಕರ ಬೆಂಬಲಕ್ಕೆ ನಿಂತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯಪಾಲರಿಗೆ ಸುದೀರ್ಘ ಪತ್ರವೊಂದನ್ನು ರವಾನಿಸಿದ್ದಾರೆ.

2.86 ಲಕ್ಷ ಹುದ್ದೆಗಳ ಭರವಸೆ ಹುಸಿಯಾಯ್ತೆ?

ಪ್ರಧಾನಿ ಮತ್ತು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಅರವಿಂದ ಬೆಲ್ಲದ್, ಸರ್ಕಾರಿ ಹುದ್ದೆಗಳ ಭರ್ತಿಯಲ್ಲಿನ ನಿರ್ಲಕ್ಷ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. "ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ನಿರುದ್ಯೋಗದ ಬೇಗೆಯಿಂದ ಕಂಗೆಟ್ಟಿರುವ ಲಕ್ಷಾಂತರ ಯುವಕರು ಇಂದು ಅನಿವಾರ್ಯವಾಗಿ ಬೀದಿಗಿಳಿದು ಹೋರಾಟ ಮಾಡುವಂತಹ ಶೋಚನೀಯ ಪರಿಸ್ಥಿತಿ ನಿರ್ಮಾಣವಾಗಿದೆ" ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

Arvind Bellad

ಅಂಕಿಅಂಶಗಳ ಸಮೇತ ಸರ್ಕಾರದ ವೈಫಲ್ಯವನ್ನು ಪ್ರಶ್ನಿಸಿರುವ ಶಾಸಕರು, "ರಾಜ್ಯದ ವಿವಿಧ ಇಲಾಖೆಗಳಲ್ಲಿ ಬರೋಬ್ಬರಿ 2.86 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಭರವಸೆಯನ್ನು ಸರ್ಕಾರ ನೀಡಿತ್ತು. ಆದರೆ, ವಾಸ್ತವದಲ್ಲಿ ಕಳೆದ ಮೂರು ವರ್ಷಗಳಲ್ಲಿ 10,000ಕ್ಕೂ ಕಡಿಮೆ, ನಿಖರವಾಗಿ ಹೇಳಬೇಕೆಂದರೆ ಕೇವಲ 8,157 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಕಾಲಮಿತಿ (Time-line) ಅಥವಾ ಪಾರದರ್ಶಕ ಯೋಜನೆ ಇಲ್ಲದಿರುವುದು ಯುವಜನರಲ್ಲಿ ತೀವ್ರ ನಿರಾಶೆ ಉಂಟುಮಾಡಿದೆ" ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಲಾಠಿ ಚಾರ್ಜ್‌ಗೆ ತೀವ್ರ ಖಂಡನೆ

ಧಾರವಾಡದಲ್ಲಿ ನ್ಯಾಯಯುತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಅರವಿಂದ ಬೆಲ್ಲದ್ ತೀವ್ರವಾಗಿ ಖಂಡಿಸಿದ್ದಾರೆ. "ಸರ್ಕಾರವು ಯುವಕರ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸದೆ, ಅವರ ದ್ವನಿಯನ್ನು ಅಡಗಿಸಲು ಪೊಲೀಸ್ ಬಲ ಪ್ರಯೋಗಿಸುತ್ತಿರುವುದು ಪ್ರಜಾಪ್ರಭುತ್ವದ ವಿರೋಧಿ ನಡೆಯಾಗಿದೆ. ನಾವು ಉದ್ಯೋಗಾಕಾಂಕ್ಷಿಗಳ ನ್ಯಾಯಬದ್ಧ ಬೇಡಿಕೆಗಳಿಗೆ ಸಂಪೂರ್ಣ ಬೆಂಬಲ ಸೂಚಿಸುತ್ತೇವೆ. ಯುವಕರಿಗೆ ಆಗುತ್ತಿರುವ ಈ ಘೋರ ಅನ್ಯಾಯವನ್ನು ನೋಡಿಕೊಂಡು ನಾವು ಎಂದಿಗೂ ಮೂಕಪ್ರೇಕ್ಷಕರಾಗಿ ಕೂರುವುದಿಲ್ಲ" ಎಂದು ಗುಡುಗಿದ್ದಾರೆ.

ಹಿಂದಿನ ಸರ್ಕಾರದ ಸಾಧನೆಗಳ ಉಲ್ಲೇಖ

ಇದೇ ವೇಳೆ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ತ್ವರಿತ ನೇಮಕಾತಿ ಪ್ರಕ್ರಿಯೆಗಳನ್ನು ಪತ್ರದಲ್ಲಿ ನೆನಪಿಸಿರುವ ಬೆಲ್ಲದ್, ಪ್ರಸ್ತುತ ಸರ್ಕಾರದ ವಿಳಂಬ ಧೋರಣೆಯನ್ನು ಟೀಕಿಸಿದ್ದಾರೆ. "ನಮ್ಮ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಇಲಾಖೆಗೆ 16,000 ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಗೃಹ ಇಲಾಖೆಯಲ್ಲಿ 6,000 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್, 4,000 ಸಿಎಆರ್ (CAR) ಸಿಬ್ಬಂದಿ, ಹಾಗೂ 545 ಮತ್ತು 402 ಪಿಎಸ್‌ಐ (PSI) ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿತ್ತು. ಆದರೆ ಈಗಿನ ಸರ್ಕಾರ ಆಡಳಿತ ಯಂತ್ರವನ್ನು ನಿಭಾಯಿಸುವಲ್ಲಿ ಮತ್ತು ಯುವಕರಿಗೆ ಉದ್ಯೋಗ ಒದಗಿಸುವಲ್ಲಿ ಸಂಪೂರ್ಣವಾಗಿ ಎಡವಿದೆ" ಎಂದು ಆರೋಪಿಸಿದ್ದಾರೆ.

ಒಟ್ಟಿನಲ್ಲಿ, ಧಾರವಾಡದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯ ಕಾವು ಇದೀಗ ರಾಜಕೀಯ ವಲಯದಲ್ಲಿಯೂ ಭಾರಿ ಸಂಚಲನ ಸೃಷ್ಟಿಸಿದ್ದು, ಸರ್ಕಾರದ ಮುಂದಿನ ನಡೆಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+