ಕೊರೊನಾ ವಿರುದ್ಧ ಹೋರಾಟ: ಕಾಂಗ್ರೆಸ್ ತನ್ನ ಪಾತ್ರ ನಿರ್ವಹಿಸಲು ಸಿದ್ಧ: ಸೋನಿಯಾ ಗಾಂಧಿ
ನವದೆಹಲಿ, ಏಪ್ರಿಲ್ 10: 'ಕೊರೊನಾ ವಿರುದ್ಧ ಹೋರಾಟಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮಾಡಿಕೊಂಡಿದೆ ಎಂದು ನಾನು ಭಾವಿಸುತ್ತೇನೆ, ಕಾಂಗ್ರೆಸ್ ತನ್ನ ಪಾತ್ರ ನಿರ್ವಹಿಸಲು ಸಿದ್ಧ' ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಘಟಕಗಳ ಅಧ್ಯಕ್ಷರ ಸಭೆಯನ್ನುದ್ದೇಶಿಸಿ ಮಾತನಾಡಿದ ಸೋನಿಯಾಗಾಂಧಿ, ಆರ್ಥಿಕತೆಯ ಮೇಲೆ ಲಾಕ್ಡೌನ್ ಭಾರಿ ಹೊರೆ ಬೀರಿದೆ. ಈಗಾಗಲೇ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ವಿಶೇಷ ಪ್ರಾರ್ಥನೆಗೆ ಮನವಿ ಮಾಡಿ ಪಾಕ್ ಪ್ರಧಾನಿ ಇಮ್ರಾನ್ ಎಡವಟ್ಟು
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 863 ಕೊವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಜೊತೆಗೆ 37 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ದೃಢ ಪಟ್ಟ ಪ್ರಕರಣಗಳ ಸಂಖ್ಯೆ 6,412 ಕ್ಕೆ ತಲುಪಿದ್ದು, ಒಟ್ಟು 503 ಮಂದಿ ಕೊರೋನಾ ರೋಗದಿಂದ ಚೇತರಿಸಿಕೊಂಡಿದ್ದಾರೆ.
ಸೋಂಕಿನ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ತನ್ನ ಪಾತ್ರವನ್ನು ನಿರ್ವಹಿಸಲು ಸಿದ್ಧವಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಹೇಳಿದ್ದು, ಸವಾಲನ್ನು ಎದುರಿಸಲು ಸರ್ಕಾರ ಸಮಗ್ರ ಯೋಜನೆ ರೂಪಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಕೊರೋನಾ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಹೇಗೆ ತನ್ನ ಕೊಡುಗೆ ನೀಡುತ್ತದೆ ಎಂಬುದನ್ನು ಪಕ್ಷ ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಪರಿಗಣಿಸಬೇಕು ಎಂದು ಸೋನಿಯಾಗಾಂಧಿ ಈ ಸಂದರ್ಭದಲ್ಲಿ ಕರೆ ನೀಡಿದರು.
ವಲಸೆ ಕಾರ್ಮಿಕರು ತನ್ನ ಊರುಗಳನ್ನು ಬಿಟ್ಟು ಬೇರೆಡೆಗೆ ಇದ್ದಾರೆ. ಅಂತವರಿಗೆ ಸಹಾಯ ಮಾಡಬೇಕು. ಇಡೀ ದೇಶಾದ್ಯಂದ ಇರುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಜಿಲ್ಲೆಗಳಲ್ಲೂ ಈ ಕಾರ್ಯ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.