ಶಿಕ್ಷಕರ ಅರ್ಹತಾ ಪರೀಕ್ಷೆಯ ಆಕಾಂಕ್ಷಿಗಳ ಮೇಲೆ ಬಿಹಾರ ಪೊಲೀಸರ ಲಾಠಿಚಾರ್ಜ್
ಪಾಟ್ನಾ, ಡಿ. 13: ಬಿಹಾರದ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಮತ್ತು ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ) ಯ ಆಕಾಂಕ್ಷಿಗಳ ಮೇಲೆ ಬಿಹಾರ ಪೊಲೀಸರು ಮಂಗಳವಾರ ಪಾಟ್ನಾದಲ್ಲಿ ಲಾಠಿಚಾರ್ಜ್ ಮಾಡಿದ್ದಾರೆ.
ತಮ್ಮ ನೇಮಕಾತಿಗೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ಶಿಕ್ಷಕ ಹುದ್ದೆ ಆಕಾಂಕ್ಷಿಗಳ ಮೇಲೆ ಹಲ್ಲೆ ಮಾಡಲಾಗಿದೆ.
ಬಿಹಾರ ವಿಧಾನಸೌಧದ ಚಳಿಗಾಲದ ಅಧಿವೇಶನದ ಮೊದಲ ದಿನವೇ ಪೊಲೀಸರು ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರ ಈ ಕ್ರಮಕ್ಕೆ ಭಾರೀ ಟೀಕೆ ವ್ಯಕ್ತವಾಗಿದೆ.
ಏಳನೇ ಹಂತದ ನೇಮಕಾತಿ ಪುನಶ್ಚೇತನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸದ ಕಾರಣ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆ ಪ್ರತಿಭಟನೆ ನಡೆಸಲಾಗುತ್ತಿತ್ತು. ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರ ನಿರುದ್ಯೋಗಿ ಯುವಕರಿಗೆ 20 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿತ್ತು, ಹೀಗಾಗಿ ಏಳನೇ ಹಂತದ ನೇಮಕಾತಿಗಾಗಿ ಅಭ್ಯರ್ಥಿಗಳು ಕಾಯುತ್ತಿದ್ದರು.
ಆರು ಹಂತದ ನೇಮಕಾತಿಗಳು ಪೂರ್ಣಗೊಂಡ ನಂತರ ಶೀಘ್ರದಲ್ಲೇ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಉದ್ಯೋಗ ಆಕಾಂಕ್ಷಿಗಳು ನಿರೀಕ್ಷಿಸಿದ್ದರು. ಆದರೆ, ಎಂಟು ತಿಂಗಳು ಕಳೆದರೂ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗದ ಕಾರಣ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದರು.
#WATCH | Police lathi-charge aspirants qualified for Bihar Teachers’ Eligibility Test (TET) and Central Teachers’ Eligibility Test (CTET) holding protest against the state government demanding their recruitment, in Patna pic.twitter.com/G5aXGd2om9
— ANI (@ANI) December 13, 2022
ಏಳನೇ ಹಂತದ ನೇಮಕಾತಿ ಅಡಿಯಲ್ಲಿ ಪ್ರಾಥಮಿಕ ಮತ್ತು ಉನ್ನತ ಮಾಧ್ಯಮಿಕ ವರ್ಗದ ಶಿಕ್ಷಕರ ಎರಡು ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ.
ಟಿಇಟಿ ಮತ್ತು ಸಿಟಿಇಟಿ ಆಕಾಂಕ್ಷಿಗಳು ತಮ್ಮ ನೇಮಕಾತಿಗೆ ನಿರ್ಣಾಯಕವಾದ ಅಧಿಕೃತ ಅಧಿಸೂಚನೆಯನ್ನು ಹೊರಡಿಸುವಲ್ಲಿ ರಾಜ್ಯ ಸರ್ಕಾರವು ನಿರಂತರ ವಿಳಂಬ ಮಾಡುತ್ತಿದೆ. ತಮ್ಮ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಈ ಹಿಂದೆ ಆಗಸ್ಟ್ 22 ರಂದು, ಉದ್ಯೋಗಕ್ಕಾಗಿ ಒತ್ತಾಯಿಸಿ ಪಾಟ್ನಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಿಟಿಇಟಿ ಮತ್ತು ಬಿಟಿಇಟಿ ಅರ್ಹ ಅಭ್ಯರ್ಥಿಗಳ ಮೇಲೆಯೂ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು.