ಬಿಜೆಪಿ, ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ರೈತರನ್ನು ಮರೆತಿವೆ: ಎಎಪಿ ಆರೋಪ
ಬೆಂಗಳೂರು, ಸೆಪ್ಟಂಬರ್ 29: ರಾಜ್ಯದ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳು ಜ್ವಲಂತ ಸಮಸ್ಯೆಗಳ ಬಗ್ಗೆ ಚಿಂತಿಸುವ ಬದಲು ರಾಜಕೀಯ ಆರೋಪ, ಪ್ರತ್ಯಾರೋಪಗಳಲ್ಲಿ ನಿರತವಾಗಿವೆ. ಹೀಗಾಗಿಯೇ ನಾಡಿನ ಅನ್ನದಾತರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಬೇಸರ ವ್ಯಕ್ತಪಡಿಸಿದರು.
ಗುರುವಾರ ಆಮ್ ಆದ್ಮಿ ಪಕ್ಷ (ಎಎಪಿ) ಪಕ್ಷದ ವತಿಯಿಂದ ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಲಾಯಿತು. ನಂತರ ಸುದ್ದಿಗಾರರ ಜತೆಗೆ ಮಾತನಾಡಿದ ಪೃಥ್ವಿ ರೆಡ್ಡಿ ಅವರು, ಕರ್ನಾಟಕದಲ್ಲಿ ಅತಿವೃಷ್ಟಿಯಿಂದ 8.91 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ಬೆಳೆ ನಾಶವಾಗಿದೆ. ಇದರಿಂದ 12,319 ಕೋಟಿ ರೂ.ನಷ್ಟವಾಗಿದೆ ಎಂದು ರಾಜ್ಯ ಸರ್ಕಾರವು ವಿಧಾನಸಭೆಯಲ್ಲಿ ತಿಳಿಸಿದೆ ಎಂದರು.
ಅತೀವ ಮಳೆಯಿಂದಾಗಿ 12ಸಾವಿರ ಕೋಟಿಗೂ ಅಧಿಕ ಆರ್ಥಿಕ ನಷ್ಟವಾಗಿದ್ದರೆ ಕೇಂದ್ರ ಸರ್ಕಾರದಿಂದ ಕೇವಲ 1,646.05 ಕೋಟಿ ರೂ. ಹಣ ನೀಡಿದ್ದು, ಆನೆಯ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಆಗಿದೆ. ಕೇಂದ್ರ ಸರ್ಕಾರವು ಸೂಕ್ತ ಪರಿಹಾರ ನೀಡಲು ನಿರಾಕರಿಸಿದ್ದರೂ ರಾಜ್ಯ ಸರ್ಕಾರವು ಮೌನವಹಿಸಿದೆ. ಅದಲ್ಲದೆ ಬಿಜೆಪಿ ಸರ್ಕಾರ ಬೆಂಗಳೂರಿನಲ್ಲಿ ಉಂಟಾದ ಪ್ರವಾಹವನ್ನೂ ಸಮರ್ಪಕವಾಗಿ ನಿರ್ವಹಿಸುವಲ್ಲಿ ಸಹ ವಿಫಲವಾಗಿತ್ತು ಎಂದು ಅವರು ಆರೋಪಿಸಿದರು.

ಕಳೆದ ಮೂರು ವರ್ಷಗಳಲ್ಲಿ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಐದು ಲಕ್ಷ ಪರಿಹಾರ ನೀಡುವ ಬಿಜೆಪಿ ಸರ್ಕಾರದ ಘೋಷಣೆಯು ಕೇವಲ ಘೋಷಣೆಯಾಗಿಯೇ ಉಳಿದಿದೆ. ಸಂತ್ರಸ್ತರ ಪೈಕಿ ಅನೇಕರಿಗೆ ಕೇವಲ ಒಂದು ಲಕ್ಷ ರೂಪಾಯಿ ಮಾತ್ರ ಸಿಕ್ಕಿದೆ. ಬೆರಳೆಣಿಕೆಯ ಮಂದಿಗೆ ಮಾತ್ರ ಐದು ಲಕ್ಷ ರೂ. ಪರಿಹಾರ ಸಿಕ್ಕಿದೆ. ಅನೇಕ ಕುಟುಂಬಗಳು ಮನೆಯಿಲ್ಲದೇ ಟೆಂಟ್ಗಳಲ್ಲಿ, ದೇವಸ್ಥಾನಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ವಾಸಿಸುತ್ತಿದ್ದಾರೆ. ಆದರೆ ಸರ್ಕಾರ ಈ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆರೋಪ, ಪ್ರತ್ಯಾರೋಪಗಳಲ್ಲಿ ಮುಳುಗಿದೆ ಎಂದರು.
ಲಂಚ ನೀಡದ್ದರಿಂದ ರೈತರಿಗೆ ಪರಿಹಾರ ತಲುಪುತ್ತಿಲ್ಲ
ಇದೇ ವೇಳೆ ಎಎಪಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಮಾತನಾಡಿ, "ರಾಜ್ಯ ಸರ್ಕಾರ ನೀಡುತ್ತಿರುವ ಬೆಳೆ ಪರಿಹಾರ ಧನವು ಹಲವು ರೈತರಿಗೆ ತಲುಪುತ್ತಿಲ್ಲ. ರೈತರು ಲಂಚ ನೀಡಲು ನಿರಾಕರಿಸಿದ ಕಾರಣಕ್ಕೆ ಸ್ಥಳೀಯ ಅಧಿಕಾರಿಗಳು ಸರ್ವೇ ಮಾಡಿ ಮಾಹಿತಿಯನ್ನು ಸರ್ಕಾರದ ಆ್ಯಪ್ನಲ್ಲಿ ಹಾಕಲು ಮೀನಾಮೇಷ ಎಣಿಸುತ್ತಿದ್ದಾರೆ. ಜತೆಗೆ ಸರ್ಕಾರದ ಕಠಿಣ ಮಾನದಂಡಗಳಿಂದ ಸಂತ್ರಸ್ತ ರೈತರಿಗೆ ಪರಿಹಾರ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ," ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ ನಾಡಿನ ಸಂತ್ರಸ್ತರಿಗೆ ಪರಿಹಾರ ದೊರಕಿಸಿ ಕೊಡುವಲ್ಲಿ ಕರ್ನಾಟಕದ ಕೇಂದ್ರ ಸಚಿವರು ಹಾಗೂ ಸಂಸದರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇತ್ತೀಚೆಗೆ ಬಂದಿದ್ದ ಕೇಂದ್ರ ಪರಿಶೀಲನಾ ತಂಡವು ಸಮರ್ಪಕ ಸಮೀಕ್ಷೆ ನಡೆಸದೇ ಹಿಂದಿರುಗಿದೆ. ಕೇಂದ್ರ ಸರ್ಕಾರವು 2021-22 ಹಾಗೂ 2022-23ರಲ್ಲಿ 14,100 ಕೋಟಿ ರೂ. ಸರಕು ಸೇವಾ ತೆರಿಗೆ (ಜಿಎಸ್ಟಿ) ಬಾಕಿ ಉಳಿಸಿಕೊಂಡಿದೆ. ಕೇಂದ್ರದೊಂದಿಗೆ ಮಾತುಕತೆ ನಡೆಸಿ ಈ ಮೊತ್ತವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಸಿಕೊಳ್ಳಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿಲ್ಲ ಎಂದರು.












Click it and Unblock the Notifications