ತನ್ನ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪ್ರಿಯಾಂಕಾ ಗಾಂಧಿಗೆ ಬ್ರಿಜ್ ಭೂಷಣ್ ಸಿಂಗ್ ಸವಾಲು
ಲಕ್ನೋ, ಜುಲೈ. 14: ಕಳೆದ ಕೆಲವು ತಿಂಗಳುಗಳಿಂದ ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ್ದು ಕುಸ್ತಿಪಟುಗಳ ಪ್ರತಿಭಟನೆ ಮತ್ತು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್. ಕೆಲವು ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಸವಾಲು ಹಾಕಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತನ್ನ ವಿರುದ್ಧ ಸ್ಪರ್ಧಿಸುವ ಧೈರ್ಯ ಮಾಡುವಂತೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಸವಾಲು ಹಾಕಿದ್ದಾರೆ. ಜೊತೆಗೆ ಪ್ರಿಯಾಂಕಾ ಗಾಂಧಿ ಅವರ ಟ್ವೀಟ್ "ದೇಶವನ್ನು ದಾರಿ ತಪ್ಪಿಸುವ ಪಿತೂರಿ" ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಬಹಿರಂಗ ಪತ್ರದಲ್ಲಿ, ಕೈಸರ್ಗಂಜ್ ಸಂಸದೀಯ ಸ್ಥಾನವನ್ನು ಪ್ರತಿನಿಧಿಸುವ ಬ್ರಿಜ್ ಭೂಷಣ್ ಶರಣ್ ಸಿಂಗ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ತಮ್ಮ ವಿರುದ್ಧದ ಪಿತೂರಿಯ ಹಿಂದೆ ಇದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಈ ಹಿಂದೆಯೂ ಭೂಪಿಂದರ್ ಸಿಂಗ್ ಹೂಡಾ ವಿರುದ್ಧ ಇದೇ ರೀತಿಯ ಆರೋಪ ಮಾಡಿದ್ದರು. ಬ್ರಿಜ್ ಭೂಷಣ್ ಸಿಂಗ್ ಅವರ ಟೀಕೆಗಳು ಪ್ರಿಯಾಂಕಾ ಗಾಂಧಿ ಅವರ ಟ್ವಿಟ್ಟರ್ ಪೋಸ್ಟ್ ಬಳಿಕ ಬಂದಿವೆ. ತಮ್ಮ ಟ್ವೀಟ್ನಲ್ಲಿ ಪ್ರಿಯಾಂಕಾ ಗಾಂಧಿ ಬಿಜೆಪಿ ಸಂಸದರನ್ನು ತನ್ನ ಸ್ಥಾನದಿಂದ ತೆಗೆಯಬೇಕು ಮತ್ತು ಅವರ ಬಂಧನದ ಜೊತೆಗೆ ನ್ಯಾಯಯುತ ತನಿಖೆಯನ್ನು ನಡೆಸಬೇಕು ಎಂದು ಒತ್ತಾಯಿಸಿದ್ದರು.

