Atishi: ಶನಿವಾರ ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಅತಿಶಿ
ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಮುಹೂರ್ತ ನಿಗದಿಯಾಗಿದೆ. ಶನಿವಾರ ಸಂಜೆ 4.30ಕ್ಕೆ ಅವರು ದೆಹಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಐವರು ಆಮ್ ಆದ್ಮಿ ಶಾಸಕರು ಕೂಡ ಅತಿಶಿ ಅವರ ಜೊತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ವಿಶೇಷ. ಈ ಮೊದಲು ಬಿಜೆಪಿಯ ಸುಷ್ಮಾ ಸ್ವರಾಜ್ ಕಾಂಗ್ರೆಸ್ನ ಶೀಲಾ ದೀಕ್ಷಿತ್ ದೆಹಲಿಯ ಮಹಿಳಾ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಅತಿಶಿ ದೆಹಲಿಯ ಅತ್ಯಂತ ಕಿರಿಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಗೂ ಕೂಡ ಪಾತ್ರರಾಗಿದ್ದಾರೆ.

ಮದ್ಯ ನೀತಿ ಪ್ರಕರಣದಲ್ಲಿ ಸುಮಾರು ಆರು ತಿಂಗಳ ಕಾಲ ತಿಹಾರ್ ಜೈಲಿನಲ್ಲಿದ್ದ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಅತಿಶಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಹಿರಿಯ ನಾಯಕರಾದ ಮನೀಶ್ ಸಿಸೋಡಿಯಾ, ಪಕ್ಷದ ಸಂಸದ ಸಂಜಯ್ ಸಿಂಗ್ ಕೂಡ ಮದ್ಯನೀತಿ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿದ್ದಾರೆ.
ಅರವಿಂದ್ ಕೇಜ್ರಿವಾಲ್ ರಾಜೀನಾಮೆ
ಅರವಿಂದ್ ಕೇಜ್ರಿವಾಲ್ ಆರು ತಿಂಗಳು ಜೈಲಿನಿಂದಲೇ ಸಿಎಂ ಹುದ್ದೆಯನ್ನು ನಿಭಾಯಿಸಿದ್ದರು. ಅವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಒತ್ತಾಯ ಮಾಡಿದ್ದರೂ ಕೇಜ್ರಿವಾಲ್ ಅದಕ್ಕೆ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಜಾಮೀನು ಸಿಕ್ಕಿ ಹೊರಬಂದ ಬಳಿಕ ಅಚ್ಚರಿ ಎನ್ನುವಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿದ್ದರು.
"ಕಾನೂನು ನ್ಯಾಯಾಲಯದಲ್ಲಿ ನನಗೆ ನ್ಯಾಯ ಸಿಕ್ಕಿದೆ. ಈಗ ಜನತಾ ನ್ಯಾಯಾಲದದಿಂದ ನ್ಯಾಯ ಸಿಗಬೇಕು,. ಕೇಜ್ರಿವಾಲ್ ನಿರಪರಾಧಿಯೇ ಅಥವಾ ಅಪರಾಧಿಯೇ ದೆಹಲಿ ಜನರಿಗೆ ನಾನು ಕೇಳುತ್ತೇನೆ? ಕೆಲಸ ಮಾಡಿದ್ದೇನೆ ನನಗೆ ಮತ ಕೊಡಿ" ಎಂದು ಕೇಳಿದರು.
ಇದೇ ವರ್ಷದ ಮಾರ್ಚ್ನಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಅಕ್ರಮ ಹಣ ವರ್ಗಾವಣೆ ಮತ್ತು ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿಸಿತ್ತು. ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಸಿಬಿಐ ಅವರನ್ನು ಮತ್ತೆ ಬಂಧಿಸಿತ್ತು. ಸುಮಾರು ಆರು ತಿಂಗಳ ಕಾಲ ಅವರು ಜೈಲಿನಲ್ಲಿದ್ದರು.
ಅವರು ರಾಜೀನಾಮೆ ನೀಡುವ ಮೊದಲೇ ಅತಿಶಿ ಅವರನ್ನು ದೆಹಲಿಯ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಲಾಯಿತು. ಫೆಬ್ರವರಿಯಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದ್ದು. ಮತದಾರರನ್ನು ಸೆಳೆಯುವ ಲೆಕ್ಕಾಚಾರದಲ್ಲಿ ಅತಿಶಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.












Click it and Unblock the Notifications