Maharashtra Elections 2024: ಕಾಂಗ್ರೆಸ್ನಿಂದ ಬಿಜೆಪಿಗೆ ಸಿಕ್ತು ದೊಡ್ಡ ರಾಜಕೀಯ ಅಸ್ತ್ರ, ಏನದು
ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಈ ತೀರ್ಪು ಕಾಂಗ್ರೆಸ್ಗೆ ಕರ್ನಾಟಕದಲ್ಲಿ ಮಾತ್ರವಲ್ಲ ಭಾರತದ ವಿವಿಧ ರಾಜ್ಯಗಳ ಚುನಾವಣೆಯ ಮೇಲೂ ಪ್ರಭಾವ ಬೀರುವ ಸಾಧ್ಯತೆ ಇದೆ. ಇನ್ನು ಕೆಲವೇ ದಿನಗಳಲ್ಲಿ ದೇಶದ ನಾಲ್ಕು ಪ್ರಮುಖ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ವಿಷಯವನ್ನೇ ಪ್ರಧಾನ ಅಸ್ತ್ರವನ್ನಾಗಿ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳು ಬಳಸಿಕೊಳ್ಳುವ ಸಾಧ್ಯತೆ ಇದೆ.
ದೇಶದ ನಾಲ್ಕು ಪ್ರಮುಖ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕಾಂಗ್ರೆಸ್ ಕೆಲವು ಕಡೆ ಮುನ್ನಡೆಯನ್ನು ಸಾಧಿಸಿಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಮೊದಲು ಪರಿಚಯಿಸಿದ್ದ ಗ್ಯಾರಂಟಿ ಯೋಜನೆಗಳನ್ನೇ ಕಾಂಗ್ರೆಸ್ ಇದೀಗ ಉತ್ತರ ಭಾರತದ ರಾಜ್ಯಗಳಲ್ಲೂ ಪ್ರಣಾಳಿಕೆಗಳಲ್ಲಿ ಘೋಷಿಸಿದೆ. (ಆಯಾ ರಾಜ್ಯಕ್ಕೆ ಅನುಗುಣವಾಗಿ) ಈಗಾಗಲೇ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಕರ್ನಾಟಕ ಮಾಡೆಲ್ ಅನ್ನು ಬಳಸಿಕೊಂಡಿಯೇ ದೇಶದಲ್ಲಿ ಮುನ್ನಡೆ ಸಾಧಿಸಲು ಕಾಂಗ್ರೆಸ್ ಮುಂದಾಗಿತ್ತು. ಆದರೆ, ಮುಡಾ ಹಗರಣ, ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಪ್ರಕರಣಗಳಿಂದ ಕಾಂಗ್ರೆಸ್ಗೆ ಹಿನ್ನಡೆ ಆಗಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೋರ್ಟ್ನಲ್ಲಿ ಪ್ರಾರಂಭಿಕ ಹಂತದ ಹಿನ್ನಡೆಯಾಗಿದೆ.

ಯಾವ ರಾಜ್ಯದಲ್ಲಿ ನಡೆಯಲಿದೆ ವಿಧಾನಸಭೆ ಚುನಾವಣೆ
ದೇಶದ ಪ್ರಮುಖ ರಾಜ್ಯಗಳಲ್ಲಿ ಇನ್ನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಭಾರತದ ಪ್ರಮುಖ ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ದೇಶದ ಪ್ರಮುಖ ರಾಜ್ಯವಾಗಿರುವ ಮಹಾರಾಷ್ಟ್ರದಲ್ಲೂ ಚುನಾವಣೆ ಸಿದ್ಧತೆ ನಡೆದಿದೆ. ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ - ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿವೆ. ಆದರೆ, ಇದೀಗ ಕರ್ನಾಟಕದ ಬೆಳವಣಿಗೆಯೇ ಈ ರಾಜ್ಯಗಳಲ್ಲಿ ಚುನಾವಣಾ ವಿಷಯವಾಗುವ ಸಾಧ್ಯತೆ ದಟ್ಟವಾಗಿದೆ. ಈ ನಾಲ್ಕು ರಾಜ್ಯಗಳಿಗೆ ಸಂಬಂಧಿಸಿದಂತ ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಮೊದಲ ಹಂತದ ಚುನಾವಣೆ ಮುಗಿದಿದೆ. ಕರ್ನಾಟಕದ ಬೆಳವಣಿಗೆಯಿಂದ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಕರ್ನಾಟಕದ ವಿಷಯ ಚರ್ಚಿಸುತ್ತಿರುವ ಮೋದಿ
ಕರ್ನಾಟಕದ ಪ್ರತಿ ಸಣ್ಣ ವಿಷಯವನ್ನು ಸಹ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಗಳಲ್ಲಿ ಪ್ರಸ್ತಾಪಿಸುತ್ತಿದ್ದಾರೆ. ಕರ್ನಾಟಕದಿಂದ ಭ್ರಷ್ಟಾಚಾರದ ಹಾಗೂ ನಾಯಕರ ಕಿತ್ತಾಟದ ಸುದ್ದಿಗಳು ಪ್ರತಿದಿನ ಬರುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಚುನಾವಣಾ ಪ್ರಚಾರವೊಂದರಲ್ಲಿ ಹೇಳಿದ್ದರು. ಈಚೆಗೆ ಮಹಾರಾಷ್ಟ್ರದ ಸಮಾರಂಭವೊಂದರಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕದಲ್ಲಿ ಗಣೇಶನನ್ನು ಕಂಬಿಗಳ ಹಿಂದೆ ಕಳುಹಿಸಿದ್ದಾರೆ. ಗಣೇಶನ ಆರಾಧನೆ ಮಾಡುವವರನ್ನು ಈ ಹಿಂದ ಬ್ರಿಟಿಷರು ದ್ವೇಷಿಸುತ್ತಿದ್ದರು.
ಇದೀಗ ಕಾಂಗ್ರೆಸ್ ಆ ಪ್ರವೃತ್ತಿಯನ್ನು ಮುಂದುವರಿಸುತ್ತಿದೆ ಎಂದು ಕಿಡಿಕಾರಿದ್ದರು. ಈಗ ಕಾಂಗ್ರೆಸ್ನ ಪ್ರಮುಖ ನಾಯಕ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ರಾಜ್ಯಪಾಲರ ನಿರ್ಧಾರವನ್ನು ಇದೀಗ ಹೈಕೋರ್ಟ್ ಸಹ ಸಮ್ಮತಿಸಿದೆ. ಹಗರಣದಲ್ಲಿ ಆರೋಪಿಯಾಗಿರುವ ಸಿ.ಎಂ ಕರ್ನಾಟಕದಲ್ಲಿ ಇದ್ದಾರೆ ಎಂದು ಬಿಜೆಪಿ ನಾಯಕರು ಈ ಚುನಾವಣಾ ಪ್ರಚಾರಗಳಲ್ಲಿ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.












Click it and Unblock the Notifications