"ಪ್ರಿಯಾಂಕಾ ಗಾಂಧಿಯವರ ಟ್ವೀಟ್ ದೇಶವನ್ನು ದಾರಿ ತಪ್ಪಿಸುವ ಪಿತೂರಿಯಾಗಿದೆ. ಪೊಲೀಸ್ ತನಿಖಾ ವರದಿಯ ಆಧಾರದ ಮೇಲೆ ಕಾನೂನು ಯಾರನ್ನೂ ಅಪರಾಧಿ ಎಂದು ಪರಿಗಣಿಸುವುದಿಲ್ಲ. ಇದು ನ್ಯಾಯಾಲಯಗಳ ವಿಶೇಷ ಹಕ್ಕು. ನಮ್ಮ ವಾದವನ್ನು ನ್ಯಾಯಾಲಯದಲ್ಲಿ ಮಂಡಿಸುವ ಹಕ್ಕನ್ನು ಸಂವಿಧಾನ ನಮಗೆ ನೀಡಿದೆ" ಎಂದು ಪೋಸ್ಟ್ನಲ್ಲಿ ಬರೆದಿದ್ದಾರೆ.
कानून और नैतिकता कहती है कि महिलाओं के साथ अत्याचार करने वाले आरोपी को उसके पद से हटाया जाए, निष्पक्ष जांच हो, गिरफ्तारी हो और अदालत में उसे सजा दिलवाई जाए।
— Priyanka Gandhi Vadra (@priyankagandhi) July 11, 2023
लेकिन भाजपा सरकार में देश का मान बढ़ाने वाली महिला खिलाड़ियों के साथ अत्याचार करने वाले आरोपी को बचाया क्यों जाता है,…
ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ಗೆ ನ್ಯಾಯಾಲಯಗಳ ಮೇಲೆ ನಂಬಿಕೆ ಇಲ್ಲ ಎಂದು ತೋರುತ್ತಿದೆ ಮತ್ತು ಅದಕ್ಕಾಗಿಯೇ ಅವರು ಪ್ರತಿ ಪ್ರಕರಣದಲ್ಲೂ ಮಾಧ್ಯಮ ವಿಚಾರಣೆಯನ್ನು ಬಯಸುತ್ತಾರೆ ಎಂದು ಆರೋಪಿಸಿದ್ದಾರೆ.

"ಮಹಿಳೆಯರ ಮೇಲಿನ ದೌರ್ಜನ್ಯದ ಆರೋಪಿಗಳನ್ನು ಹುದ್ದೆಯಿಂದ ವಜಾಗೊಳಿಸಬೇಕು, ನ್ಯಾಯಯುತ ತನಿಖೆ ನಡೆಸಬೇಕು, ಬಂಧಿಸಬೇಕು ಮತ್ತು ನ್ಯಾಯಾಲಯದಲ್ಲಿ ಶಿಕ್ಷೆಗೆ ಗುರಿಯಾಗಬೇಕು ಎಂದು ಕಾನೂನು ಮತ್ತು ನೈತಿಕತೆ ಹೇಳುತ್ತದೆ. ಆದರೆ ಬಿಜೆಪಿ ಸರಕಾರದಲ್ಲಿ ದೇಶಕ್ಕೆ ಕೀರ್ತಿ ತಂದ ಮಹಿಳಾ ಕ್ರೀಡಾ ಪಟುಗಳಿಗೆ ಚಿತ್ರಹಿಂಸೆ ನೀಡಿದ ಆರೋಪಿಗಳಿಗೆ ರಕ್ಷಣೆ ನೀಡಿದ್ದು ಏಕೆ, ಈ ವಿಷಯದಲ್ಲಿ ಇಡೀ ಸರ್ಕಾರ ವಿಷಯವನ್ನು ದಮನ ಮಾಡುತ್ತಿರುವುದು ಏಕೆ, ತನಿಖೆಯಲ್ಲಿ ಗುಟ್ಟಾಗಿಟ್ಟಿರುವುದು ಏಕೆ..?" ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.
ಇನ್ನು, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ನೀಡಿದೆ. ಆರೋಪಿ ವಿರುದ್ಧ ಪ್ರಕರಣ ಮುಂದುವರಿಸಲು ಸಾಕಷ್ಟು ಸಾಕ್ಷ್ಯಗಳಿವೆ ಎಂದು ಕೋರ್ಟ್ ಹೇಳಿದೆ.
ಚಾರ್ಜ್ ಶೀಟ್ ಅನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರು ಜುಲೈ 18 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಸೂಚಿಸಿದ್ದಾರೆ. ಉದರ ಜೊತೆಗೆ ಭಾರತ ಕುಸ್ತಿ ಫೆಡರೇಶನ್ನ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ಗೂ ನ್ಯಾಯಾಲಯ ಸಮನ್ಸ್ ನೀಡಿದೆ.












Click it and Unblock the Notifications