ಮತ್ತೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ - ಮಹಿಳಾ ಮೀಸಲಾತಿ ಕಾಯ್ದೆ ತಿದ್ದುಪಡಿಗೆ ಸಿದ್ಧತೆ: ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್!
ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ಮತ್ತೊಮ್ಮೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿದೆ. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕಾಯ್ದೆ ತಿದ್ದುಪಡಿಗೆ ಮತ್ತೊಮ್ಮೆ ಸಿದ್ಧತೆ ಮಾಡಿಕೊಳ್ಳುತ್ತಿರು ವಾಗಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಇದೇ ಜುಲೈ 20ರಂದು ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದೆ. ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು 543ರಿಂದ 850 ಕ್ಕೆ ಹೆಚ್ಚಿಸಲು ಮತ್ತು ಮಹಿಳೆಯರಿಗೆ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಹೊಸ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಮಂಡಿಸಲು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಇದೀಗ ಮತ್ತೊಮ್ಮೆ ಸರ್ಕಸ್ ಪ್ರಾರಂಭಿಸಿದೆ. ಮೂರನೇ ಎರಡರಷ್ಟು ಬಹುಮತವನ್ನು ಸಂಗ್ರಹಿಸುವ ಪ್ರಯತ್ನಗಳನ್ನು ಚುರುಕುಗೊಳಿಸಿದೆ ಎನ್ನಲಾಗಿದೆ. ಇನ್ನು ಬಿಜೆಪಿ ನೇತೃತ್ವದ ಎನ್ಡಿಎ ಈ ಹಿಂದೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಹಾಗೂ ಮಹಿಳಾ ಮೀಸಲಾತಿಗೆ ಸರ್ಕಾರ ಮುಂದಾಗಿತ್ತು. ಆದರೆ ಬಹುಮತವಿಲ್ಲದೆ ವಿಧೇಯಕಗಳಿಗೆ ಸೋಲಾಗಿತ್ತು. ಆದರೆ, ಇದೀಗ ತೃಣಮೂಲ ಕಾಂಗ್ರೆಸ್ ಪಕ್ಷದ ಹಲವು ಸಂಸದರು ಬಿಜೆಪಿಗೆ ಬೆಂಬಲ ಸೂಚಿಸಿದ್ದರೆ ಇದರೊಂದಿಗೆ ಮತ್ತೊಮ್ಮೆ ಬಿಲ್ಗಳ ಮಂಡನೆಗೆ ಬಿಜೆಪಿ ಮುಂದಾಗಿದೆ.

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ
ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರವು ಡಿಲಿಮಿಟೇಶನ್ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಮಾಡಿರುವ ಪರಿಷ್ಕರಣಾ ಪ್ರಸ್ತಾವನೆಗಳನ್ನು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವಂತೆ ಮತ್ತೊಮ್ಮೆ ಪ್ರಧಾನಿ ಮೋದಿ ಅವರಿಗೆ ನಾನು ಪತ್ರ ಬರೆದಿದ್ದೇನೆ ಎಂದು ಅವರು ಹೇಳಿದ್ದಾರೆ.
2026ರ ಮಾರ್ಚ್ ಮತ್ತು ಏಪ್ರಿಲ್ನಲ್ಲಿ ಕೇಂದ್ರ ಸರ್ಕಾರವು ಡಿಲಿಮಿಟೇಶನ್ ಇತ್ಯಾದಿಗಳ ಕುರಿತು ತನ್ನ ಪ್ರಸ್ತಾವನೆಗಳನ್ನು ಚರ್ಚಿಸಲು ಸರ್ವಪಕ್ಷ ಸಭೆ ಕರೆಯಬೇಕೆಂದು ವಿನಂತಿಸಿ ನಾನು ಸಂಸದೀಯ ವ್ಯವಹಾರಗಳ ಸಚಿವರಿಗೆ ಪತ್ರ ಬರೆಯುತ್ತಿದ್ದೆ. ದುರದೃಷ್ಟವಶಾತ್, ಈ ಬೇಡಿಕೆಗಳನ್ನು ಅವರು ಅಂಗೀಕರಿಸಲಿಲ್ಲ. ಬಳಿಕ 2026ರ ಏಪ್ರಿಲ್ 17ರಂದು ಲೋಕಸಭೆಯಲ್ಲಿ ಮಂಡಿಸಲಾದ ಸಂವಿಧಾನ (131ನೇ ತಿದ್ದುಪಡಿ) ಮಸೂದೆ, 2026 ಅಗತ್ಯವಿದ್ದ ಎರಡು-ಮೂರರಷ್ಟು (2/3) ಬಹುಮತವನ್ನು ಪಡೆಯಲು ವಿಫಲವಾಯಿತು ಎಂದು ಮಲ್ಲಿಕಾರ್ಜುನ್ ಖರ್ಗೆ ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರವು ಈಗ ಸಂಸತ್ತಿನ ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ಪರಿಷ್ಕೃತ (131 ನೇ ತಿದ್ದುಪಡಿ) ಮಸೂದೆ, 2026 ಅನ್ನು ಮತ್ತೆ ಮಂಡಿಸಲು ಪ್ರಸ್ತಾಪಿಸುತ್ತಿದೆ ಎಂದು ಮಾಧ್ಯಮ ವರದಿಗಳಲ್ಲಿ ಓದುತ್ತಿದ್ದೇನೆ. ಪ್ರಮುಖ ನಿರ್ಣಯಗಳ ಕುರಿತು ಸರ್ಕಾರದ ಪರಿಷ್ಕೃತ ಪ್ರಸ್ತಾವನೆಗಳನ್ನು ಚರ್ಚಿಸಲು ಸರ್ವಪಕ್ಷ ಸಭೆಯನ್ನು ಕರೆಯುವಂತೆ ಮತ್ತು ಸಂಸತ್ತಿನಲ್ಲಿ ಅವುಗಳನ್ನು ಪರಿಚಯಿಸುವ ಮೊದಲು ಅವುಗಳನ್ನು ವಿವರವಾಗಿ ಅಧ್ಯಯನ ಮಾಡಲು ನಮಗೆ ಸಾಕಷ್ಟು ಸಮಯವನ್ನು ನೀಡುವಂತೆ ನಾನು ಮತ್ತೊಮ್ಮೆ ವಿನಂತಿಸುತ್ತೇನೆ ಎಂದು ಮಲ್ಲಿಕಾರ್ಜುನ್ ಖರ್ಗೆ ಅವರು ಹೇಳಿದ್ದಾರೆ.













Click it and Unblock the Notifications