Haryana Assembly Election 2024: ಹರಿಯಾಣದಲ್ಲಿ ಕಾಂಗ್ರೆಸ್ಗೆ ಹಿನ್ನಡೆ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಶಾಕಿಂಗ್ ಹೇಳಿಕೆ
ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇನ್ನೇನು ಗೆದ್ದೇ ಬಿಟ್ಟೆವು ಎಂದು ಕಾಂಗ್ರೆಸ್ ಬೀಗುತ್ತಿತ್ತು. ಆದರೆ, ಕಾಂಗ್ರೆಸ್ ಈ ಬಾರಿಯೂ ಹರಿಯಾಣದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಹೇರಿದ್ದು. ಇದೀಗ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಟಾಂಗ್ ಕೊಟ್ಟಿದ್ದಾರೆ.
ಎಕ್ಸಿಟ್ ಪೋಲ್ಗಳು ಭವಿಷ್ಯ ನುಡಿದ ಹೊರತಾಗಿಯೂ ಹರಿಯಾಣದಲ್ಲಿ ಕಾಂಗ್ರೆಸ್ ಮತ್ತೆ ಮಕಾಡೆ ಮಲಗಿದೆ. ಬಿಜೆಪಿ ಹ್ಯಾಟ್ರಿಕ್ ಗೆಲುವಿನಲ್ಲಿ ಬೀಗುತ್ತಿದೆ. ಮೂರನೇ ಬಾರಿಯೂ ಹರಿಯಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದನ್ನು ನೋಡಿದರೆ ಅಚ್ಚರಿ ಮೂಡಿಸುತ್ತದೆ. ಹರಿಯಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿರುವುದು ನಮಗೆಲ್ಲ ಪಾಠ ಎಂದು ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಹರಿಯಾಣದಲ್ಲಿ ಇನ್ನೇನು ಅಧಿಕಾರಕ್ಕೆ ಬಂದೇ ಬಿಟ್ಟೆವು ಎನ್ನುವ ಖುಷಿಯಲ್ಲಿ ಕಾಂಗ್ರೆಸ್ ಇತ್ತು.

ಕಾಂಗ್ರೆಸ್ ಅದ್ಯಾವ ಪರಿ ಹುಮ್ಮಸ್ಸಿನಲ್ಲಿ ಇತ್ತೆಂದರೆ ಈ ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆಯೂ ಚರ್ಚೆ ನಡೆದಿತ್ತು. ಕಾಂಗ್ರೆಸ್ ಹೈಕಮಾಂಡ್ ಸಹ ಈ ರಾಜ್ಯದಲ್ಲಿ ಗೆಲುವು ದಾಖಲಿಸುವ ಉತ್ಸುಕತೆಯಲ್ಲಿ ಇತ್ತು. ಬೆಳಿಗ್ಗೆಯಿಂದಲೇ ಹರಿಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತಾದರೂ, 11 ಗಂಟೆಯ ನಂತರ ಚಿತ್ರಣವೇ ಬದಲಾಯಿತು. ಮಧ್ಯಾಹ್ನದ ವೇಳೆಗೆ ಹರಿಯಾಣದ ಚಿತ್ರಣವೇ ಬದಲಾಯಿತು. ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ.
ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಹಿನ್ನಡೆಯಾಗಿರುವುದನ್ನೇ ಬಳಸಿಕೊಂಡು ಅರವಿಂದ್ ಕೇಜ್ರಿವಾಲ್ ಅವರು ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ. ಚುನಾವಣೆಗಳನ್ನು ಹಗುರವಾಗಿ ಪರಿಗಣಿಸಬೇಡಿ. ಅತಿಯಾದ ಆತ್ಮ ವಿಶ್ವಾಸ ಒಳ್ಳೆಯದಲ್ಲ ಎನ್ನುವುದಕ್ಕೆ ಮಂಗಳವಾರದ ಹರಿಯಾಣದ ಫಲಿತಾಂಶವೇ ಸಾಕ್ಷಿ. ಮುಂದಿನ ದಿನಗಳಲ್ಲಿ ಸಾಲು ಸಾಲು ಚುನಾವಣೆ ಬರುತ್ತಿದೆ. ಈಗ ಬಂದಿರುವ ಫಲಿತಾಂಶ ನಮಗೆಲ್ಲ ಪಾಠ ಎಂದು ಅವರು ಹೇಳಿದ್ದಾರೆ.
ಚುನಾವಣೆಗಳಲ್ಲಿ ಯಾವುದೇ ಕಾರಣಕ್ಕೂ ಅತಿಯಾದ ಆತ್ಮ ವಿಶ್ವಾಸ ಒಳ್ಳೆಯದಲ್ಲ. ಯಾಕೆ ಅತಿಯಾಗಿ ಆತ್ಮವಿಶ್ವಾಸ ತೋರಿಸಬಾರದು ಎನ್ನುವುದಕ್ಕೆ ಹರಿಯಾಣ ವಿಧಾನಸಭೆ ಚುನಾವಣೆಯ ಇಂದಿನ ಫಲಿತಾಂಶವೇ ಉದಾಹರಣೆ ಎಂದಿದ್ದಾರೆ. ದೆಹಲಿ ಪಾಲಿಕೆ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ, ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ಎಎಪಿ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಸಾರ್ವಜನಿಕರು ಸ್ವಚ್ಛತೆಯಂತ ವಿಷಯಗಳನ್ನು ಹೆಚ್ಚು ಗಮನಿಸುತ್ತಾರೆ. ಸ್ವಚ್ಛತೆ ಹಾಗೂ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ. ಈ ಅಂಶಗಳನ್ನು ಪಾಲಿಸಿದರೆ ಸಾಕು ನಾವು ಚುನಾವಣೆಯಲ್ಲಿ ಗೆಲುವು ಸಾಧಿಸಬಹುದು ಎಂದಿದ್ದಾರೆ.
ಎಎಪಿ ಇಲ್ಲದೆ ಸರ್ಕಾರ ಇಲ್ಲ: ಹರಿಯಾಣ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಎಎಪಿ ಮುಖ್ಯಸ್ಥ ಅರವಿಂದ ಕ್ರೇಜಿವಾಲ್ ಅವರು ಹರಿಯಾಣದಲ್ಲಿ ಆಮ್ ಆದ್ಮಿ ಪಾರ್ಟಿಯ ಸಹಕಾರವಿಲ್ಲದೆ ಯಾವುದೇ ಪಕ್ಷವೂ ಸರ್ಕಾರ ರಚನೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದರು. ಆದರೆ, ವೋಟ್ ಶೇರಿಂಗ್ನಲ್ಲಿ ಆಮ್ ಆದ್ಮಿ ಪಾರ್ಟಿಗೆ 1.73 ಪ್ರತಿಶತ ಮತ ಸಿಕ್ಕಿದ್ದು. ಖಾತೆ ತೆರೆಯುವಲ್ಲಿ ಆಮ್ ಆದ್ಮಿ ಪಾರ್ಟಿ ವಿಫಲವಾಗಿದೆ.












Click it and Unblock the Notifications