Maharashtra Election 2024: ಮುಂಬೈನಲ್ಲಿ ಬಿಜೆಪಿ ಸಭೆ, ಅಜಾದ್ ಮೈದಾನಕ್ಕೆ ಮಹಾಯತಿ ನಾಯಕರ ಭೇಟಿ
ಮುಂಬೈ, ಡಿಸೆಂಬರ್ 03: ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ಯಾವಾಗ?, ಮುಖ್ಯಮಂತ್ರಿ ಯಾರು?, ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಸಚಿವ ಸ್ಥಾನ ಸಿಗಲಿದೆಯೇ? ಈ ಎಲ್ಲಾ ಪ್ರಶ್ನೆಗೆ ಮಂಗಳವಾರ ಸಂಜೆ ಉತ್ತರ ಸಿಗುವ ನಿರೀಕ್ಷೆ ಇದೆ. ಡಿಸೆಂಬರ್ 5ರಂದು ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿಯಾಗುವ ಬಿಜೆಪಿ ನಾಯಕ ಯಾರು? ಎಂಬುದು ಇನ್ನೂ ರಹಸ್ಯವಾಗಿಯೇ ಉಳಿದಿದೆ.
2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿರುವ 'ಮಹಾಯತಿ' ಮೈತ್ರಿಕೂಟ ಹೊಸ ಸರ್ಕಾರ ರಚನೆ ಮಾಡಲಿದೆ. ರಾಜ್ಯದಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 145. 'ಮಹಾಯತಿ' ಮೈತ್ರಿಕೂಟ 230 ಶಾಸಕರ ಬಲ ಹೊಂದಿದೆ. ಆದರೆ ಸರ್ಕಾರ ಮನ್ನಡೆಸುವ ಮುಖ್ಯಮಂತ್ರಿ ಯಾರು?.

ಮಂಗಳವಾರ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷ ಸಭೆಯಲ್ಲಿ 132 ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದಾರೆ. ಈ ಸಭೆಗೆ ಕೇಂದ್ರ ಬಿಜೆಪಿ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನೇಮಿಸಿದೆ. ಶಾಸಕಾಂಗ ಪಕ್ಷದ ಸಭೆಗೂ ಮೊದಲು ಮುಂಬೈ ಬಿಜೆಪಿ ಕಛೇರಿಯಲ್ಲಿ ಮಹತ್ವದ ಸಭೆ ಸದ್ಯ ನಡೆಯುತ್ತಿದೆ.
ಮಹಾಯತಿ ನಾಯಕರ ಭೇಟಿ: ಮುಂಬೈನ ಆಜಾದ್ ಮೈದಾನದಲ್ಲಿ ಡಿಸೆಂಬರ್ 5ರಂದು ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವಂಕುಲೆ ಘೋಷಣೆ ಮಾಡಿದ್ದಾರೆ. ಸಮಾರಂಭದ ಸಿದ್ಧತೆಗಳು ಆರಂಭವಾಗಿದ್ದು, ಮಂಗಳವಾರ ಮಹಾಯತಿ ಮೈತ್ರಿಕೂಟದ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಸೇನೆ (ಏಕನಾಥ್ ಶಿಂಧೆ ಬಣ) ನಾಯಕ ಸಂಜಯ್ ಶಿರ್ಸಾಟ್ ಮಾತನಾಡಿ, "ಪ್ರಮಾಣ ವಚನ ಸಮಾರಂಭ ಅದ್ದೂರಿಯಾಗಿ ನಡೆಯಲಿದೆ. ಏಕನಾಥ್ ಶಿಂಧೆ ಸರ್ಕಾರದ ಭಾಗವಾಗಲಿದ್ದಾರೆಯೇ? ಎಂದು ಸಂಜೆ ತಿಳಿಯಲಿದೆ. ಸಂಜೆ ನಾವು ಸಹ ಸಭೆ ಕರೆದಿದ್ದೇವೆ" ಎಂದು ಹೇಳಿದರು.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 132 ಸೀಟುಗಳಲ್ಲಿ ಗೆದ್ದು ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 145. 'ಮಹಾಯತಿ' ಮೈತ್ರಿಕೂಟದ ಬೆಂಬಲದಿಂದ ಬಿಜೆಪಿ ಸರ್ಕಾರ ರಚಿಸಲಿದೆ. ಮೈತ್ರಿಕೂಟದಲ್ಲಿ ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್ಸಿಪಿ (ಅಜಿತ್ ಪವಾರ್ ಬಣ) 41 ಸೀಟುಗಳನ್ನು ಹೊಂದಿವೆ.
ಮಹಾರಾಷ್ಟ್ರ ವಿಧಾನಸಭೆ ಅವಧಿ ಕಳೆದ ಮಂಗಳವಾರಕ್ಕೆ ಅಂತ್ಯಗೊಂಡಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜೀನಾಮೆ ನೀಡಿದ್ದಾರೆ. ಹಂಗಾಮಿ ಮುಖ್ಯಮಂತ್ರಿಯಾಗಿ ಅವರು ಮುಂದುವರೆಯಲು ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಬಿಜೆಪಿಯಿಂದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ನಾಯಕನಿಗೆ ನಮ್ಮ ಬೆಂಬಲವಿದೆ ಎಂದು ಏಕನಾಥ್ ಶಿಂಧೆ, ಎನ್ಸಿಪಿ ನಾಯಕ ಅಜಿತ್ ಪವಾರ್ ಹೇಳಿದ್ದಾರೆ.
ಏಕನಾಥ್ ಶಿಂಧೆ ತಮಗೆ ಗೃಹ ಖಾತೆ ಬೇಕು ತಮ್ಮ ಪುತ್ರ ಕಲ್ಯಾಣ್ ಕ್ಷೇತ್ರದ ಸಂಸದ ಶ್ರೀಕಾಂತ್ ಶಿಂಧೆಗೆ ಉಪ ಮುಖ್ಯಮಂತ್ರಿ ಪಟ್ಟ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಶ್ರೀಕಾಂತ್ ಶಿಂಧೆ ಇದನ್ನು ತಳ್ಳಿಹಾಕಿದ್ದು, ರಾಜ್ಯ ರಾಜಕೀಯದಲ್ಲಿ ಯಾವುದೇ ಹುದ್ದೆ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪ್ರಬಲವಾಗಿ ಕೇಳಿ ಬರುತ್ತಿರುವ ಹೆಸರು ದೇವೇಂದ್ರ ಫಡ್ನವೀಸ್. ಆರ್ಎಸ್ಎಸ್ ಸಹ ಇದಕ್ಕೆ ಒಪ್ಪಿಗೆ ನೀಡಿದೆ. ಸಂಜೆ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಕುರಿತು ಕೇಂದ್ರ ವೀಕ್ಷಕರ ಸಮ್ಮುಖದಲ್ಲಿ ಅಧಿಕೃತ ಘೋಷಣೆ ನಿರೀಕ್ಷೆ ಮಾಡಲಾಗಿದೆ.
ಆದರೆ ಮಹಾಯತಿ ಮೈತ್ರಿಕೂಟದ ಸೀಟು ಹಂಚಿಕೆ ಕುರಿತು ಇನ್ನೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಬಿಜೆಪಿ ಯಾವ-ಯಾವ ಖಾತೆ ಇಟ್ಟುಕೊಳ್ಳಲಿದೆ. ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ)ಕ್ಕೆ ಸಿಗುವ ಖಾತೆಗಳು ಯಾವುದು? ಇನ್ನೂ ನಿಗೂಢವಾಗಿದೆ.












Click it and Unblock the Notifications