ಕೊರೊನಾ ಕುರಿತು ಮೋದಿ ಕರೆದ ಸಿಎಂಗಳ ಸಭೆಗೆ ಗೈರಾಗಲಿದ್ದಾರೆ ದೀದಿ
ನವದೆಹಲಿ, ಏಪ್ರಿಲ್ 8: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಈ ಕುರಿತು ರಾಜ್ಯಗಳ ಪರಿಸ್ಥಿತಿ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಕರೆದಿರುವ ಸಭೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ ಎಂದು ತಿಳಿದುಬಂದಿದೆ.
ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿರುವುದರಿಂದ ಪ್ರಧಾನಿ ಕರೆದ ಸಭೆಯಲ್ಲಿ ಭಾಗವಹಿಸುತ್ತಿಲ್ಲ ಎನ್ನಲಾಗಿದೆ.
ಸಭೆಯಲ್ಲಿ ಮುಖ್ಯಮಂತ್ರಿಗಳ ಬದಲಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರು ಉಪಸ್ಥಿತರಿರುತ್ತಾರೆ ಎಂದು ಮೂಲಗಳು ತಿಳಿಸಿವೆ. ಭಾರತದಲ್ಲಿ ಕೊರೊನಾ 2ನೇ ಅಲೆಯ ಪ್ರತಾಪ ಮುಂದುವರೆದಿದ್ದು, ಗುರುವಾರ ದೇಶದಲ್ಲಿ ದಾಖಲೆಯ 1.26 ಲಕ್ಷ ಜನರಿಗೆ ಕೊರನಾ ಸೋಂಕು ದೃಢಪಟ್ಟಿದೆ. ಇದು ದೇಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ಯಾವುದೇ ಒಂದು ದಿನದಲ್ಲಿ ದಾಖಲಾದ ಗರಿಷ್ಠ ಪ್ರಮಾಣವಾಗಿದೆ.

ಬುಧವಾರ 59,258 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೂ 1,18,51,393 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 685 ಮಂದಿ ಸಾವನ್ನಪ್ಪಿದ್ದು, ಇದುವರೆಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,66,862 ಆಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ನಲ್ಲಿ ಮಾಹಿತಿ ಹಂಚಿಕೊಂಡಿದೆ. ಬುಧವಾರ 1,26,789 ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,29,28,574ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ 9,10,319 ಆಗಿದೆ. ಜನವರಿ 16ರಿಂದ ಇದುವರೆಗೂ 9,01,98,673 ಜನರಿಗೆ ಕೊರೊನಾ ಲಸಿಕೆಗಳನ್ನು ನೀಡಲಾಗಿದೆ.












Click it and Unblock the Notifications