Bihar protest: ವಿದ್ಯುತ್ ಇಲಾಖೆಯ ವಿರುದ್ಧ ಪ್ರತಿಭಟನೆ ವೇಳೆ ಗುಂಡಿನ ದಾಳಿ, ಓರ್ವ ಬಲಿ
ವಿದ್ಯುತ್ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗುಂಪನ್ನು ಚದುರಿಸಲು ಪೊಲೀಸರು ಹಾರಿಸಿದ ಗುಂಡಿಗೆ ಓರ್ವ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡ ಘಟನೆ ಬಿಹಾರದ ಕತಿಹಾರ್ನಲ್ಲಿ ನಡೆದಿದೆ.
ಕತಿಹಾರ್ನ ಬರ್ಸೋಯಿ ಪಟ್ಟಣದ ಸಮೀಪವಿರುವ ಗ್ರಾಮದ ನಿವಾಸಿಗಳು ಅನಿಯಮಿತ ವಿದ್ಯುತ್ ಪೂರೈಕೆ ಮತ್ತು ಹೆಚ್ಚಿನ ವಿದ್ಯುತ್ ದರಗಳ ವಿರುದ್ಧ ವಿದ್ಯುತ್ ಇಲಾಖೆಯ ಹೊರಗೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು.

ಉದ್ರಿಕ್ತಗೊಂಡ ಪ್ರತಿಭಟನಾಕಾರರು ವಿದ್ಯುತ್ ಇಲಾಖೆಯ ಕಚೇರಿಗೆ ಕಲ್ಲು ತೂರಾಟ ನಡೆಸಿ ಧ್ವಂಸಗೊಳಿಸಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿ ಗುಂಡು ಹಾರಿಸಿ ಗುಂಪನ್ನು ಚದುರಿಸಲು ಪ್ರಯತ್ನಿಸಿದ್ದಾರೆ. ಆದರೆ ಪೋಲೀಸರು ಹಾರಿಸಿದ ಗುಂಡಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಇದ್ದಾರೆ.
ಪೊಲೀಸರ ಗುಂಡಿಗೆ ಬಲಿಯಾದ ವ್ಯಕ್ತಿಯನ್ನು ಮೊಹಮ್ಮದ್ ಖುರ್ಷಿದ್ (35) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಒಬ್ಬನನ್ನು ಪಶ್ಚಿಮ ಬಂಗಾಳದ ಸಿಲಿಗುರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಬ್ಬರಿಗೆ ಕತಿಹಾರ್ನ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜನಸಮೂಹವು ದೊಣ್ಣೆಗಳು ಮತ್ತು ಕಲ್ಲುಗಳು ಸೇರಿದಂತೆ ಪ್ರಾಚೀನ ಶಸ್ತ್ರಾಸ್ತ್ರಗಳನ್ನು ಹಿಡಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ದಾಳಿಯಲ್ಲಿ ವಿದ್ಯುತ್ ಇಲಾಖೆಯ ಸುಮಾರು 12 ಅಧಿಕಾರಿಗಳು ಗಾಯಗೊಂಡಿದ್ದಾರೆ.
ಭಾರತೀಯ ಜನತಾ ಪಕ್ಷವು (ಬಿಜೆಪಿ) ಘಟನೆಯ ಬಗ್ಗೆ ಪ್ರತಿಕ್ರಿಯಿಸಿ, ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಅವರು ಘಟನೆಯನ್ನು ಖಂಡಿಸಿದ್ದಾರೆ. ನಿತೀಶ್ ಕುಮಾರ್ ಅವರನ್ನು 1919 ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಬ್ರಿಟಿಷ್ ಅಧಿಕೃತ ಹೊಣೆಗಾರ ಜನರಲ್ ಡೈಯರ್ಗೆ ಹೋಲಿಸಿದ್ದಾರೆ.
"ಕತಿಹಾರ್ನಲ್ಲಿ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಬಿಹಾರದ ಜನರಲ್ ಡೈಯರ್ ಪ್ರತಿಭಟನಕಾರರ ಮೇಲೆ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಹಾರದಲ್ಲಿ ತಮ್ಮ ಹಕ್ಕುಗಳನ್ನು ಕೇಳುವ ಯುವಕರು, ಶಿಕ್ಷಕರು, ಸಾಮಾನ್ಯ ಜನರ ಮೇಲೆ ಗುಂಡು ಹಾರಿಸಿ, ಲಾಠಿ ಚಾರ್ಜ್ ಮಾಡಲಾಗಿದೆ. ಇತ್ತೀಚೆಗೆ ಬಿಜೆಪಿ ನಾಯಕರೊಬ್ಬರು ಕೂಡ ಹೊಡೆತದಿಂದ ಸತ್ತರು! ಇದು ಜನರಲ್ ನಿತೀಶ್ ಡೈಯರ್ ಮತ್ತು ಅವರ ತನಾಶಾಹಿ ಸರ್ಕಾರದ ನಿಜವಾದ ಮುಖವಾಗಿದೆ. ಇದು ಪ್ರಜಾಪ್ರಭುತ್ವವನ್ನು ಉಳಿಸುವುದೇ? ಅಥವಾ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದೆಯೇ? ಇದು I.N.D.I.A ಯ ಪ್ರಜಾಪ್ರಭುತ್ವದ ಕಲ್ಪನೆಯೇ? ಬಂಗಾಳದಿಂದ ಬಿಹಾರದವರೆಗೆ - ಬುಲೆಟ್, ಬಾಂಬ್, ಸ್ಫೋಟಿಸುವುದೇ?" ಎಂದು ಅವರು ಟ್ವೀಟ್ ಮಾಡಿದ್ದಾರೆ.
ಬಿಹಾರದ ವಿರೋಧ ಪಕ್ಷದ ನಾಯಕ ವಿಜಯ್ ಸಿನ್ಹಾ ಮತ್ತು ಮಾಜಿ ಉಪಮುಖ್ಯಮಂತ್ರಿ ತಾರಕಿಶೋರ್ ಪ್ರಸಾದ್ ಕೂಡ ತಮ್ಮ ಕ್ರಮಗಳನ್ನು ಹಿಟ್ಲರ್ನಂತಹ ಸರ್ವಾಧಿಕಾರಿ ಮತ್ತು ದಬ್ಬಾಳಿಕೆಯ ಆಡಳಿತಕ್ಕೆ ಹೋಲಿಸಿ ಸರ್ಕಾರವನ್ನು ಖಂಡಿಸಿದ್ದಾರೆ.












Click it and Unblock the Notifications