ಪುದುಚೇರಿ ರಾಜಕೀಯ ಬಿಕ್ಕಟ್ಟಿನ ಹಿಂದೆ ಬಿಜೆಪಿ: ಸಿಎಂ ಆರೋಪ
ಪುದುಚೇರಿ, ಫೆಬ್ರವರಿ.18: ಪುದುಚೇರಿ ವಿಧಾನಸಭಾ ಚುನಾವಣೆಗೆ ಕೆಲವೇ ಕೆಲವು ತಿಂಗಳು ಬಾಕಿ ಇರುವಂತೆ ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜಕೀಯ ಬಿಕ್ಕಟ್ಟಿನ ಹಿಂದೆ ಭಾರತೀಯ ಜನತಾ ಪಕ್ಷದ ಕೈವಾಡವಿದೆ ಎಂದು ಮುಖ್ಯಮಂತ್ರಿ ವಿ. ನಾರಾಯಣಸಾಮಿ ಆರೋಪಿಸಿದ್ದಾರೆ.
ಫೆಬ್ರವರಿ.22ರ ಸಂಜೆ 5 ಗಂಟೆಗೆ ವಿಶ್ವಾಸ ಮತಯಾಚನೆ ನಡೆಸುವಂತೆ ಲೆಫ್ಟಿನೆಂಟ್ ಗವರ್ನರ್ ಡಾ. ತಮಿಳುಸಾಯಿ ಸುಂದರ್ ರಾಜನ್ ಆದೇಶಿಸಿದ್ದಾರೆ. ಈ ಹಿನ್ನೆಲೆ ಪಕ್ಷದ ಶಾಸಕರ ಜೊತೆಗೆ ಗುರುವಾರ ಸಿಎಂ ನಾರಾಯಣಸಾಮಿ ಸಭೆ ನಡೆಸಿದರು.
ವಿಶ್ವಾಸ ಮತಯಾಚನೆ ಬಗ್ಗೆ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆಯಾದರೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ನಮ್ಮ ಮಿತ್ರಪಕ್ಷ ಡಿಎಂಕೆ ಜೊತೆಗೂ ಸಂಪರ್ಕದಲ್ಲಿದ್ದೇವೆ. ಫೆಬ್ರವರಿ.21ರಂದು ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ನಾರಾಯಣಸಾಮಿ ಹೇಳಿದ್ದಾರೆ.

ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಆರೋಪ:
ಪುದುಚೇರಿಯಲ್ಲಿ ಸೃಷ್ಟಿಯಾಗಿರುವ ರಾಜಕೀಯ ಬಿಕ್ಕಟ್ಟಿನ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಮುಖ್ಯಮಂತ್ರಿ ನಾರಾಯಣಸಾಮಿ ಆರೋಪಿಸಿದ್ದಾರೆ. ಪ್ರಜಾಸತ್ತಾತ್ಮಕವಾಗಿ ಆಯ್ಕೆ ಆಗಿರುವ ಸರ್ಕಾರವನ್ನು ಉರುಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸಮಾಧಿ ಮಾಡುವುದಕ್ಕೆ ಹೊರಟಿದ್ದಾರೆ ಎಂದು ದೂಷಿಸಿದ್ದಾರೆ.
ಪುದುಚೇರಿಯಲ್ಲಿ ಸರ್ಕಾರ ಪತನ ಭೀತಿ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಇಬ್ಬರು ಸಚಿವರು ಮತ್ತು ನಾಲ್ವರು ಶಾಸಕರು ರಾಜೀನಾಮೆ ಸಲ್ಲಿಸಿದ ನಂತರವೂ ಮುಖ್ಯಮಂತ್ರಿ ನಾರಾಯಣಸ್ವಾಮಿಯವರು ಅಧಿಕಾರವನ್ನು ಆಸ್ವಾದಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಒಟ್ಟು 28 ಶಾಸಕರಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ 14 ಶಾಸಕರ ಬೆಂಬಲವಿದ್ದು, ವಿರೋಧ ಪಕ್ಷದಲ್ಲಿಯೂ ಬಿಜೆಪಿಯ ಮೂವರು ನಾಮನಿರ್ದೇಶಕ ಸದಸ್ಯರು ಸೇರಿದಂತೆ 14 ಮಂದಿ ಸದಸ್ಯರ ಬೆಂಬಲವಿದೆ. ಈ ಹಿನ್ನೆಲೆ ಅಲ್ಪಮತಕ್ಕೆ ಕುಸಿದ ಸರ್ಕಾರದ ಮುಖ್ಯಮಂತ್ರಿ ರಾಜೀನಾಮೆ ಸಲ್ಲಿಸಲಿ ಎಂದು ವಿರೋಧ ಪಕ್ಷದ ನಾಯಕ ರಂಗಸ್ವಾಮಿ ಹೇಳಿದ್ದರು.
ವಿಧಾನಸಭೆಯಲ್ಲಿ ಸದಸ್ಯ ಬಲದ ಲೆಕ್ಕಾಚಾರ:
ಕಾಂಗ್ರೆಸ್ ಶಾಸಕ ನೀಡಿದ ರಾಜೀನಾಮೆಯಿಂದ ಚುನಾವಣೆ ಹೊಸ್ತಿಲಿನಲ್ಲೇ ಸರ್ಕಾರಕ್ಕೆ ಮತ್ತೊಂದು ಆಘಾತ ನೀಡಿದಂತಾಗಿದೆ. ಸರ್ಕಾರವು ಅಲ್ಪಮತಕ್ಕೆ ಕುಸಿಯುವ ಆತಂಕ ಎದುರಾಗಿದೆ. 30 ಶಾಸಕ ಸ್ಥಾನ ಬಲವಿರುವ ವಿಧಾನಸಭೆಯಲ್ಲಿ ಕಾಂಗ್ರೆಸ್ 11, ಡಿಎಂಕೆ 3 ಮತ್ತು ಒಬ್ಬ ಪಕ್ಷೇತರ ಶಾಸಕನ ಬೆಂಬಲದಿಂದ ಸರ್ಕಾರ ರಚಿಸಲಾಗಿತ್ತು. ವಿರೋಧ ಪಕ್ಷವಾಗಿ ಎನ್ ಆರ್ ಕಾಂಗ್ರೆಸ್ 7, ಎಐಎಡಿಎಂಕೆ 4 ಮತ್ತು ಬಿಜೆಪಿಯ ಮೂವರು ನಾಮನಿರ್ದೇಶಿತ ಶಾಸಕರಿದ್ದು, 14 ಸದಸ್ಯ ಬಲವನ್ನು ಹೊಂದಿದೆ.












Click it and Unblock the Notifications